11ರಂದು ಮಂಗಳೂರಿನಲ್ಲಿ ವಿಶಿಷ್ಟರಿಗಾಗಿ ವಿಶಿಷ್ಟ ಮೇಳ

KannadaprabhaNewsNetwork |  
Published : Jan 08, 2026, 03:00 AM IST
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡುತ್ತಿರುವುದು. | Kannada Prabha

ಸಾರಾಂಶ

ಸೇವಾ ಭಾರತಿ ಮಂಗಳೂರು ಅಂಗಸಂಸ್ಥೆ ಆಶಾಜ್ಯೋತಿ ವತಿಯಿಂದ ಕೆನರಾ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದಲ್ಲಿ ‘ವಿಶಿಷ್ಟರಿಗಾಗಿ ವಿಶಿಷ್ಟ ಮೇಳ- 2026’ ಜ.11ರಂದು ಬೆಳಗ್ಗೆ 8.30ರಿಂದ ಸಂಜೆ 4.15ರವರೆಗೆ ನಗರದ ಡೊಂಗರಕೇರಿಯ ಕೆನರಾ ಹೈಸ್ಕೂಲ್‌ ಮೈದಾನದಲ್ಲಿ ನಡೆಯಲಿದೆ.

ಮಂಗಳೂರು: ಸೇವಾ ಭಾರತಿ ಮಂಗಳೂರು ಅಂಗಸಂಸ್ಥೆ ಆಶಾಜ್ಯೋತಿ ವತಿಯಿಂದ ಕೆನರಾ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದಲ್ಲಿ ‘ವಿಶಿಷ್ಟರಿಗಾಗಿ ವಿಶಿಷ್ಟ ಮೇಳ- 2026’ ಜ.11ರಂದು ಬೆಳಗ್ಗೆ 8.30ರಿಂದ ಸಂಜೆ 4.15ರವರೆಗೆ ನಗರದ ಡೊಂಗರಕೇರಿಯ ಕೆನರಾ ಹೈಸ್ಕೂಲ್‌ ಮೈದಾನದಲ್ಲಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಶಾಜ್ಯೋತಿ ಸಂಸ್ಥೆಯ ಅಧ್ಯಕ್ಷೆ ಗೀತಾ ಲಕ್ಷ್ಮೇಶ್‌, ದ.ಕ., ಉಡುಪಿ ಜಿಲ್ಲೆಗಳ ವಿಶೇಷ ಶಾಲೆಗಳ ಮಕ್ಕಳ ಸಹಿತ ಎಲ್ಲ ವಯೋಮಾನದ ದಿವ್ಯಾಂಗರಿಗಾಗಿ ಈ ಮೇಳ ಏರ್ಪಡಿಸಲಾಗಿದೆ ಎಂದರು.

ಏನೇನು ಕಾರ್ಯಕ್ರಮ?:

ಬೆಳಗ್ಗೆ 8.30ಕ್ಕೆ ನೋಂದಣಿ, 9.30ಕ್ಕೆ ಸಭಾ ಕಾರ್ಯಕ್ರಮ, 10.15ರಿಂದ ದಿವ್ಯಾಂಗರಿಗೆ ವಿವಿಧ ಚಟುವಟಿಕೆಗಳು, ಮನೋರಂಜನೆಗಳು, ಮಧ್ಯಾಹ್ನ 1ಕ್ಕೆ ಭೋಜನ, 2ರಿಂದ ದಿವ್ಯಾಂಗರಿಂದ ಪ್ರತಿಭಾ ಪ್ರದರ್ಶನ ನಡೆಯಲಿದೆ. ತಿರುಗುವ ಕುದುರೆ, ತಿರುಗುವ ತೊಟ್ಟಿಲು, 25ಕ್ಕೂ ಅಧಿಕ ತಿಂಡಿ ತಿನಿಸುಗಳ ಮಳಿಗೆಗಳು, ಪಾನೀಯ ಮಳಿಗೆಗಳು, ಹಣ್ಣಿನ ಅಂಗಡಿಗಳು, ಬೇತಾಳ ಕುಣಿತ, ಮನೋರಂಜನಾ ಆಟಗಳು, ಕುದುರೆ, ಒಂಟೆ ಸವಾರಿ ಇರಲಿದೆ. ಮೇಳದಲ್ಲಿ ವಿಶಿಷ್ಟರಿಗೆ ಎಲ್ಲವೂ ಮುಕ್ತ ಮತ್ತು ಉಚಿತ ಎಂದು ಗೀತಾ ಲಕ್ಷ್ಮೇಶ್‌ ತಿಳಿಸಿದರು.

