ಕನ್ನಡಪ್ರಭ ವಾರ್ತೆ ಬೆಳಗಾವಿಸ್ಮಾರ್ಟ್ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಂದಲೇ ಮಳೆ ಸುರಿಯುತ್ತಿದ್ದಂತೆ ನಗರದಲ್ಲಿ ಸಮಸ್ಯೆಗಳು ಉದ್ಬವಿಸಲು ಪ್ರಮುಖ ಕಾರಣವಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಪಿ.ಎನ್.ಲೋಕೇಶ್ ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಸುರಿದ ಮಳೆಯಿಂದಾಗಿ ಚರಂಡಿಗಳು ಬ್ಲಾಕ್ ಆಗಿ ರಸ್ತೆಗಳ ಮೇಲೆ ನೀರು ಹರಿದಿದೆ. ಅಲ್ಲದೆ, ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಮಳೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸುವ ಕೆಲಸವನ್ನು ಪಾಲಿಕೆ ಸಿಬ್ಬಂದಿ ಮಾಡುತ್ತಿದ್ದಾರೆ. ಎಲ್ಲ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲಾಗಿದೆ ಎಂದರು.
ಬೆಳಗಾವಿ ನಗರಕ್ಕೆ ನೀರು ಪೂರೈಕೆ ಮಾಡುವ ರಕ್ಕಸಕೊಪ್ಪ ಜಲಾಶಯದಲ್ಲಿ 2255. 65 ಅಡಿ ಮಾತ್ರ ನೀರು ಸಂಗ್ರಹವಿದ್ದು, 37 ದಿನಗಳವರೆಗೆ ಸಾಕಾಗುತ್ತದೆ. ದಿನದ 24 ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ನೀರಿನ ಕೊರತೆ ಉಂಟಾಗಿದ್ದರಿಂದ ಕೆಲ ಭಾಗದಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಈ ಸಮಸ್ಯೆ ಪರಿಹರಿಸಲು ಕ್ರಮ ವಹಿಸಲಾಗಿದೆ. ಜನರಿಗೆ ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.