ಭ್ರಷ್ಟಾಚಾರ ನಿರ್ಮೂಲನೆಗೆ ಸಮಾಜ ಬದಲಾಗಬೇಕು: ಬಿ.ವೀರಪ್ಪ

KannadaprabhaNewsNetwork |  
Published : Aug 28, 2026, 01:30 AM IST
೨೭ಕೆಎಂಎನ್‌ಡಿ-೪ಮದ್ದೂರು ಪಟ್ಟಣದ ಹೊರವಲಯದ ಶ್ರೀ ವೆಂಕಟೇಶ್ವರ ಕಲ್ಯಾಣಮಂದಿರದಲ್ಲಿ ಮದ್ದೂರು ತಾಲ್ಲೂಕಿನ ಬಾಕಿ ಇರುವ ಪ್ರಕರಣಗಳ ವಿಚಾರಣೆ, ವಿಲೇವಾರಿ ಕಾರ್ಯಕ್ರಮ ಉದ್ಘಾಟಿಸಿ ಉಪ ಲೋಕಾಯುಕ್ತ ಬಿ.ವೀರಪ್ಪ ಮಾತನಾಡಿದರು. | Kannada Prabha

ಸಾರಾಂಶ

ಭ್ರಷ್ಟಾಚಾರ ನಿರ್ಮೂಲನೆಗೆ ಮೊದಲು ಸಮಾಜದಲ್ಲಿ ಬದಲಾವಣೆ ಬರಬೇಕು. ಹಣ ಪಡೆದು ಮತ ಚಲಾಯಿಸುವವರು. ಹಣ ನೀಡಿ ಮತ ಖರೀದಿಸುವವರು ಹಾಗೂ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವವರು- ಇವರೆಲ್ಲರೂ ಭ್ರಷ್ಟಾಚಾರದ ವ್ಯವಸ್ಥೆಯ ಭಾಗವಾಗುತ್ತಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ದೇಶಕ್ಕೆ ಸ್ವಾತಂತ್ರ್ಯ ಬಂದು ಹಲವು ದಶಕಗಳು ಕಳೆದರೂ ಭ್ರಷ್ಟಾಚಾರ ಸಂಪೂರ್ಣವಾಗಿ ನಿರ್ಮೂಲನೆಯಾಗದಿರುವುದು ಕೇವಲ ಸರ್ಕಾರ ಅಥವಾ ಅಧಿಕಾರಿಗಳ ತಪ್ಪಲ್ಲ. ಸಮಾಜದ ಪ್ರತಿಯೊಬ್ಬರೂ ಇದಕ್ಕೆ ತಮ್ಮದೇ ಆದ ಜವಾಬ್ದಾರಿ ಹೊಂದಿದ್ದಾರೆ ಎಂದು ಉಪ ಲೋಕಾಯುಕ್ತ ಬಿ.ವೀರಪ್ಪ ತಿಳಿಸಿದರು.

ಪಟ್ಟಣದ ಹೊರವಲಯದಲ್ಲಿರುವ ಶಿವಪುರದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಮದ್ದೂರು ತಾಲೂಕಿನ ಬಾಕಿ ಇರುವ ಪ್ರಕರಣಗಳ ವಿಚಾರಣೆ- ವಿಲೇವಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಭ್ರಷ್ಟಾಚಾರ ನಿರ್ಮೂಲನೆಗೆ ಮೊದಲು ಸಮಾಜದಲ್ಲಿ ಬದಲಾವಣೆ ಬರಬೇಕು. ಹಣ ಪಡೆದು ಮತ ಚಲಾಯಿಸುವವರು. ಹಣ ನೀಡಿ ಮತ ಖರೀದಿಸುವವರು ಹಾಗೂ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವವರು- ಇವರೆಲ್ಲರೂ ಭ್ರಷ್ಟಾಚಾರದ ವ್ಯವಸ್ಥೆಯ ಭಾಗವಾಗುತ್ತಾರೆ. ಜನರು ಹಣ ಪಡೆದು ಮತ ಹಾಕಿದರೆ, ನಂತರ ಜನಪ್ರತಿನಿಧಿಗಳನ್ನು ಪ್ರಶ್ನಿಸುವ ನೈತಿಕ ಹಕ್ಕನ್ನು ಕಳೆದುಕೊಳ್ಳುತ್ತಾರೆ. ಆದ್ದರಿಂದ ಬದಲಾವಣೆ ಮೊದಲು ಸಮಾಜದಿಂದಲೇ ಆರಂಭವಾಗಬೇಕು ಎಂದರು.

