ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಈಗಾಗಲೇ ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್ನಿಂದ ವಿತರಿಸಲಾಗಿರುವ ಅಕ್ಷತೆಯನ್ನು ಮನೆಯ ದೇವರ ಕೋಣೆಯಲ್ಲಿಟ್ಟು ಪೂಜೆ ಸಲ್ಲಿಸಲಾಗುತ್ತಿದೆ. ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲು ಕೆಲವು ದೇವಾಲಯಗಳಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ.
ಜ.22ರಂದು ಪಟ್ಟಣದ ಶ್ರೀರಾಮ ಮಂದಿರ, ಗಣಪತಿ ದೇವಾಲಯ, ಸೋಮೇಶ್ವರ ದೇವಾಲಯ, ಬಸವೇಶ್ವರ ದೇವಾಲಯ, ಆಂಜನೇಯ ದೇವಾಲಯ, ಶ್ರೀಮುತ್ತಪ್ಪ-ಅಯ್ಯಪ್ಪ ದೇವಾಲಯ, ಬಜೆಗುಂಡಿ ಅಯ್ಯಪ್ಪ ದೇವಾಲಯ, ಸಿದ್ದಲಿಂಗಪುರ-ಅರಶಿನಕುಪ್ಪೆಯ ಶ್ರೀಮಂಜುನಾಥ ಮತ್ತು ನವನಾಗನಾಥ ಸನ್ನಿಧಿ ಸೇರಿದಂತೆ ಗ್ರಾಮೀಣ ಭಾಗದ ಬಹುತೇಕ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೆಲವೊಂದು ದೇವಾಲಯಗಳಲ್ಲಿ ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನದಾನ ಮಾಡಲು ಸಿದ್ಧತೆ ಕೈಗೊಳ್ಳಲಾಗಿದೆ.ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ತಮ್ಮ ತಮ್ಮ ಗ್ರಾಮಗಳಲ್ಲಿರುವ ದೇವಾಲಯಗಳಲ್ಲಿ ಶ್ರೀರಾಮನ ಹೆಸರಿನಲ್ಲಿ ವಿಶೇಷ ಪೂಜೆಗಳನ್ನು ನಿರ್ವಹಿಸುವುದು, ಸಂಜೆ ಮನೆಗಳಲ್ಲಿ 5 ದೀಪಗಳನ್ನು ಬೆಳಗಿಸಿ ಉತ್ತರಾಭಿಮುಖವಾಗಿ ಆರತಿ ಮಾಡುವುದು, ಕುಟುಂಬ ವರ್ಗದೊಂದಿಗೆ ಪೂಜೆಗಳನ್ನು ನೆರವೇರಿಸಬೇಕೆಂಬ ಸೂಚನೆಯನ್ನು ಕಾರ್ಯಕರ್ತರಿಗೆ ನೀಡಲಾಗಿದ್ದು, ಅದರಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಪ್ರಮುಖರು ತಿಳಿಸಿದ್ದಾರೆ.