- ಯುವಕರು, ಮಹಿಳೆಯರಿಗೆ ಉದ್ಯೋಗ, ಕೃಷಿ ಸಂಸ್ಕರಣಾ ಘಟಕಕ್ಕೆ ಆದ್ಯತೆ
ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಹರಪನಹಳ್ಳಿ ತಾಲೂಕಿನಲ್ಲಿ ಭಾನುವಾರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಎಂ.ಪಿ. ರವೀಂದ್ರರ ಕನಸಿನಂತೆ ಇಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವ ಮೂಲಕ ಸ್ಥಳೀಯ ಯುವಕರಿಗೆ ಇಲ್ಲಿಯೇ ಉದ್ಯೋಗಾವಕಾಶ ಸೃಷ್ಟಿಗೆ ಯತ್ನಿಸುವೆ ಎಂದರು.
ಮಹಿಳೆಯರು ಆರ್ಥಿಕ ಸ್ವಾವಲಂಬಿಯಾಗಿ, ಜೀವನ ನಡೆಸಲು ಅನುವಾಗುವಂತೆ ಗಾರ್ಮೆಂಟ್ಸ್ ಮತ್ತು ಕರಕುಶಲ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಹರಪನಹಳ್ಳಿ ರೈಲ್ವೇ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಈ ಭಾಗದಲ್ಲಿ ಮೆಕ್ಕೆಜೋಳ ಮತ್ತು ತರಕಾರಿ ಬೆಳೆಗಳನ್ನು ಹೆಚ್ಚಾಗಿ ಬೆಳೆಯುತ್ತಾರೆ. ಅವುಗಳನ್ನು ಬೆಳೆದ ರೈತರ ಶ್ರಮಕ್ಕೆ ನ್ಯಾಯಯುತ ಬೆಲೆ ಸಿಗಲು ಅನುವಾಗುವಂತೆ ಸಂಸ್ಕರಣಾ ಘಟಕ ಸ್ಥಾಪಿಸಲಾಗುವುದು ಎಂದು ತಿಳಿಸಿದರು.ಪ್ರವಾಸಿ, ಪುಣ್ಯಕ್ಷೇತ್ರ ಒಳಗೊಂಡಿರುವ ಈ ಭಾಗದ ಬಾಗಳಿ ಮತ್ತು ನೀಲಗುಂದ ಕ್ಷೇತ್ರಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಲು ಪ್ರಯತ್ನಿಸುವೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ವರವಾಗಿದೆ. ಮುಂದಿನ ದಿನಗಳಲ್ಲಿ ಹರಪನಹಳ್ಳಿ ತಾಲೂಕಿನಲ್ಲೂ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಪ್ರಾಮಾಣಿಕವಾಗಿ ಶ್ರಮಿಸುವೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಕೆ.ಕುಬೇರಪ್ಪ, ಮಲ್ಲಿಕಾರ್ಜುನ ಸ್ವಾಮಿ, ಎಲ್.ಎಂ. ನಾಯ್ಕ, ಹಾಲೇಶ್ ಗೌಡ, ಸುಷ್ಮಾ ಪಾಟೀಲ್, ಎಲ್.ಎಂ.ಹನುಮಂತಪ್ಪ, ಮಂಜಪ್ಪ ಹಲಗೇರಿ ಇತರರಿದ್ದರು.
ಹರಪನಹಳ್ಳಿ ತಾಲೂಕಿನ ವಿವಿಧೆಡೆ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಮತಯಾಚಿಸಿದರು.