ದೊಡ್ಡಬಳ್ಳಾಪುರ: ಸಾಂವಿಧಾನಿಕ ಮೌಲ್ಯಗಳ ಅನುಷ್ಠಾನದ ನಿರ್ದಿಷ್ಟ ಗುರಿಯೊಂದಿಗೆ ಸಾಮಾಜಿಕ ಆಶಯಗಳಿಗೆ ಸ್ಪಂದಿಸುವ ಹೊಣೆಗಾರಿಕೆಯನ್ನು ಪ್ರತಿಯೊಬ್ಬರೂ ಹೊಂದಿರಬೇಕು ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯ ಸೂರ್ಯ ಮುಕುಂದರಾಜ್ ಹೇಳಿದರು. ಇಲ್ಲಿನ ಜಾಲಪ್ಪ ಕಾನೂನು ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಮತ್ತು ಕ್ರೀಡಾ-ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕಾನೂನು ವಿಷಯದಲ್ಲಿ ಪದವಿ ಪಡೆಯುತ್ತಿರುವ ಯುವಜನರು ಅಧ್ಯಯನಶೀಲತೆಯನ್ನು ತುಡಿತವಾಗಿ ಹೊಂದುವುದು ಅಗತ್ಯ. ನಿರಂತರ ಅಧ್ಯಯನ ಮತ್ತು ಸಮಕಾಲೀನ ಸಾಮಾಜಿಕ ಬೆಳವಣಿಗೆಗಳ ಬಗ್ಗೆ ಕುತೂಹಲವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದೇ ವೇಳೆ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.