ಕನ್ನಡಪ್ರಭ ವಾರ್ತೆ ಕೊರಟಗೆರೆ
ಲಕ್ಷ್ಮಿದೇವಮ್ಮ ಅವರ ಕಿರಿಯ ಮಗಳನ್ನು ವಿವಾಹವಾಗಿದ್ದ ದಂತ ವೈದ್ಯ ಡಾ.ರಾಮಚಂದ್ರ (47)ನೇ ಪ್ರಮುಖ ಆರೋಪಿಯಾಗಿದ್ದಾನೆ. ಈತ 2ನೇ ವಿವಾಹವಾಗಿದ್ದ.
ಕೊಲೆಗೆ ಸಹಕರಿಸಿದ ಆರೋಪದ ಮೇಲೆ ಆತನ ಇಬ್ಬರು ಸ್ನೇಹಿತರಾದ ತಾಲೂಕಿನ ಕಲ್ಲಹಳ್ಳಿ ಗ್ರಾಮದ ಸತೀಶ್ (38), ಕಿರಣ್ (32) ಸೇರಿ ಒಟ್ಟು ಮೂವರನ್ನು ಬಂಧಿಸಲಾಗಿದೆ.ತಾನೇ ಅತ್ತೆಯನ್ನು ಕೊಂದು, ಮೃತದೇಹವನ್ನು 18 ತುಂಡುಗಳಾಗಿ ಕತ್ತರಿಸಿ, ಸಿದ್ಧರಬೆಟ್ಟ ಹಾಗೂ ಚಿಂಪುಗಾನಹಳ್ಳಿ ಬಳಿ ವಿವಿಧ ಕಡೆ ಎಸೆದಿದ್ದಾಗಿ ಆರೋಪಿ ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ. ಅತ್ತೆಯ ಕಿರುಕುಳ ತಾಳಲಾರದೆ ಕೊಲೆ ಮಾಡಿದ್ದಾನೆ ಎಂಬ ವಿಚಾರ ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಈ ಮಧ್ಯೆ, ಆ.7ರಂದು ಕೊರಟಗೆರೆಯ ಚಿಂಪುಗಾನಹಳ್ಳಿಯ ಮುತ್ಯಾಲಮ್ಮ ದೇವಸ್ಥಾನದ ಬಳಿಯಿಂದ ಸಿದ್ದರಬೆಟ್ಟದ ರಸ್ತೆವರೆಗೂ ಸರಿಸುಮಾರು 30 ಕಿ.ಮೀ.ವ್ಯಾಪ್ತಿಯಲ್ಲಿ 18 ಸ್ಥಳಗಳಲ್ಲಿ ಕಪ್ಪು, ಹಳದಿ ಕವರ್ಗಳಲ್ಲಿ ಮಹಿಳೆಯ ದೇಹದ ಅಂಗಾಂಗಗಳು ದೊರಕಿದ್ದವು. ಅದೇ ದಿನ ರಾತ್ರಿ ಸಿದ್ಧರಬೆಟ್ಟದ ಸಮೀಪದಲ್ಲಿ ಕೊಳೆತ ಸ್ಥಿತಿಯಲ್ಲಿ ತಲೆ ಹಾಗೂ ಬಟ್ಟೆ ಸಿಕ್ಕಿತ್ತು. ಅವರ ಕುಟುಂಬಸ್ಥರನ್ನು ಕರೆದು ವಿಚಾರಿಸಿದ್ದು, ಕೈ ಮೇಲಿನ ಹಚ್ಚೆ, ಮುಖದ ಮೇಲಿನ ಕೆಲವು ಗುರುತು, ಉಡುಪುಗಳ ಆಧಾರದ ಮೇಲೆ ಕೊಲೆಯಾಗಿರುವುದು ಲಕ್ಷ್ಮಿದೇವಮ್ಮ ಎಂಬುದು ದೃಢಪಟ್ಟಿತ್ತು.ಆದರೆ, ಮೃತರ ಗುರುತು ಪತ್ತೆ ಸಮಯದಲ್ಲಿ ರಾಮಚಂದ್ರ ಕಾಣಿಸಿರಲಿಲ್ಲ. ಅಲ್ಲದೆ, ಅತ್ತೆಯನ್ನು ಬಿಟ್ಟು ಬರಲು ಹೋಗಿದ್ದವನು, ಮರುದಿನವೇ ಧರ್ಮಸ್ಥಳ ಪ್ರವಾಸಕ್ಕೆ ಹೋಗಿದ್ದ. ಅತ್ತೆ ಕಾಣೆಯಾಗಿದ್ದರ ಬಗ್ಗೆಯೂ ಸಮರ್ಪಕ ಉತ್ತರ ನೀಡಲಿಲ್ಲ. ಇದು ಅನುಮಾನಕ್ಕೆ ಕಾರಣವಾಗಿತ್ತು. ಹೀಗಾಗಿ, ಪೊಲೀಸರು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದರು. ವಿಚಾರಣೆ ವೇಳೆ, ಆತ ಕೊಲೆ ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ.
ಅತ್ತೆ ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂಬ ಅಸಮಾಧಾನದಿಂದ ಆರೋಪಿ ಕೊಲೆ ಮಾಡಿದ್ದಾಗಿ ತಿಳಿಸಿದ್ದಾನೆ ಎಂದು ಎಸ್ಪಿ ಅಶೋಕ್ ಕುಮಾರ್ ಹೇಳಿದ್ದಾರೆ.