ಕನ್ನಡಪ್ರಭ ವಾರ್ತೆ ಮಂಡ್ಯ
ಆಷಾಢ ಶುಕ್ರವಾರದ ಪ್ರಯುಕ್ತ ಮೊನ್ನೆಯಿಂದಲೇ ದೇವಾಲಯಗಳಲ್ಲಿ ಸ್ವಚ್ಛತೆ, ವಿವಿಧ ಕಾರ್ಯಗಳು ನಡೆದವು. ಮುಂಜಾನೆ 5 ಗಂಟೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.
ನಗರದ ಬನ್ನೂರು ರಸ್ತೆಯ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜೆ ನಡೆಯಿತು. ನೂರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಅರ್ಚನೆ, ಅಭಿಷೇಕ ಸೇರಿದಂತೆ ವಿವಿಧ ಪೂಜೆಗಳು ಜರುಗಿದವು. ನಗರದ ಪೇಟೆ ಬೀದಿಯ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲೂ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು. ದೇವಳಕ್ಕೆ ಆಗಮಿಸಿದ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.ನಗರದ ಶಕ್ತಿ ದೇವತೆ ಶ್ರೀ ಕಾಳಿಕಾಂಬ ದೇವಾಲಯದಲ್ಲೂ ಆಷಾಢ ಶುಕ್ರವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಗಳು ನಡೆದವು. ಎಂದಿನಂತೆ ದೇವಾಲಯಕ್ಕೆ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು. ಚಿಕ್ಕೇಗೌಡನದೊಡ್ಡಿ ಬಡಾವಣೆಯ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲೂ ವಿಶೇಷ ಪೂಜೆ ನಡೆಯಿತು. ಉಳಿದಂತೆ ಶ್ರೀರಂಗಪಟ್ಟಣ ಗೋವಿಂದಪ್ಪ ಬೀದಿಯ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಬೆಳಗಿನಿಂದಲೇ ದೇವಾಲಯಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದು ಪುನೀತರಾದರು.
ಮದ್ದೂರು, ಪಾಂಡವಪುರ, ಕೆ.ಆರ್.ಪೇಟೆ, ಮಳವಳ್ಳಿ ಹಾಗೂ ನಾಗಮಂಗಲ ತಾಲೂಕಿನಲ್ಲಿರುವ ಶಕ್ತಿ ದೇವತೆ ಹಾಗೂ ಚಾಮುಂಡೇಶ್ವರಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಗಳು ಸಾಂಗೋಪ ಸಾಂಗವಾಗಿ ನೆರವೇರಿದವು. ಭಕ್ತರು ದೇವಳಕ್ಕೆ ತೆರಳಿ ಪೂಜೆ ಸಲ್ಲಿಸುತ್ತಿರುವುದು ಕಂಡುಬಂತು.