ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ 5ನೇ ರಾಜ್ಯ ಹಣಕಾಸು ಆಯೋಗದ ಸಭೆ
ನಗರದಲ್ಲಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಸರಬರಾಜು ಹಾಗು ಒಳಚರಂಡಿ ವ್ಯವಸ್ಥೆಯ ಯುಜಿಡಿ ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ. ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೊಸಪೇಟೆ ನಗರಸಭೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ 5ನೇ ರಾಜ್ಯ ಹಣಕಾಸು ಆಯೋಗದ ಸಭೆಯಲ್ಲಿ ಅವರು ಬುಧವಾರ ಮಾತನಾಡಿದರು.ನಗರದ ಎಲ್ಲ ವಾರ್ಡಗಳಿಗೆ ನಿಗದಿತ ವೇಳೆಗೆ ಕುಡಿಯುವ ನೀರು ಸರಬರಾಜು ಹಾಗು ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಬೇಕು. ಕುಡಿಯುವ ನೀರಿನ ಪೈಪ್ಲೈನ್ಗಳನ್ನು ವೈಜ್ಞಾನಿಕವಾಗಿ ಅಳವಡಿಸಬೇಕು. ಅಭಿವೃದ್ಧಿಗೆ ಆದ್ಯತೆ ನೀಡಿ ಮೂಲಭೂತ ಸೌಕರ್ಯ ಒದಗಿಸಲು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅನಗತ್ಯ ಕ್ರಿಯಾ ಯೋಜನೆ ರೂಪಿಸಿ ಸರ್ಕಾರದ ಹಣವನ್ನು ದುರ್ಬಳಕೆ ಮಾಡಿಕೊಳ್ಳದಂತೆ ಎಚ್ಚರಿಕೆ ನೀಡಿದರು.
ಪೌರಾಯುಕ್ತ ಸಿ.ಚಂದ್ರಪ್ಪ ಮಾತನಾಡಿ, ಐದನೇ ರಾಜ್ಯ ಹಣಕಾಸು ಆಯೋಗದ ಮಾಹಿತಿಯನ್ನು ನೀಡಿ ನಗರದಲ್ಲಿ 35 ವಾರ್ಡ್ಗಳಿದ್ದು, ಪ್ರತಿ ವಾರ್ಡ್ಗಳಲ್ಲಿ ಚುನಾಯಿತ ಪ್ರತಿನಿಧಿಗಳು ಇದ್ದಾರೆ. ನಗರಸಭೆಯಲ್ಲಿ ಒಟ್ಟು 540 ಹುದ್ದೆಗಳಿವೆ. ಅವುಗಳಲ್ಲಿ 240 ಹುದ್ದೆಗಳು ಭರ್ತಿಯಾಗಿದ್ದು, ಪ್ರಸ್ತುತ 300 ಹುದ್ದೆಗಳು ಖಾಲಿ ಇವೆ. 156 ಕಾಯಂ ಪೌರಕಾರ್ಮಿಕರು ಹಾಗೂ ಹೊರಗುತ್ತಿಗೆಯಲ್ಲಿ 55 ಪೌರಕಾರ್ಮಿಕರು ಸೇರಿದಂತೆ ಒಟ್ಟು 211 ಪೌರಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆಂದು ಮಾಹಿತಿ ನೀಡಿದರು.
ಈ ವೇಳೆಯಲ್ಲಿ 5ನೇ ರಾಜ್ಯ ಹಣಕಾಸು ಆಯೋಗ ಸದಸ್ಯರಾದ ಮಹಮ್ಮದ್ ಸನಾವುಲ್ಲ, ಆರ್.ಎಸ್. ಫೋಂಡೆ, ಸಮಾಲೋಚಕರಾದ ಸುಪ್ರಸನ್ನ, ಕೆಂಪೇಗೌಡ, ಅಪ್ತ ಕಾರ್ಯದರ್ಶಿ ಏಲಕ್ಕಿ ಗೌಡ, ನಗರಸಭೆ ಉಪಾಧ್ಯಕ್ಷ ರಮೇಶ್ ಗುಪ್ತ, ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಶಂಕ್ರಿ, ಪೌರಾಯುಕ್ತ ಸಿ.ಚಂದ್ರಪ್ಪ ಸೇರಿದಂತೆ ನಗರಸಭೆಯ ಎಲ್ಲಾ ಸದಸ್ಯರು ಭಾಗವಹಿಸಿದ್ದರು.