18 ವರ್ಷ ಮೇಲ್ಪಟ್ಟ ಸ್ವಲೀನತೆ (ಆಟಿಸಂ), ಸೆರೆಬ್ರಲ್‌ ಪಾಲ್ಸಿ, ಮಾನಸಿಕ ಕುಂಠಿತ ದಿವ್ಯಾಂಗರಿಗೆ ಕಾನೂನು ಬದ್ಧ ಪೋಷಕತ್ವ ಪ್ರಮಾಣ ಪತ್ರ ಪಡೆಯುವ ಬಗ್ಗೆ ಮತ್ತು ನಿರಾಮಯ ಆರೋಗ್ಯ ಕಾರ್ಡ್‌ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಬಾರಿಯ ಮೇಳದಲ್ಲಿ ನೀಡಲಾಗುವುದು. ‘ಸಕ್ಷಮ’ ಸಂಸ್ಥೆ ವತಿಯಿಂದ ದಿವ್ಯಾಂಗರ ಸಬಲೀಕರಣ ಮತ್ತು ನೇತ್ರದಾನದ ಬಗ್ಗೆ ಮಾಹಿತಿ ನೀಡಲಾಗುವುದು. 7 ಮಂದಿ ದಿವ್ಯಾಂಗ ವಿದ್ಯಾರ್ಥಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದರು.

ಅಂದು ಬೆಳಗ್ಗೆ 9.30ಕ್ಕೆ ಮೇಳದ ಉದ್ಘಾಟನೆಯನ್ನು ನಿಟ್ಟೆ ವಿವಿ ಉಪ ಸಹ ಕುಲಪತಿ ಡಾ. ಶಾಂತಾರಾಮ್‌ ಶೆಟ್ಟಿ ನೆರವೇರಿಸುವರು. ಕರ್ಣಾಟಕ ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ರಾಘವೇಂದ್ರ ಎಸ್‌. ಭಟ್‌, ಎಂಆರ್‌ಪಿಎಲ್‌ ಮಂಗಳೂರು ಮಾನವ ಸಂಪನ್ಮೂಲ ವಿಭಾಗದ ಜಿಜಿಎಂ ಕೃಷ್ಣ ಹೆಗ್ಡೆ ಮಿಯಾರ್‌ ಅತಿಥಿಯಾಗಿ ಭಾಗವಹಿಸುವರು ಎಂದು ತಿಳಿಸಿದರು.

ಆಶಾಜ್ಯೋತಿ ಜತೆ ಕಾರ್ಯದರ್ಶಿ ಗಣರಾಜ ವೈ., ಖಜಾಂಚಿ ಕೆ. ವಿಶ್ವನಾಥ ಪೈ, ಜತೆ ಕಾರ್ಯದರ್ಶಿ ಫಣೀಂದ್ರ, ಸೇವಾಭಾರತಿ ಮಂಗಳೂರು ಗೌರವ ಕಾರ್ಯದರ್ಶಿ ಎಚ್‌. ನಾಗರಾಜ ಭಟ್‌, ಖಜಾಂಚಿ ಪಿ. ವಿನೋದ್‌ ಶೆಣೈ ಇದ್ದರು.

ದಿವ್ಯಾಂಗರಿಗೆ ಶಾಶ್ವತ ನೆಲೆ ಕಲ್ಪಿಸುವ ಉದ್ದೇಶದಿಂದ ಸೇವಾ ಭಾರತಿ ವತಿಯಿಂದ ನರಿಂಗಾನ ಗ್ರಾಮದ ಮೊಂಟೆಪದವಿನಲ್ಲಿ ‘ಮಾಧವ ವನ’ ಆರಂಭಿಸಲಾಗಿದೆ. ಪ್ರಸ್ತುತ ಅಲ್ಲಿ ಹಗಲು ಪಾಲನಾ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. 300 ಮಂದಿ ದಿವ್ಯಾಂಗರಿಗೆ ಶಾಶ್ವತ ವಸತಿ ವ್ಯವಸ್ಥೆಯ ಸಾಮರ್ಥ್ಯ ಇರುವ ಈ ಕೇಂದ್ರದಲ್ಲಿ ದಿನದ 24 ಗಂಟೆಯೂ ದಿವ್ಯಾಂಗರಿಗೆ ವಸತಿ ವ್ಯವಸ್ಥೆ ಶೀಘ್ರ ಆರಂಭವಾಗಲಿದೆ ಎಂದು ಸೇವಾಭಾರತಿ ಮಂಗಳೂರು ಗೌರವ ಕಾರ್ಯದರ್ಶಿ ಎಚ್‌. ನಾಗರಾಜ ಭಟ್‌ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