ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಸೋಮನಗೌಡ ಎಂ. ಪಾಟೀಲ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪರಮೇಶ್ವರಪ್ಪ ಪಟ್ಟಣಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.
- ಪ್ರಧಾನ ಕಾರ್ಯದರ್ಶಿ ಪರಮೇಶ್ವರಪ್ಪ । ೨.೪ ವರ್ಷ ಅವಧಿಗೆ ಆಯ್ಕೆ - - - ಕನ್ನಡಪ್ರಭ ವಾರ್ತೆ ಹರಿಹರ
ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಸೋಮನಗೌಡ ಎಂ. ಪಾಟೀಲ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪರಮೇಶ್ವರಪ್ಪ ಪಟ್ಟಣಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.
ಭಾನುವಾರ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿಯಲ್ಲಿ ಮುಂದಿನ ೨ ವರ್ಷ ಹಾಗೂ ೪ ತಿಂಗಳ ಅವಧಿಗೆ, ಸಮಿತಿಯ ೪೩ ಸದಸ್ಯರಲ್ಲಿ ೩೬ ಸದಸ್ಯರ ಸಮಕ್ಷಮ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಸಮಾಜದ ಹಿರಿಯರಾದ ಬಸವರಾಜ್ ದಿಂಡೂರು ಮಾತನಾಡಿ, ರಾಜ್ಯಾಧ್ಯಕ್ಷ ಜಿ.ಪಿ. ಪಾಟೀಲ್ ಹಾಗೂ ಪ್ರಧಾನ ಕಾರ್ಯದರ್ಶಿ ಬಿ. ಲೋಕೇಶ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ, ಸಮಾಜದ ಸಂಘಟನೆಯ ಹಿತದೃಷ್ಠಿಯಿಂದ ಈ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.
ನಿಯೋಜಿತ ಅಧ್ಯಕ್ಷ ಸೋಮನಗೌಡ ಎಂ. ಪಾಟೀಲ್ ಮಾತನಾಡಿ, ರಾಜ್ಯದ ಮೂಲೆ ಮೂಲೆಗೂ ಸಂಚರಿಸಿ, ಸಮಾಜದ ಸಂಘಟನೆ ಮಾಡುವ ಮೂಲಕ ಕಟ್ಟಕಡೆಯ ವ್ಯಕ್ತಿಯನ್ನು ತಲುಪುವ ಪ್ರಯತ್ನ ಮಾಡುತ್ತೇನೆ ಎಂದರು.
ಸಂಘದ ಸಂಸ್ಥಾಪಕ ಡಾ. ಹನುಮನಾಳ್ ಅವರ ಆಸೆಯಂತೆ ಈ ಸಮಾಜವನ್ನು ಕಟ್ಟುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಮಹಿಳಾ ಘಟಕ, ಯುವ ಘಟಕ ಹಾಗೂ ನೌಕರರ ಘಟಕಗಳನ್ನು ಇನ್ನಷ್ಟು ಕ್ರಿಯಾಶೀಲ ಮತ್ತು ಸದೃಢವಾಗಿ ಕೆಲಸ ಮಾಡುವಂತೆ ಸಂಘಟನೆ ಮಾಡಲಾಗುವುದು ಎಂದರು.
ರಾಜ್ಯದ ಪ್ರತಿ ಜಿಲ್ಲೆ, ತಾಲೂಕು ಹಾಗೂ ಪ್ರತಿಯೊಂದು ಹಳ್ಳಿಗಳನ್ನು ಸಂಪರ್ಕಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಜಿಲ್ಲಾಧ್ಯಕ್ಷರನ್ನು ಕೇಂದ್ರ ಸ್ಥಾನಕ್ಕೆ ಕರೆಸಿ, ಸಭೆ ಮಾಡದೇ ನಾನೇ ಜಿಲ್ಲೆ ಹಾಗೂ ತಾಲೂಕಿಗೆ ಭೇಟಿ ನೀಡುತ್ತೇನೆ ಎಂದರು.
ಮುಂಬರುವ ಜಿಪಂ, ತಾಪಂ ಸೇರಿದಂತೆ ಸ್ಥಳೀಯ ಹಾಗೂ ರಾಜ್ಯ ಮಟ್ಟದ ಚುನಾವಣೆಯಲ್ಲಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಆಗುವ ನಿಟ್ಟಿನಲ್ಲಿ ಸಂಘಟನೆ ಚಟುವಟಿಕೆಯನ್ನು ಚುರುಕುಗೊಳಿಸುವ ಕಾರ್ಯ ಮಾಡಲಾಗುವುದು ಎಂದರು.
ಅ.೬ರಂದು ಹರಿಹರ ಪೀಠದ ಆವರಣದಲ್ಲಿ ಸುಮಾರು ೧೦ ಸಾವಿರಕ್ಕೂ ಹೆಚ್ಚು ಸಮಾಜ ಬಾಂಧವರ ಸಮ್ಮುಖದಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಹರಿಹರ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಭಾನುವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೂತನ ಅಧ್ಯಕ್ಷ ಹಾಗೂ ಪ್ರದಾನ ಕಾರ್ಯದರ್ಶಿ ಆಯ್ಕೆ ಮಾಡಲಾಯಿತು. ಬಿ.ಸಿ.ಉಮಾಪತಿ, ಸೋಮನಗೌಡ ಎಂ. ಪಾಟೀಲ್, ಪರಮೇಶ್ವರಪ್ಪ ಪಟ್ಟಣಶೆಟ್ಟಿ, ಬಸವರಾಜ್ ದಿಂಡೂರು, ಮುಖಂಡರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.