ಕನ್ನಡಪ್ರಭ ವಾರ್ತೆ ಮದ್ದೂರು
ಶಾಸಕ ಕೆ.ಎಂ.ಉದಯ್ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಜೂನ್ 8ರಂದು ಭಾನುವಾರ ಸಂಜೆ ಶಾಸಕರಿಗೆ ಅಭಿನಂದನೆ, ಸಮಾಜಮುಖಿ ಸೇವಾ ಕಾರ್ಯ ಹಾಗೂ ಖ್ಯಾತ ಗಾಯಕರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಚೆಲುವರಾಜು ಶನಿವಾರ ಹೇಳಿದರು.ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಮುಖಂಡರೊಂದಿಗೆ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾರ್ಯಕ್ರಮದ ವೇದಿಕೆ ಮತ್ತು ಪೂರ್ವ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಜೆ 5 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮೊದಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ ಮೃತಪಟ್ಟವರಿಗೆ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದರು.
ನಂತರ ಶಾಸಕರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕಿನ ಭಾರತೀಯ ಯೋಧರ ಕುಟುಂಬಗಳಿಗೆ ಅಭಿನಂದನೆ ಹಾಗೂ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.ಬಳಿಕ ಶಾಸಕ ಉದಯ್ ಅವರಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಬೆಳ್ಳಿ ಗಧೆ ನೀಡಿ ಮಾಲಾರ್ಪಣೆ ಮಾಡಿ ಅಭಿನಂದಿಸಲಾಗುವುದು. ನಂತರ ಕನ್ನಡದ ಖ್ಯಾತ ಹಿನ್ನೆಲೆ ಗಾಯಕ ಗುರುಕಿರಣ್ ಸಾರಥ್ಯದಲ್ಲಿ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರದ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಎಲ್ಲರಿಗೂ ಅಚ್ಚುಕಟ್ಟು ಭೋಜನದ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.ಈ ವೇಳೆ ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣೂರು ರಾಜೀವ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎ.ಎಸ್. ರಾಮಕೃಷ್ಣ, ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಮೋಹನ್ ಕುಮಾರ್, ಮನ್ಮುಲ್ ನಿರ್ದೇಶಕ ಹರೀಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಕೆ.ಎಂ.ಉದಯ್ ಚಾರಿಟಬಲ್ ಟ್ರಸ್ಟ್ ನಿರ್ದೇಶಕ ಕೆ.ಎಂ.ರವಿ ಪುರಸಭಾ ಅಧ್ಯಕ್ಷೆ ಕೋಕಿಲ ಅರುಣ್, ಉಪಾಧ್ಯಕ್ಷ ಟಿ.ಆರ್.ಪ್ರಸನ್ನ ಕುಮಾರ್, ಸದಸ್ಯ ಸಚಿನ್, ನಿವೃತ್ತ ಯೋಧ ಸಿಪಾಯಿ ಶ್ರೀನಿವಾಸ್, ತಿಮ್ಮದಾಸ್ ಗ್ರೂಪ್ ಮಾಲೀಕ ಸಿ.ಟಿ.ಶಂಕರ್, ಪುರಸಭೆ ಮಾಜಿ ಸದಸ್ಯರಾದ ಡಾಬಾ ಮಹೇಶ್, ಎನ್.ಸಿ.ರಘು, ಗೊರವನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷರಾದ ರಾಘು, ಮಹದೇವ್. ಮತ್ತಿತರರು ಇದ್ದರು.