ತಮ್ಮ ಹುದ್ದೆಯ ಉದ್ದೇಶ ಮರೆಯಬೇಡಿ:

ಅಧಿಕಾರಿಗಳು ತಮ್ಮ ಹುದ್ದೆಯ ಉದ್ದೇಶವನ್ನು ಮರೆಯಬಾರದು. ಪ್ರತಿಯೊಂದು ಇಲಾಖೆಯ ಅಧಿಕಾರಿಯೂ ಜನಸೇವೆ ಮಾಡುವ ಉದ್ದೇಶದಿಂದ ಅಧಿಕಾರಕ್ಕೆ ಬಂದಿರುತ್ತಾರೆ. ಜನಸೇವೆಯೇ ಅಧಿಕಾರದ ಮೂಲ ಕರ್ತವ್ಯ. ಅಧಿಕಾರ ಬಂದ ನಂತರ ಜನರಿಂದ ದೂರವಾಗಿ, ಅಧಿಕಾರದ ಪ್ರಭಾವವನ್ನು ವೈಯಕ್ತಿಕ ಹಿತಾಸಕ್ತಿಗೆ ಬಳಸಿಕೊಳ್ಳುವ ಪ್ರವೃತ್ತಿ ಸಲ್ಲದು ಎಂದರು.

ಯಾರಾದರೂ ತಮ್ಮ ಪರಿಚಯದವರು, ಬಂಧುಗಳು ಅಥವಾ ಪ್ರಭಾವಿಗಳೆಂದು ವಿಶೇಷ ಸೌಲಭ್ಯ ನೀಡುವುದು ಕೂಡ ಭ್ರಷ್ಟಾಚಾರದ ಒಂದು ರೂಪ. ಸರ್ಕಾರಿ ಕೆಲಸ ಮಾಡಿಕೊಡಲು ಹಣ ಕೇಳುವುದು, ಕೆಲಸಕ್ಕಾಗಿ ಅನಗತ್ಯವಾಗಿ ವಿಳಂಬ ಮಾಡುವುದು, ಅಕ್ರಮವಾಗಿ ಲಾಭ ಮಾಡಿಕೊಡುವುದು-ಇವೆಲ್ಲವೂ ಆಡಳಿತ ವ್ಯವಸ್ಥೆಯ ಮೇಲೆ ಜನರ ನಂಬಿಕೆಯನ್ನು ಕುಗ್ಗಿಸುತ್ತವೆ ಎಂದು ಎಚ್ಚರಿಸಿದರು.

ಒತ್ತಡಗಳಿಗೆ ಒಳಗಾಗುವುದಿಲ್ಲ:

ಕರ್ನಾಟಕ ಲೋಕಾಯುಕ್ತ ಸಂಸ್ಥೆ ಸ್ವತಂತ್ರ ಸಂಸ್ಥೆಯಾಗಿದ್ದು, ಯಾರ ಒತ್ತಡಕ್ಕೂ ಒಳಗಾಗದೆ ಕಾನೂನು ಬದ್ಧವಾಗಿ ಕಾರ್ಯನಿರ್ವಹಿಸುತ್ತದೆ. ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಕರ್ತವ್ಯಲೋಪ ಕಂಡುಬಂದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಮಂಡ್ಯ ಜಿಲ್ಲೆಯ ಬಗ್ಗೆ ನನಗೆ ವಿಶೇಷ ಪ್ರೀತಿ ಇದೆ ಎಂಬುದಕ್ಕಿಂತಲೂ ಇಲ್ಲಿನ ಜನರ ಬಗ್ಗೆ ನನಗೆ ವಿಶೇಷ ಕಾಳಜಿ ಇದೆ. ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳ ಬಗ್ಗೆ ಗೌರವವಿದೆ. ಆದರೆ, ಜನರಿಗೆ ಅನ್ಯಾಯ ಮಾಡುವ, ಮೋಸ ಮಾಡುವ ಅಥವಾ ಭ್ರಷ್ಟಾಚಾರದಲ್ಲಿ ತೊಡಗುವ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಬಿ.ವೀರಪ್ಪ ಹೇಳಿದರು.

ಸರ್ಕಾರಿ ಭೂಮಿ ಕಬಳಿಕೆ ಬಗ್ಗೆ ಕಳವಳ:

ಸರ್ಕಾರಿ ಭೂಮಿ ಮತ್ತು ಸಾರ್ವಜನಿಕ ಆಸ್ತಿಗಳ ಅಕ್ರಮ ಬಳಕೆಯ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು. ಅಕ್ರಮ ಮಂಜೂರಾತಿ, ಸುಳ್ಳು ದಾಖಲೆಗಳು, ಕಾನೂನುಬಾಹಿರವಾಗಿ ಸರ್ಕಾರಿ ಜಮೀನುಗಳನ್ನು ಪಡೆಯುವ ಪ್ರಯತ್ನಗಳು ಕಂಡುಬಂದರೆ ಅವುಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಧಿಕಾರ ಶಾಶ್ವತವಲ್ಲ. ಇಂದು ಅಧಿಕಾರದಲ್ಲಿರುವವರು ನಾಳೆ ಸಾಮಾನ್ಯ ನಾಗರಿಕರಾಗಬಹುದು. ಹೀಗಾಗಿ ಅಧಿಕಾರಿಗಳು ಜನರ ವಿಶ್ವಾಸವನ್ನು ಉಳಿಸಿಕೊಳ್ಳುವ ರೀತಿಯಲ್ಲಿ ಕೆಲಸ ಮಾಡಬೇಕು. ಅಧಿಕಾರಕ್ಕಿಂತ ಜನರ ವಿಶ್ವಾಸ ದೊಡ್ಡದು ಎಂದರು.

