ಕುಮಟಾ: ಜಿಲ್ಲಾ ಪ್ರವಾಸದಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಶಾಸಕ ದಿನಕರ ಶೆಟ್ಟಿ ಅವರು ಶುಕ್ರವಾರ ಭೇಟಿ ಮಾಡಿ, ಕ್ಷೇತ್ರದ ಅಭಿವೃದ್ಧಿ ಹಾಗೂ ಬೇಡಿಕೆಗಳ ಕುರಿತು ಚರ್ಚಿಸಿದ್ದಾರೆ.
ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಪರ ಕಾರ್ಯಗಳನ್ನು ಮಾಡಿದ್ದೇವೆ. ಆದರೆ ಕಳೆದೊಂದು ವರ್ಷದಿಂದ ಅಭಿವೃದ್ಧಿ ಮಾಡಲು ಸಾಧ್ಯವಾಗದೆ ಅನುದಾನವು ಬರದೇ ಜನರಿಗೆ ತೀವ್ರ ನಿರಾಸೆಯಾಗಿದೆ. ಕೇಂದ್ರದಿಂದ ಅನುದಾನ ಒದಗಿಸುವುದರ ಮೂಲಕ ಜನತೆಯ ಮೂಲ ಸೌಕರ್ಯ, ಶಿಕ್ಷಣ, ಪ್ರವಾಸೋದ್ಯಮ ಅಭಿವೃದ್ಧಿಗೆ ನೆರವಾಗುವಂತೆ ಅವರು ಮನವಿ ಸಲ್ಲಿಸಿದರು. ಇದೇ ವೇಳೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಕ್ಷೇತ್ರದ ಪರವಾಗಿ ಶಾಸಕರು ಸನ್ಮಾನಿಸಿದರು.
ಈ ವೇಳೆ ಹೊಲನಗದ್ದೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎಂ. ಹೆಗಡೆ, ಬಿಜೆಪಿ ಮುಖಂಡ ಜಿ.ಎಸ್. ಗುನಗ, ಪ್ರಸಾದ ನಾಯಕ, ತಾಪಂ ಮಾಜಿ ಸದಸ್ಯ ಜಗನ್ನಾಥ ನಾಯ್ಕ, ದೀವಗಿ ಗ್ರಾಪಂ ಅಧ್ಯಕ್ಷ ಜಗದೀಶ ಭಟ್ಟ ಇತರರು ಇದ್ದರು.