ಕುಸುಮ್ ಬಿ- ಸಿ ಯೋಜನೆ ಜಾರಿ । 40 ಸಾವಿರ ರೈತರಿಗೆ ಸೋಲಾರ್ ಪಂಪ್ಸೆಟ್
ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರುಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಇಲಾಖೆಯಲ್ಲಿ ರೈತರಿಗೆ 7.5 ಎಚ್ಪಿ ವರೆಗಿನ ಸೋಲಾರ್ ಪಂಪ್ ಸೆಟ್ ಅಳವಡಿಸಲು ಕುಸುಮ್ ಬಿ ಮತ್ತು ಕುಸುಮ್ ಸಿ ಎಂಬ ಯೋಜನೆ ಜಾರಿಗೊಳಿಸಲಾಗಿದೆ ಎಂದು ಕೆಆರ್ಇಡಿಎಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.
ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರದ ಶೇ.50 ಹಾಗೂ ರಾಜ್ಯದ ಶೇ.30ಅನುದಾನದಲ್ಲಿ ಒಟ್ಟು ಶೇ.80 ಸಬ್ಸಿಡಿಯೊಂದಿಗೆ ರಾಜ್ಯದಲ್ಲಿ 40 ಸಾವಿರ ರೈತರು ಸೋಲಾರ್ ಪಂಪ್ಸೆಟ್ ಅಳವಡಿಸಲು ಅವಕಾಶವಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೈತರಿಗೆ ಈ ಯೋಜನೆ ಪ್ರಯೋಜನ ನೀಡುವ ಚಿಂತನೆಯಿದೆ. ಇದರ ನೋಂದಣಿಗೆ ಈಗಾಗಲೇ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.ರೈತರು ತಮ್ಮ ಜಮೀನುಗಳಲ್ಲಿ ವಿದ್ಯುತ್ ಉತ್ಪಾದಿಸಲು ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದು, ಜಮೀನು ಗಳಲ್ಲಿ ಜಾಗ ಖಾಲಿಯಿದ್ದರೆ ರೈತರು ಸೋಲಾರ್ ಪ್ಯಾನಲ್ ಅಳವಡಿಸಿಕೊಳ್ಳಬಹುದು. ಹೆಚ್ಚು ವಿದ್ಯುತ್ ಉತ್ಪಾದನೆಯಾದರೆ ಗ್ರಿಡ್ಗೆ ವರ್ಗಾಯಿಸುವ ವ್ಯವಸ್ಥೆ ಇದೆ.
ಈಗಾಗಲೇ ಅರಣ್ಯ ಇಲಾಖೆಯೊಂದಿಗೆ ಸಭೆ ನಡೆಸಿ ಹೈಡಲ್ ವಿದ್ಯುತ್ ಉತ್ಪಾದನೆಗೆ ಹೆಚ್ಚು ಪ್ರೋತ್ಸಾಹ ನೀಡುವಂತೆ ಕೋರಲಾಗಿದೆ. ಸೋಲಾರ್ ಉತ್ಪಾದನೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದ್ದು, ಪಾವಗಡದಲ್ಲಿ ಅತೀ ಹೆಚ್ಚು ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಪಾವಗಡದ ಹಲವು ಜಮೀನುಗಳಲ್ಲಿ ಯಾವುದೇ ಬೆಳೆ ಬೆಳೆಯುವ ಪರಿಸ್ಥಿತಿ ಇಲ್ಲ. ಈ ಹಿನ್ನೆಲೆಯಲ್ಲಿ ಅಲ್ಲಿನ ರೈತರೊಂದಿಗೆ ಸಭೆ ನಡೆಸಿ ಬಾಡಿಗೆ ಆಧಾರದಲ್ಲಿ ಜಮೀನು ಪಡೆದು ಸೋಲಾರ್ ಪಾರ್ಕ್ ಮಾಡುವ ಯೋಜನೆ ಇದೆ. ಮುಂದಿನ ಏಳೆಂಟು ವರ್ಷದಲ್ಲಿ ದಿನದ ೨೪ ಗಂಟೆಯೂ ವಿದ್ಯುತ್ ನೀಡಲು ಕ್ರಮ ವಹಿಸಲಾಗುವುದು ಎಂದರು.-- (ಬಾಕ್ಸ್) --ಕಾಂಗ್ರೆಸ್ ಅಭ್ಯರ್ಥಿಗೆ ಜಯ ಖಚಿತಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ ಬಾರಿ ಜಯಗಳಿಸುವುದು ನಿಶ್ಚಿತ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಕ್ಷೇತ್ರದಲ್ಲಿ ಈಗಾಗಲೇ ನಾಲ್ಕು ಜನ ಮುಖಂಡರು ಟಿಕೆಟ್ ಆಕಾಂಕ್ಷಿಗಳಾಗಿದ್ದು, ಪಕ್ಷದ ನಾಯಕರು ಯಾರಿಗೆ ಟಿಕೆಟ್ ನೀಡುತ್ತಾರೋ ಅವರ ಪರವಾಗಿ ಕೆಲಸ ಮಾಡಿ ಗೆಲ್ಲಿಸಿಕೊಂಡು ಬರಲಾಗುವುದು. ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು, ಅಭಿವೃದ್ಧಿ ಕಾಮಗಾರಿಗಳನ್ನು ಜನರಿಗೆ ತಲುಪಿಸಿ ಚುನಾವಣೆಯಲ್ಲಿ ಮತ ಯಾಚನೆ ಮಾಡಲಾಗುವುದು ಎಂದು ಹೇಳಿದರು.೧೬ಬಿಹೆಚ್ಆರ್ ೨: ಟಿ.ಡಿ.ರಾಜೇಗೌಡ