ಕನ್ನಡಪ್ರಭ ವಾರ್ತೆ ಮಣಿಪಾಲ
ಮುಕ್ತ ನ್ಯಾಯಸಮ್ಮತ ಪಾರದರ್ಶಕವಾಗಿ ಚುನಾವಣೆ ನಡೆಯಲು ಅಭ್ಯರ್ಥಿಗಳ ಮತ್ತು ಪಕ್ಷಗಳ ಚುನಾವಣಾ ವೆಚ್ಚದ ನಿಯೋಜಿಸಲಾಗಿರುವ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು ಎಂದು ರಾಜ್ಯ ವಿಶೇಷ ವೆಚ್ಚ ವೀಕ್ಷಕ ಬಿ.ಮುರುಳಿ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ಶನಿವಾರ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಂಬಂಧಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕನಿಷ್ಟ 3 ಚೆಕ್ಪೋಸ್ಟ್ಗಳನ್ನು ತೆರೆಯಬೇಕು, ತಪಾಸಣೆ ತೀವ್ರಗೊಳಿಸಿ ಹಣ ಮತ್ತು ಮಧ್ಯ ಸೇರಿದಂತೆ ಇನ್ನಿತರ ಸಾಮಗ್ರಿಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಬೇಕು, ವಸ್ತುಗಳಿದ್ದಲ್ಲಿ ಎಲ್ಲಿಂದ ಬರುತ್ತಿವೆ, ಯಾವ ಪ್ರದೇಶಕ್ಕೆ ತಲುಪುತ್ತಿದೆ ಎಂಬ ದಾಖಲೆಗಳನ್ನು ಪರಿಶೀಲಿಸಬೇಕು, ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಕಟ್ಟೆಚ್ಚರ ವಹಿಸಬೇಕು. 10 ಲಕ್ಷ ರು.ಗಿಂತ ಹೆಚ್ಚು ಹಣ ಸಾಗಾಣಿಕೆ ಮಾಡುತಿದ್ದರೆ ಆದಾಯ ತೆರಿಗೆ ಇಲಾಖಾಧಿಕಾರಿಗಳಿಗೆ ಹಾಗೂ ಚುನಾವಣಾ ವೆಚ್ಚ ವೀಕ್ಷಕರಿಗೆ ಮಾಹಿತಿ ನೀಡಬೇಕು ಎಂದರು.ಮತದಾರರಲ್ಲಿ ಮತದಾನದ ಕುರಿತು ಅರಿವು ಮೂಡಿಸುವದರೊಂದಿಗೆ ಶೇಕಡವಾರು ಮತದಾನ ಹೆಚ್ಚಿಸಬೇಕು. ಮತದಾನ ಕೇಂದ್ರಗಳಲ್ಲಿ ಮತದಾರರಿಗೆ ನೆರಳು, ಕುಡಿಯುವ ನೀರು ಸೇರಿದಂತೆ ಇತರೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಜಿಲ್ಲೆಯಲ್ಲಿ ಪಾರದರ್ಶಕತೆ ಚುನಾವಣೆ ನಡೆಸಲು ವಿವಿಧ ತಂಡಗಳನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ನೇಮಿಸಿರುವ ಬಗ್ಗೆ ಹಾಗೂ ಚುನಾವಣಾ ಸಿದ್ಧತೆಯ ಬಗ್ಗೆ ವಿವರವಾಗಿ ವಿವರಿಸಿದ್ದರು.ಸಭೆಯಲ್ಲಿ ಜಿಲ್ಲಾ ವೆಚ್ಚ ವಿಕ್ಷಕರಾದ ಅಲೋಕ್ ಕುಮಾರ್, ಎಂ.ಸಿ.ಸಿ. ನೋಡಲ್ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್ ಹಾಗೂ ಕರಾವಳಿ ಕಾವಲು ಪಡೆ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್, ಡಿ.ಎಫ್.ಓ. ಗಣಪತಿ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಹಾಗೂ ಹೆಚ್ಚವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ವಿವಿಧ ಸಮಿತಿಯ ನೋಡಲ್ ಅಧಿಕಾರಿಗಳು ಹಾಗೂ ಇನ್ನಿತರು ಉಪಸ್ಥಿತರಿದ್ದರು.
ಸಭೆಯ ನಂತರ ಮುರಳಿಕುಮಾರ್ ಅವರು ಜಿಲ್ಲಾ ಮಾಧ್ಯಮ ಪ್ರಮಾಣಿಕರಣ ಹಾಗೂ ಕಣ್ಗಾವಲು ಕಚೇರಿಗೆ, ಸಾಮಾಜಿಕ ಜಾಲತಾಣ ನಿಗಾ ಸಮಿತಿಯ ಕಚೇರಿಗೆ ಚುನಾವಣಾ ಕಚೇರಿಯ ಕಟ್ರೋಲ್ ರೂಂ ಹಾಗೂ ಸಿ-ವಿಜಲ್ ಕೇಂದ್ರಕ್ಕೆ ಭೇಟಿ ನೀಡಿದರು.