‘ಬಿಎನ್ಎಸ್ನಲ್ಲಿ ದ್ವೇಷ ಭಾಷಣದ ಕಾನೂನು ದುರ್ಬಲ, ರಾಜ್ಯದ ಕಾನೂನು ತಿದ್ದುಪಡಿ ಆಗಲಿ’ಕನ್ನಡಪ್ರಭ ವಾರ್ತೆ ಮಂಗಳೂರುಕೋಮು ಸಂಘರ್ಷ ನಿಗ್ರಹಕ್ಕೆ ರಾಜ್ಯ ಸರ್ಕಾರ ನೂತನವಾಗಿ ರಚನೆ ಮಾಡಿರುವ ವಿಶೇಷ ಕಾರ್ಯಪಡೆಗೆ ಪೂರಕ ಕಾನೂನೇ ಇಲ್ಲದಿರುವುದರಿಂದ ಈ ಕಾರ್ಯಪಡೆ ಹಲ್ಲಿಲ್ಲದ ಹಾವಿನಂತಾಗಿದೆ ಎಂದು ಹೈಕೋರ್ಟ್ನ ಹಿರಿಯ ವಕೀಲ, ಆಲ್ ಇಂಡಿಯಾ ಪ್ರಾಕ್ಟೀಸಿಂಗ್ ಲಾಯರ್ಸ್ ಕೌನ್ಸಿಲ್ ಕರ್ನಾಟಕ ರಾಜ್ಯಾಧ್ಯಕ್ಷ ಎಸ್. ಬಾಲನ್ ಹೇಳಿದ್ದಾರೆ.
ರಾಜ್ಯದಲ್ಲಿ ಕೋಮು ಸಂಘರ್ಷ ನಿಗ್ರಹಕ್ಕಾಗಿ ‘ಆಂಟಿ ಕಮ್ಯೂನಲ್ ಲಾ’ ಮಾಡುವುದಾಗಿ ಹೇಳಲಾಗಿದ್ದರೂ ಇದುವರೆಗೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ಇಂಥ ಸ್ಪಷ್ಟ, ಪೂರಕ ಕಾನೂನು ಇಲ್ಲದಿದ್ದರೆ ವಿಶೇಷ ಕಾರ್ಯಪಡೆ ಮಾಡಿ ಉಪಯೋಗವಿಲ್ಲದಂತಾಗಿದೆ ಎಂದರು.
ದ್ವೇಷಭಾಷಣ ಕಾನೂನೇ ದುರ್ಬಲ:ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್)ಯಲ್ಲಿ ಸೆಕ್ಷನ್ 173 ಸೇರಿಸಿ ಈ ಕಾನೂನನ್ನು ದುರ್ಬಲಗೊಳಿಸಿದ್ದರಿಂದಲೇ ಕೋಮು ದ್ವೇಷ ಭಾಷಣ ಪ್ರಕರಣಗಳಲ್ಲಿ ಹೈಕೋರ್ಟ್ನಲ್ಲಿ ತಡೆ ಸಿಗುತ್ತಿದೆ ಎಂದು ವಿಶ್ಲೇಷಿಸಿದ ಬಾಲನ್, ಈ ಕುರಿತಾದ ಕರ್ನಾಟಕದ ಕಾನೂನಿಗೆ ಸೂಕ್ತ ತಿದ್ದುಪಡಿ ತಂದರೆ ದ್ವೇಷ ಭಾಷಣ ಮಾಡುವವರಿಗೆ ಸೂಕ್ತ ಶಿಕ್ಷೆ ನೀಡಬಹುದು. ಈ ಕಾರ್ಯ ತುರ್ತಾಗಿ ಆಗಬೇಕಿದೆ ಎಂದು ಹೇಳಿದರು.
ಯಾವುದೇ ಸಮುದಾಯಗಳನ್ನು ಟಾರ್ಗೆಟ್ ಮಾಡುವ ಎಲ್ಲ ಕೊಲೆ ಕೃತ್ಯಗಳಲ್ಲಿ ಯುಎಪಿಎ ಕಾಯ್ದೆಯನ್ವಯ ಪ್ರಕರಣ ದಾಖಲಿಸಬೇಕು, ಇಲ್ಲವೇ ಇರುವ ಕಾನೂನಿಗೆ ತಿದ್ದುಪಡಿ ತರಬೇಕು. ಆಗ ಮಾತ್ರ ಎಲ್ಲ ರೀತಿಯ ಕೋಮು ಆಧಾರಿತ ದುಷ್ಕೃತ್ಯಗಳನ್ನು ತಡೆಯಲು ಸಾಧ್ಯ ಎಂದರು.
ಸಮಿತಿಯ ಪ್ರಮುಖರಾದ ಮಜೀದ್ ಖಾನ್, ಜಯರಾಮ್ ಹಾಸನ್, ವಾಸಿಮ್ ಶರೀಫ್, ಆಸ್ಮ ಇದ್ದರು.