ಕನ್ನಡಪ್ರಭ ವಾರ್ತೆ ಚಳ್ಳಕೆರೆ
ನಗರದ ಗುರುರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಸೋಮವಾರ ಬಿಜೆಪಿ ಎಸ್ಟಿ ಮೋರ್ಚಾ ಹಮ್ಮಿಕೊಂಡಿದ್ದ ಶೇ.7ರ ಮೀಸಲಾತಿ-ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಅಂದೋಲನ ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದಲ್ಲಿ ನಾಯಕ ಸಮುದಾಯ ಮುಂದಿನ ದಿನಗಳಲ್ಲಿ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ. ನಮಗಲ್ಲದಿದ್ದರೂ ನಮ್ಮ ಮುಂದಿನ ಪೀಳಿಗೆಗಾಗಿ ಹೋರಾಟ ಅನಿವಾರ್ಯವಾಗಿದೆ. ಆದ್ದರಿಂದ ಯುವ ಸಮುದಾಯ ಒಗ್ಗಟ್ಟಿನಿಂದ ಮುನ್ನುಗ್ಗಬೇಕಿದೆ ಎಂದರು.
ರಾಜಕೀಯದಲ್ಲಿರುವ ನಾಯಕ ಸಮುದಾಯದ ಮುಖಂಡರು ಈ ಕುರಿತು ಆಲೋಚಿಸಬೇಕಿದೆ. ನಮ್ಮ ಮುಂದಿನ ಪೀಳಿಗೆ ನಮಗೆ ಶಾಪ ಹಾಕಬಾರದು. ಅವರಿಗೆ ಒಳಿತಾಗಲು ನಾವೆಲ್ಲಾ ಶ್ರಮಿಸಬೇಕಿದೆ. ಅನೇಕ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕ ಪ್ರಕ್ರಿಯೆಗೆ ಪ್ರಕಟಣೆ ಹೊರಡಿಸಲಾಗಿದೆ. ಶೇ.7ರಷ್ಟು ಮೀಸಲಾತಿ ಇದ್ದಿದ್ದರೆ ಸಮುದಾಯದ ಯುವ ಪೀಳಿಗೆಗೆ ಹೆಚ್ಚು ಅವಕಾಶಗಳು ಸಿಗುತ್ತಿದ್ದವು. ಈ ಸರ್ಕಾರ ವಾಲ್ಮೀಕಿ ನಾಯಕ ಜನಾಂಗಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.ರಾಜ್ಯದಲ್ಲಿ ಅಧಿಕ ಪ್ರಮಾಣದಲ್ಲಿರುವ ನಾಯಕ ಸಮಾಜಕ್ಕೆ ಸಾಮಾಜಿಕ ನ್ಯಾಯ ಎಂಬುದು ಕಾಂಗ್ರೆಸ್ ಆಡಳಿತದಲ್ಲಿ ಮರೀಚಿಕೆಯಾಗಿದೆ. ಸಂವಿಧಾನ ಬದ್ಧವಾಗಿ ಬಂದ ಹಕ್ಕನ್ನು ಪಡೆಯಲು ಜನಾಂಗ ಯತ್ನಿಸಿದರೆ, ಸರ್ಕಾರ ಅದನ್ನೂ ನೀಡದೆ ವಂಚಿಸುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಮಾತನಾಡಿ, ರಾಜ್ಯ ಸರ್ಕಾರ ನಾಯಕ ಜನಾಂಗದ ಕಲ್ಯಾಣಕ್ಕಾಗಿ ಯಾವುದೇ ಕಾರ್ಯಕ್ರಮ ರೂಪಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಸಚಿವರಾಗಿದ್ದ ನಾಯಕ ಜನಾಂಗದ ಬಿ.ನಾಗೇಂದ್ರ ವಾಲ್ಮೀಕಿ ಅಭಿವೃದ್ದಿ ನಿಗಮದ ಕೋಟ್ಯಂತರ ರೂಪಾಯಿ ಹಣವನ್ನು ದೋಚಿ ಚುನಾವಣೆ ಮಾಡಿದ್ದಾರೆ. ಆದರೆ, ಈ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿರುವ ನಾಯಕ ಜನಾಂಗದ ಸಚಿವರು, ಶಾಸಕರು ಮಾತನಾಡುತ್ತಿಲ್ಲ. ಇಂತಹವರಿಂದ ಜನಾಂಗದ ಅಭಿವೃದ್ದಿ ಹೇಗೆ ಸಾಧ್ಯ. ರಾಜ್ಯದ ವಾಲ್ಮೀಕಿ ಜನಾಂಗಕ್ಕೆ ಆತ್ಮಸ್ಥೈರ್ಯ ತುಂಬಲು ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಸ್ವಾಮೀಜಿ ಪಾದಯಾತ್ರೆಯ ಮೂಲಕ ಮೀಸಲಾತಿಗಾಗಿ ಹೋರಾಟ ನಡೆಸಿದರು. ಆದರೂ ಸರ್ಕಾರ ಈ ಜನಾಂಗಕ್ಕೆ ನ್ಯಾಯವನ್ನು ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.