ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ೫೨ ದಿನಗಳು ಸ್ವಾಮಿಯ ಸನ್ನಿಧಿಯಲ್ಲಿ ಭಕ್ತರು ಪ್ರತಿದಿನ ಪೂಜೆ ಸಲ್ಲಿಸುವುದು ಆಚರಿಸಿಕೊಂಡು ಬಂದಿರುವ ಪದ್ಧತಿ, ಈ ಹಿನ್ನೆಲೆಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಸಂಜೆ ೭ ಗಂಟೆಗೆ ವಿಘ್ನ ನಿವಾರಕನಿಗೆ ಪೂಜೆ ಸಲ್ಲಿಸಿ, ಸರ್ವ ಭಕ್ತಾದಿಗಳಿಗೆ ಪ್ರಸಾದವನ್ನು ವಿತರಿಸಿದರು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯು ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರನ್ನು ಅಭಿನಂದಿಸಿದರು.
ಈ ವೇಳೆ ಮಾತನಾಡಿದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ದರಾಜು, ಕನ್ನಡ ನಾಡು ಕಲೆ, ಸಂಸ್ಕೃತಿಯ ಬೀಡು, ಇಲ್ಲಿ ಕಲೆಯನ್ನು ಆರಾಧಿಸಿ, ಪೂಜೆಸುವ ಮನಸ್ಥಿತಿ ಹೊಂದಬೇಕು. ಕಲೆಯನ್ನು ಇಂದಿನ ಯುವಪೀಳಿಗೆಗೆ ಪರಿಚಯಿಸಿ, ಅದರಲ್ಲಿ ತೊಡಗಿಸುವ ಹಿನ್ನೆಲೆಯಲ್ಲಿ ಪಟ್ಟಣದ ಗಣಪತಿ ಪೆಂಡಾಲ್ ಗಣೇಶನನ್ನು ಪ್ರತಿಷ್ಠಾಪಿಸಿ ಪ್ರತಿವರ್ಷ ಸಣ್ಣ ಮಕ್ಕಳಿಂದ ಹಿಡಿದು ದೊಡ್ಡ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಿಸುತ್ತಿರುವುದು ಹೆಮ್ಮೆಯ ವಿಚಾರವೆಂದರು.ಗಣಪತಿ ಸೇವಾ ಸಮಿತಿ ಅಧ್ಯಕ್ಷ ಸಿ.ಎನ್.ಅಶೋಕ್ ಮಾತನಾಡಿ, ನಾಡಿನ ಕಲೆಗೆ ಸಾಕಷ್ಟು ಗೌರವ, ಮೌಲ್ಯವಿದ್ದು, ಇದನ್ನು ಇಂದಿನ ಮಕ್ಕಳಲ್ಲಿ ಪ್ರೋತ್ಸಾಹಿಸಿ ಬೆಳೆಸುವ ನಿಟ್ಟಿನಲ್ಲಿ ಗಣಪತಿ ಸೇವಾ ಸಮಿತಿಯು ಪ್ರತಿವರ್ಷ ಸ್ಥಳೀಯ ಕಲಾವಿದರಿಗೆ ಹೆಚ್ಚು ಆದ್ಯತೆ ನೀಡಿ ವೇದಿಕೆ ಕಲ್ಪಿಸುವ ಕೆಲಸ ಮಾಡುತ್ತಿದೆ. ಈ ವೇದಿಕೆಯಲ್ಲಿ ಬೆಳೆದು ಇದೀಗ ನಾಡಿನ ಹೆಸರಾಂತ ಕಲಾವಿದರಾಗಿದ್ದಾರೆ. ಸಮಿತಿ ಮಾಡುವ ಸತ್ಕಾರ್ಯಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯವೆಂದರು.
ಇದೇ ಸಂದರ್ಭದಲ್ಲಿ ಗಣಪತಿ ಸೇವಾ ಸಮಿತಿಯ ಸದಸ್ಯರಾದ ಮಹದೇವ್, ಸೋಮಶೇಖರ್, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ವಿಠ್ಠಲದಾಸರು, ಶಂಕರಾಚಾರ್ ಮತ್ತಿತರಿದ್ದರು.