ಜನರು ದೂರು ನೀಡಿದಾಗ ಅದನ್ನು ನಿರ್ಲಕ್ಷಿಸದೆ ತಕ್ಷಣ ಸ್ಪಂದಿಸಬೇಕು. ಲೋಕಾಯುಕ್ತ ಸಂಸ್ಥೆಗೆ ದೂರು ಬಂದ ನಂತರ ಸಂಬಂಧಪಟ್ಟ ಅಧಿಕಾರಿಗಳು ಕಾನೂನುಬದ್ಧವಾಗಿ ಕ್ರಮ ಕೈಗೊಳ್ಳಬೇಕು. ಕರ್ತವ್ಯಲೋಪ ಮುಂದುವರಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರಾಮಾಣಿಕತೆ ಇದ್ದರೆ ಭ್ರಷ್ಟಾಚಾರ ನಿರ್ಮೂಲನೆ:

ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವುದು ಕೇವಲ ಲೋಕಾಯುಕ್ತ ಸಂಸ್ಥೆಯ ಜವಾಬ್ದಾರಿಯಲ್ಲ. ಸಮಾಜ, ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಪ್ರತಿಯೊಬ್ಬ ನಾಗರಿಕರೂ ತಮ್ಮ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದಾಗ ಮಾತ್ರ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಲೋಕಾಯುಕ್ತರು ಹೇಳಿದರು.

ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿ, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳ ಬೆಂಬಲಕ್ಕೆ ಲೋಕಾಯುಕ್ತ ಸಂಸ್ಥೆ ಸದಾ ನಿಲ್ಲಲಿದೆ ಎಂದು ಲೋಕಾಯುಕ್ತರು ಹೇಳಿದರು.

ಅಧಿಕಾರಿಗಳು ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ಕೆಲಸ ಮಾಡಿದರೆ ಯಾವುದೇ ಭಯಪಡುವ ಅಗತ್ಯವಿಲ್ಲ. ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳನ್ನು ಕಾನೂನುಬದ್ಧವಾಗಿ ಎದುರಿಸಲು ಲೋಕಾಯುಕ್ತ ಸಂಸ್ಥೆ ನೆರವಾಗಲಿದೆ. ಆದರೆ, ಕರ್ತವ್ಯಲೋಪ, ಭ್ರಷ್ಟಾಚಾರ ಅಥವಾ ಅಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಪ್ರಾಮಾಣಿಕತೆಯ ಅನ್ನವೇ ನೆಮ್ಮದಿ ಕೊಡುತ್ತದೆ:

ಪ್ರಾಮಾಣಿಕವಾಗಿ ಗಳಿಸಿದ ಸಂಪತ್ತು ಮತ್ತು ಆದಾಯದಿಂದ ಬದುಕುವ ಜೀವನವೇ ನೆಮ್ಮದಿಯ ಜೀವನ. ಅನ್ಯಾಯದ ಮೂಲಕ ಗಳಿಸಿದ ಹಣದಿಂದ ಕುಟುಂಬವನ್ನು ಪೋಷಿಸಿದರೆ ಆ ಹಣ ನೆಮ್ಮದಿಯನ್ನು ನೀಡುವುದಿಲ್ಲ. ಸರ್ಕಾರಿ ನೌಕರರು ತಮ್ಮ ಆದಾಯಕ್ಕೆ ಹೋಲಿಕೆಯಾಗದ ರೀತಿಯಲ್ಲಿ ಆಸ್ತಿ ಸಂಪಾದಿಸಿದರೆ ಅದರ ಮೂಲದ ಬಗ್ಗೆ ಪರಿಶೀಲನೆ ನಡೆಯಬೇಕು. ಕುಟುಂಬದ ಸದಸ್ಯರೂ ಅಕ್ರಮ ಸಂಪತ್ತಿನ ಬಗ್ಗೆ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರಾಮಾಣಿಕವಾಗಿ ಗಳಿಸಿದ ಅನ್ನವೇ ನೆಮ್ಮದಿ ಕೊಡುತ್ತದೆ; ಅನ್ಯಾಯದ ಹಣದಿಂದ ಬಂದ ಸಂಪತ್ತು ನೆಮ್ಮದಿ ನೀಡುವುದಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಎನ್.ವಿ.ಅರವಿಂದ್, ಜಿಲ್ಲಾ ಹಿರಿಯ ಸಿವಿಲ್ ನ್ಯಾಯಧೀಶ ಎಂ. ಆನಂದ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ. ಶೋಭಾರಾಣಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ಮಂಡ್ಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸುರೇಶ್ ಬಾಬು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ಸತ್ಯಾನಂದ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತ್ಯಾವರೆಕೊಪ್ಪಕ್ಕೆ ತೋಳ ಬಂದ್ವು ತೋಳ
ಮಕ್ಕಳ ರಕ್ಷಣೆಗಾಗಿ ನದಿಗೆ ಹಾರಿದ ಮಹಿಳೆ