ಭದ್ರಾವತಿ: ಸಾಮಾಜಿಕ ನ್ಯಾಯ ಎಂಬುದು ಎಲ್ಲಾ ಸಮುದಾಯಗಳಲ್ಲೂ ಬೇಕು. ಎಲ್ಲರೂ ಸಮಾನವಾಗಿ ಬದುಕಿದಾಗ ಮಾತ್ರ ನೆಮ್ಮದಿ ಕಾಣಲು ಸಾಧ್ಯ ಎಂದು ರಾಜ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಬಿಲ್ಲಪ್ಪ ಹೇಳಿದರು.
ಸಮುದಾಯಗಳನ್ನು ಸಂಘಟಿಸುವುದು ಬಹಳ ಕಷ್ಟದ ಕೆಲಸವಾಗಿದ್ದು, ಈ ನಡುವೆ ಸಮುದಾಯ ಭವನ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಭವಿಷ್ಯದಲ್ಲಿ ಈ ಸಮುದಾಯ ಭವನದ ಮಹತ್ವ ಎಲ್ಲರಿಗೂ ಅರಿವಾಗಲಿದೆ ಎಂದರು.
ಎಲ್ಲಾ ಸಮುದಾಯಗಳಲ್ಲೂ ಸಾಮಾಜಿಕ ನ್ಯಾಯದ ಅಗತ್ಯವಿದೆ. ಎಲ್ಲರೂ ಸಮಾನತೆಯಿಂದ ಬದುಕುಬೇಕು. ಉತ್ತಮ ಸಮಾಜ ನಿರ್ಮಿಸಿಕೊಳ್ಳಬೇಕೆಂಬುದು ಬಾಬಾ ಸಾಹೇಬ್ ಅಂಬೇಡ್ಕರ್ರವರ ಆಶಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಶಿಕ್ಷಣವಂತರಾಗಬೇಕು. ಆ ಮೂಲಕ ಭವಿಷ್ಯದ ಬದುಕು ಕಟ್ಟಿಕೊಳ್ಳಬೇಕು. ಕೇವಲ ಉನ್ನತ ಹುದ್ದೆ ಪಡೆದುಕೊಂಡರೆ ಸಾಲದು. ಸಮಾಜಮುಖಿ ಬದುಕು ನಮ್ಮದಾಗಬೇಕು. ಆಗ ಮಾತ್ರ ನಾವು ಪಡೆದ ಶಿಕ್ಷಣ ಸಾರ್ಥಕವಾಗುತ್ತದೆ ಎಂದು ಹೇಳಿದರು.ಸಮಾಜದಲ್ಲಿ ಸಂಘಟನೆ ಇಲ್ಲದೆ ಏನನ್ನು ಸಹ ಮಾಡಲು ಸಾಧ್ಯವಿಲ್ಲ. ಸಂಘಟನೆಯಲ್ಲಿ ಬಲವಿದೆ. ಇದನ್ನು ನಾವುಗಳು ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ಸಂಘಟನೆ ಮೂಲಕ ಹೋರಾಟ ನಡೆಸಿ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಯಾರು ವೈಯಕ್ತಿಕ ಕಾರಣಗಳಿಗೆ ಸಂಘಟನೆಗಳನ್ನು ಬಲಿ ಕೊಡಬಾರದು ಎಂದರು.
ಹೊಸದುರ್ಗ ಶ್ರೀ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ದಿವ್ಯ ಸಾನ್ನಿಧ್ಯವಹಿಸಿದ್ದರು. ವಿಧಾನಪರಿಷತ್ ಸದಸ್ಯೆ ಬಲ್ಕೀಷ್ ಬಾನು, ಶಿವಮೊಗ್ಗ ಕೇಂದ್ರ ಕಾರಗೃಹ ಮುಖ್ಯ ಅಧೀಕ್ಷಕ ಡಾ.ಪಿ.ರಂಗನಾಥ್, ನಿವೃತ್ತ ಕೆಎಎಸ್ ಅಧಿಕಾರಿ ಬಿ.ಭೀಮಪ್ಪ, ತೆರಿಗೆ ಇಲಾಖೆ ನಿವೃತ್ತ ಹೆಚ್ಚುವರಿ ಆಯುಕ್ತ ಜಗನ್ನಾಥ್ ಸಗರ, ಉಪ್ಪಾ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಗಿರೀಶ್ ಉಪ್ಪಾರ, ಶ್ರೀ ಭಗೀರಥ ಸಹಕಾರ ಸಂಘ ಜಿಲ್ಲಾಧ್ಯಕ್ಷ ಎನ್.ಮಂಜುನಾಥ್, ನಗರಸಭೆ ಸದಸ್ಯರಾದ ಬಿ.ಎಂ.ಮಂಜುನಾಥ್, ಅನುಪಮ ಚನ್ನೇಶ್, ಯುವ ಮುಖಂಡ ಬಿ.ಎಸ್.ಗಣೇಶ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಪ್ಪಾರ ಸಂಘದ ತಾಲೂಕು ಅಧ್ಯಕ್ಷ ರವಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರಸಭೆ ಮಾಜಿ ಉಪಾಧ್ಯಕ್ಷೆ ವಿದ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು. ಪ್ರಮುಖರರಾದ ರವೀಶ್, ರಾಜಶೇಖರ್ ಉಪ್ಪಾರ, ಶ್ರೀನಿವಾಸ್(ಪೋಟೋ ಗ್ರಾಫರ್), ಕುಮಾರ್, ರಾಮು ಸೇರಿದಂತೆ ತಾಲೂಕು ಸಂಘದ ಪದಾಧಿಕಾರಿಗಳು, ಇನ್ನಿತರ ಸಮಾಜದ ಮುಖಂಡರು, ಗಣ್ಯರು ಪಾಲ್ಗೊಂಡಿದ್ದರು.