ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಸಮಾಜ ಕಟ್ಟಬೇಕಿದೆ

KannadaprabhaNewsNetwork |  
Published : Nov 30, 2024, 12:46 AM IST
ಪೊಟೋ: 29ಎಸ್‌ಎಂಜಿಕೆಪಿ01ಶಿವಮೊಗ್ಗ ನಗರದ ಜೆ.ಎನ್.ಎನ್‌ ಎಂಜಿನಿಯರಿಂಗ್‌ ಕಾಲೇಜಿನ ಅನನ್ಯ ಮಂಟಪ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್‌ ಉದ್ಘಾಟಿಸಿದರು. | Kannada Prabha

ಸಾರಾಂಶ

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್‌ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಸಮಾಜವನ್ನು ಭಾಷೆ, ಕಲೆ ಮತ್ತು ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಕಟ್ಟಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್‌ ಅಭಿಪ್ರಾಯಪಟ್ಟರು.

ನಗರದ ಜೆ.ಎನ್.ಎನ್‌ ಎಂಜಿನಿಯರಿಂಗ್‌ ಕಾಲೇಜಿನ ಅನನ್ಯ ಮಂಟಪ ಸಭಾಂಗಣದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಸಾಂಸ್ಕೃತಿಕತೆಯ ತವರೂರು. ಆಧುನಿಕತೆಯ ಅಂಧತ್ವದಲ್ಲಿ ಅಂತಹ ಸಂಸ್ಕೃತಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದನ್ನು ನೋಡುತ್ತಿದ್ದೇವೆ. ಸೃಜನಶೀಲ ಬರವಣಿಗೆ ಕಣ್ಮರೆಯಾಗುತ್ತಿದೆ ಎನ್ನುವ ಆತಂಕಗಳ ನಡುವೆ ಸುದ್ದಿ ಪತ್ರಿಕೆಗಳು ಹಾಗೂ ರಂಗಭೂಮಿಯ ಕ್ರಿಯಾಶೀಲ ಚಟುವಟಿಕೆಗಳು ಅಂತಹ ಆತಂಕಗಳನ್ನು ಒಂದಿಷ್ಟು ದೂರಾಗಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಸೃಜನಶೀಲ ಸಾಹಿತ್ಯ ಮತ್ತು ಪ್ರಚಲಿತತೆಯ ಜ್ಞಾನಕ್ಕಾಗಿ ಪತ್ರಿಕೆಗಳನ್ನು ಮರೆಯದೆ ಓದಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಇತ್ತೀಚಿನ ಕಿರುತೆರೆಯಲ್ಲಿ ಯಾವ ನೈತಿಕ ಮೌಲ್ಯಗಳನ್ನು ತೋರಿಸುತ್ತಿಲ್ಲ. ಇದರಿಂದ ಎಳೆ ಹೃದಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ಕುರಿತಾಗಿ ಪೋಷಕರು ಜಾಗೃತರಾಗಬೇಕಿದೆ. ಪುಸ್ತಕಗಳನ್ನು ಪರಿಚಯಿಸುವ ಕಾರ್ಯ ನಡೆಯಬೇಕಿದ್ದು, ಆಧುನಿಕತೆಯೆ ಸರ್ವಸ್ವ ಎಂಬ ಭ್ರಮೆ ಬೇಡ ಎಂದು ಹೇಳಿದರು.

ಸುಗಮ ಸಂಗೀತ ಕಲಾವಿದ ಪ್ರಹ್ಲಾದ್‌ ದೀಕ್ಷಿತ್‌ ಮಾತನಾಡಿ, ಕನ್ನಡ ಸಾಹಿತ್ಯವನ್ನು ಜನರ ಮನದಾಳದಲ್ಲಿ ಉಳಿಸುವಲ್ಲಿ ಸಂಗೀತ ಪ್ರಮುಖ ಪಾತ್ರ ವಹಿಸಿದೆ. ಸಾಹಿತ್ಯ ಲೋಕಕ್ಕೆ ಅದ್ಭುತ ಕೊಡುಗೆ ನೀಡಿದ ಕವಿಗಳು ಎಂದೆಂದಿಗೂ ಅಮರ. ಇಂದಿನ ಚಲನಚಿತ್ರ ಗೀತೆಗಳಲ್ಲಿ ಜೀವಕಳೆ ಎಂಬುದು ಕಣ್ಮರೆಯಾಗಿದೆ. ಕೇವಲ ಮನರಂಜನೆ ಒಂದೆ ಮೂಲ ಆಶಯವಾಗಿ ಉಳಿದುಬಿಟ್ಟಿದೆ. ಇದು ನಿಜಕ್ಕು ಆತಂಕಕಾರಿ ವಿಚಾರ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕ ಎಚ್.‌ಸಿ.ಶಿವಕುಮಾರ್‌, ಶೈಕ್ಷಣಿಕ ಡೀನ್‌ ಡಾ.ಪಿ.ಮಂಜುನಾಥ, ಸಂಶೋಧನಾ ಡೀನ್‌ ಡಾ.ಎಸ್.ವಿ.ಸತ್ಯನಾರಾಯಣ, ಲೆಕ್ಕಪತ್ರ ವಿಭಾಗದ ಅಧಿಕಾರಿ ಗುರುರಾಜ್‌, ಶಂಭುಲಿಂಗ ಸೇರಿ ಮತ್ತಿತರರು ಉಪಸ್ಥಿತರಿದ್ದರು. ಸಂಯೋಜಕರಾದ ಬಿ.ವಿ.ಶ್ರೀನಿವಾಸಮೂರ್ತಿ ಮತ್ತು ಉಜ್ವಲ ನಿರೂಪಿಸಿ, ಚಂದ್ರಶೇಖರ್‌ ವಂದಿಸಿದರು. ಇದೇ ವೇಳೆ ಬಿಇ ಕನ್ನಡ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುನೀತರಾಜಕುಮಾರ ಪುತ್ಥಳಿ ಅನಾವರಣ
ಬೆಂಗಳೂರು ನಗರದಲ್ಲಿ ಮತ್ತೊಂದು ಮೇಲ್ಸೇತುವೆ ನಿರ್ಮಾಣ