ಸಮುದಾಯ ಸಹಭಾಗಿತ್ವ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಉಪ ನಿರ್ದೇಶಕ
ಗಣಿಬಾಧಿತ ವಲಯ ಪ್ರದೇಶದ ರೈತರಿಗೆ ತಮ್ಮ ತಮ್ಮ ಜಮೀನುಗಳಲ್ಲಿ ಯಾವ ರೀತಿಯಾಗಿ ಮಣ್ಣು ಮತ್ತು ನೀರಿನ ಸಂರಕ್ಷಣೆ ಮಾಡಬೇಕು. ಸಂರಕ್ಷಣೆಯನ್ನು ಮಾಡಲು ಯಾವ ರೀತಿಯಾಗಿ ಉಪಚಾರ ಕೈಗೊಳ್ಳಬೇಕು ಎಂಬುದರ ಬಗ್ಗೆ ತಿಳಿಸಿಕೊಡುವುದು ಗಣಿಗಾರಿಕೆ ಪ್ರಭಾವಿತ ವಲಯಗಳ ಸಮಗ್ರ ಪರಿಸರ ಯೋಜನೆಯ ಉದ್ದೇಶವಾಗಿದೆ ಎಂದು ಕೃಷಿ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ಹೇಳಿದರು.
ಜಲಾನಯನ ಅಭಿವೃದ್ಧಿ ಇಲಾಖೆ, ಕೃಷಿ ಇಲಾಖೆ ಬಳ್ಳಾರಿ ಹಾಗೂ ಗ್ರಾಮ್ಸ್ ಲಿಂಗಸೂಗೂರು ಅನುಷ್ಠಾನ ಸಂಸ್ಥೆಯ ವತಿಯಿಂದ ಗಣಿಗಾರಿಕೆ ಪ್ರಭಾವಕ್ಕೆ ಒಳಗಾದ ವಲಯಗಳಿಗೆ ಸಮಗ್ರ ಪರಿಸರ ಯೋಜನೆ (CEPMIZ) ಅಡಿ ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಹೊನ್ನಾಳಿ ತಾಂಡಾದಲ್ಲಿ ಏರ್ಪಡಿಸಿದ್ದ ಸಮುದಾಯ ಸಹಭಾಗಿತ್ವ ಕಾರ್ಯಕ್ರಮದಲ್ಲಿ ಮಾತನಾಡಿದರು.ಈ ಯೋಜನೆಯು ಗಣಿಗಾರಿಕೆ ಪರಿಣಾಮ ವಲಯಕ್ಕೆ ರಾಜ್ಯದ ನಾಲ್ಕು ಜಿಲ್ಲೆಗಳು ಮೊದಲನೇ ಹಂತದಲ್ಲಿ ಆಯ್ಕೆಯಾಗಿದ್ದು, ಅದರಲ್ಲಿ ಬಳ್ಳಾರಿ ಜಿಲ್ಲೆಯು ಕೂಡ ಒಂದಾಗಿದೆ. ಈ ಯೋಜನೆಯು ಐದು ವರ್ಷದ ಅವಧಿಗೆ ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕ ದಯಾನಂದ್ ಪ್ರಾಸ್ತಾವಿಕವಾಗಿ ಮಾತನಾಡಿ, ಗಣಿಬಾಧಿತ ಪ್ರದೇಶದಲ್ಲಿ ನಾಶವಾಗಿರುವ ಮೇಲ್ಮಣ್ಣನ್ನು ಪುನರ್ ಸ್ಥಾಪಿಸಿ ಮಣ್ಣು ಮತ್ತು ನೀರಿನ ಸಂರಕ್ಷಣೆ ಮೂಲಕ ಮಣ್ಣಿನ ಫಲವತ್ತತೆಯನ್ನು ಪುನರುಜ್ಜೀವನಗೊಳಿಸಿ ವ್ಯವಸಾಯಕ್ಕೆ ಯೋಗ್ಯವನ್ನಾಗಿಸುವ ಮೂಲಕ ರೈತರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸುಸ್ಥಿರತೆಯನ್ನು ಪಡೆಯಲು ಈ ಯೋಜನೆ ಅನುಷ್ಠಾನವಾಗುತ್ತಿದೆ ಎಂದು ತಿಳಿಸಿದರು.
ಈ ಯೋಜನೆಯಡಿ ಕಾರ್ಯನಿರ್ವಹಿಸುವ ಸಿಬ್ಬಂದಿ ತಮ್ಮ ಜಮೀನುಗಳಿಗೆ ಖುದ್ದಾಗಿ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿ ಅಗತ್ಯವಿರುವ ಮತ್ತು ಜಮೀನಿಗೆ ಸೂಕ್ತವೆನಿಸುವ ಮಣ್ಣು ಮತ್ತು ನೀರಿನ ಸಂರಕ್ಷಣೆ ಉಪಚಾರ, ತೋಟಗಾರಿಕೆ, ಅರಣ್ಯೀಕರಣ, ಜೀವನೋಪಾಯ ಚಟುವಟಿಕೆಗಳ ಮಾಹಿತಿ ನೀಡುವರು ಎಂದರು.
ಈ ಸಂದರ್ಭ ತೇರಿ ಸಂಸ್ಥೆಯ ವಿಜಯ ಮೇಟಿ, ಕ್ಷೇತ್ರದ ಜಿಲ್ಲಾ ತಂಡದ ನಾಯಕಿ ಅಶ್ವಿನಿ, ಗ್ರಾಪಂ ಸದಸ್ಯರಾದ ನಿರ್ಮಲ ಬಾಯಿ, ರಮೇಶ್ ನಾಯಕ್, ರವಿನಾಯಕ್, ಕೃಷಿ ಅಧಿಕಾರಿಗಳಾದ ಲೋಕರಾಜ್, ಬಸವರಾಜ್ ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.