ಕನ್ನಡಪ್ರಭ ವಾರ್ತೆ ಹಾಸನಶೀಘ್ರದಲ್ಲಿಯೇ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳ ಬಿಎಸ್ಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಬಿಎಸ್ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ರಾಮ್ ಜಿ. ಗೋಪಾಲ್ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಮಾಧ್ಯಮದೊಂದಿಗೆ ಮಾತನಾಡಿ, ರಾಜ್ಯದ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಈ ಬಾರಿ ಕಣಕ್ಕೆ ಇಳಿಸಲು ಬಿಎಸ್ಪಿ ಯೋಜನೆ ರೂಪಿಸಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಜಿಲ್ಲಾ ಹಾಗೂ ಬೂತ್ ಮಟ್ಟದಲ್ಲಿ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಮಾಡಿ ಚುನಾವಣೆ ಸಿದ್ಧತೆ ನಡೆಸಲಾಗುತ್ತಿದೆ. ಚಾಮರಾಜನಗರ, ಹಾಸನ ಸೇರಿದಂತೆ ವಿವಿದೆಡೆ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿಗೆ ಉತ್ತಮ ಜನಸ್ಪಂದನೆ ವ್ಯಕ್ತವಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಕೂಡ ಕನಿಷ್ಟ ಎರಡು ಸ್ಥಾನವನ್ನು ಗೆಲ್ಲುವ ವಿಶ್ವಾಸ ಇದೆ ಎಂದರು. ಪಕ್ಷದ ಮುಖಂಡ ಮುನಿಯಪ್ಪ ಮಾತನಾಡಿ, ಸಕಲೇಶಪುರದಲ್ಲಿ ಬಿಎಸ್ಪಿ ಮುಖಂಡರ, ಕಾರ್ಯಕರ್ತರ ಸಭೆ ಕರೆಯಲಾಗಿದ್ದು, ಪ್ರತಿ ಜಿಲ್ಲೆ, ತಾಲೂಕು, ಹಾಗೂ ಬೂತ್ ಮಟ್ಟದಲ್ಲಿ ಕೂಡ ಸಭೆ ನಡೆಸಿ ಈ ಬಾರಿ ಬಿಎಸ್ಪಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಸಲುವಾಗಿ ಪಣ ತೊಡಲಾಗಿದೆ ಎಂದರು. ಎಲ್ಲಾ ತಳ ಹಂತದ ಸಮುದಾಯಕ್ಕೆ ರಕ್ಷಣೆ ನೀಡಿ, ಅವರಿಗೆ ಸಮವಾಗಿ ಹಕ್ಕುಗಳನ್ನು ನೀಡಿ ಸಮಸಮಾಜ ನಿರ್ಮಾಣ ಮಾಡಲು ಬಿಎಸ್ಪಿ ಮುಂದಾಗಿದೆ. ಆದುದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನರು ಬಿಎಸ್ಪಿ ಬೆಂಬಲಿಸಿ ಸಹಕಾರ ನೀಡುವಂತೆ ಮನವಿ ಮಾಡಿದರು. ಈಗಾಗಲೇ ಹಾಸನ ಜಿಲ್ಲೆಯ ಎಂಪಿ ಅಭ್ಯರ್ಥಿಯಾಗಿ ಬಿಎಸ್ಪಿ ರಾಜ್ಯ ಉಪಾಧ್ಯಕ್ಷ ಗಂಗಾಧರ್ ಬಹುಜನ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.