ಶಿವಾನಂದ ಗೊಂಬಿ
ಕೇಂದ್ರ ಸರ್ಕಾರದಿಂದ ಅತ್ಯುತ್ತಮ ಯೋಜನೆಯೆಂದು ಪ್ರಶಸ್ತಿ ಪಡೆದು ಬರೀ ಕಾಗದದಲ್ಲೇ ಉಳಿದಿದ್ದ ಇಲ್ಲಿನ ಚಿಟಗುಪ್ಪಿ ಆಸ್ಪತ್ರೆಯಲ್ಲಿನ "ಸ್ಮಾರ್ಟ್ ಹೆಲ್ತ್ ಕೇರ್ "ನ ಅವ್ಯವಹಾರದ ಕುರಿತು ಜ. 27ರಂದು ವಿಚಾರಣೆ ನಡೆಯಲಿದೆ. ಸ್ಮಾರ್ಟ್ಸಿಟಿ ಹಾಗೂ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳೆಲ್ಲ ವಿಚಾರಣೆ ಎದುರಿಸುವಂತಾಗಿದೆ.
ಏನಿದು ಹೆಲ್ತ್ ಕೇರ್:ಸ್ಮಾರ್ಟ್ಸಿಟಿ ಯೋಜನೆಯಡಿ 2019ರಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ "ಸ್ಮಾರ್ಟ್ಹೆಲ್ತ್ ಕೇರ್ " ಯೋಜನೆ ಜಾರಿಗೊಳಿಸಲಾಗಿತ್ತು. ಆಸ್ಪತ್ರೆಯಲ್ಲಿ ಸಂಪೂರ್ಣ ಡಿಜಿಟಲೀಕರಣ ಜಾರಿಗೊಳಿಸುವ ವ್ಯವಸ್ಥೆಯಿದು. ಇದು ಬರೀ ಕಾಗದದಲ್ಲೇ ಮಾತ್ರ ಉಳಿದಿದೆ. ಈ ಮಷಿನ್ ಖರೀದಿಗೆ ₹ 3 ಕೋಟಿ ವೆಚ್ಚವನ್ನು ಸ್ಮಾರ್ಟ್ಸಿಟಿ ಮಾಡಿದೆ. ಇದರ ನಿರ್ವಹಣೆಗೆ ಪಾಲಿಕೆಯಿಂದ ಬರೋಬ್ಬರಿ ₹ 1.5 ಕೋಟಿ ವೆಚ್ಚವಾಗಿದೆ. ಅಸಲಿಗೆ ಈ ಮಷಿನ್ ಅಳವಡಿಕೆಯಾದ ಬಳಿಕ ಒಂದೇ ಒಂದು ದಿನವೂ ಕಾರ್ಯನಿರ್ವಹಿಸಿಲ್ಲ.
ಇಲ್ಲಿ ಬರುವ ರೋಗಿ ಮೊದಲು ಡಿಜಿಟಲ್ ನೋಂದಣಿ ಮಾಡಿಸಬೇಕು. ಅದು ಸಂಬಂಧಿತ ವೈದ್ಯರಿಗೆ ಡಿಜಿಟಲ್ ಮೂಲಕ ರವಾನೆಯಾಗುತ್ತದೆ. ವೈದ್ಯರು ರೋಗಿ ತಪಾಸಣೆ ಮಾಡಿದ ಬಳಿಕ ಔಷಧಿ, ವಿವಿಧ ತಪಾಸಣೆಯನ್ನು ಕಂಪ್ಯೂಟರ್ ಮೂಲಕವೇ ಸೂಚಿಸಬೇಕಾಗುತ್ತದೆ. ಔಷಧಿಯೂ ನೋಂದಣಿ ಪತ್ರದ ಮೇಲಿರುವಂಥ "ಕ್ಯೂಆರ್ " ಕೋಡ್ ಸ್ಕ್ಯಾನ್ ಮಾಡಿದ ತಕ್ಷಣವೇ ವೆಂಡಿಂಗ್ ಮಷಿನ್ ಮೂಲಕ ಪಡೆಯಬಹುದಾಗಿದೆ. ಒಂದು ಸಲ ಒಬ್ಬ ರೋಗಿ ಇಲ್ಲಿಗೆ ಬಂದು ಚಿಕಿತ್ಸೆ ಪಡೆದ ಮೇಲೆ ಆತನ ಸಮಗ್ರ ಮಾಹಿತಿ ಈ ವ್ಯವಸ್ಥೆಯಲ್ಲಿ ಸದಾಕಾಲ ಇರುತ್ತದೆ. ಆತ ಮತ್ತೊಮ್ಮೆ ಆಸ್ಪತ್ರೆಗೆ ಬಂದರೆ ನೋಂದಣಿ ಮಾಡಿಸುವ ಅಗತ್ಯ ಬೀಳುವುದಿಲ್ಲ. ಆತನ ನೋಂದಣಿ ಸಂಖ್ಯೆ ಹೇಳಿದರೆ ಕಂಪ್ಯೂಟರ್ ಸ್ಕ್ರೀನ್ ಮೇಲೆ ಥಟನೇ ಬರುತ್ತದೆ. ರೋಗಿಗೆ ಬೇರೆ ಊರಲ್ಲಿರುವ ತಜ್ಞ ವೈದ್ಯರ ಬಳಿ ಚಿಕಿತ್ಸೆ ಪಡೆಯಬೇಕಿದ್ದರೂ ಅದನ್ನು ಕೂಡ ಇಲ್ಲೇ ಕುಳಿತು ವರ್ಚುವಲ್ ಆಗಿ ಪಡೆದುಕೊಳ್ಳಬಹುದಾಗಿದೆ. ಹೀಗೆ ಪ್ರತಿಯೊಂದು ಅತ್ಯಾಧುನಿಕ ಸೌಲಭ್ಯಗಳು ಇಲ್ಲಿ ಲಭ್ಯವಾಗುತ್ತವೆ ಎಂದು ಹೇಳಲಾಗಿತ್ತು. ಒಪಿಡಿ, ಐಪಿಡಿ ಎಲ್ಲ ರೋಗಿಗಳ ಸಮಗ್ರ ಮಾಹಿತಿ ಇಲ್ಲಿರಬೇಕು. ಇದ್ಯಾವುದು ಈಗ ಅಲ್ಲಿ ಆಗುತ್ತಿಲ್ಲ.
ಸದನ ಸಮಿತಿ:
ಜ. 27ಕ್ಕೆ ಈ ಸಮಿತಿಯು ಮೊದಲ ಸಭೆ ಕರೆದಿದೆ. ಅಂದು ನಡೆಯುವ ಸಭೆಯಲ್ಲಿ ಸ್ಮಾರ್ಟ್ಸಿಟಿ ಹಾಗೂ ಪಾಲಿಕೆ ಅಧಿಕಾರಿ ವರ್ಗ ಭಾಗವಹಿಸಲಿದೆ. ಕೆಲಸ ಮಾಡದೇ, ಏನೇನು ವರ್ಕ್ ಆಗದೇ ಅದ್ಹೇಗೆ ಖಾಸಗಿ ಏಜೆನ್ಸಿಗೆ ದುಡ್ಡು ಸಂದಾಯವಾಗಿದೆ. ಏಕೆ ಇದು ವರ್ಕ್ ಆಗಿಲ್ಲ ಎಂಬುದರ ವಿಚಾರಣೆ ನಡೆಸಲಿದೆ. ಈ ಕುರಿತು ವರದಿ ಸಿದ್ಧಪಡಿಸಿ ಮೇಯರ್ ಅವರಿಗೆ ಹಸ್ತಾಂತರಿಸಲಿದೆ. ಅದನ್ನು ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಸಿ ಬಳಿಕ ಕ್ರಮದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಸುಳ್ಳು ಮಾಹಿತಿ ನೀಡಿದ ಸ್ಮಾರ್ಟ್ ಸಿಟಿ