ವಿಶೇಷಚೇತನರು ಸಾಧನೆಯತ್ತ ಗಮನಹರಿಸಿ: ಶುಭಾ

KannadaprabhaNewsNetwork | Published : Dec 4, 2024 12:31 AM

‘ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ’ ಎಂಬ ಘೋಷವಾಕ್ಯದೊಂದಿಗೆ ನಗರದ ಓಂಕಾರ ಸದನದಲ್ಲಿ ಮಂಗಳವಾರ ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮ ನೆರವೇರಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ವಿಶೇಷಚೇತನರು ವಿಕಲತೆ ಇದೆ ಎಂದು ಕೊರಗದೆ ಸಾಧನೆಯತ್ತ ಮುನ್ನಡೆಯಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭಾ ಸಲಹೆ ಮಾಡಿದ್ದಾರೆ.

‘ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ’ ಎಂಬ ಘೋಷವಾಕ್ಯದೊಂದಿಗೆ ನಗರದ ಓಂಕಾರ ಸದನದಲ್ಲಿ ಮಂಗಳವಾರದ ನಡೆದ ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಜನ ಸೇವಾ ಕ್ರೀಡಾ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯುವ ಸಂಘ, ಕೊಡಗು ಶಾಖೆ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಶೇಷ ಮಕ್ಕಳ ಶಾಲೆಗಳ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಕೆಲವರು ಹುಟ್ಟಿನಿಂದಲೇ ವಿಶೇಷಚೇತನರಾಗುತ್ತಾರೆ. ಆದ್ದರಿಂದ ಧೃತಿಗೆಡದೆ ಆರೋಗ್ಯ, ಶಿಕ್ಷಣದತ್ತ ಗಮನಹರಿಸಿ ಹೆಚ್ಚಿನ ಸಾಧನೆ ಮಾಡಲು ಪ್ರಯತ್ನಿಸಬೇಕು ಎಂದು ಶುಭ ಹೇಳಿದರು.

ವಿವಿಧ ಕ್ಷೇತ್ರಗಳಲ್ಲಿ ವಿಶೇಷಚೇತನರಿಗೆ ವಿಶೇಷ ಆದ್ಯತೆ ನೀಡುವುದರ ಜೊತೆಗೆ ಪ್ರೋತ್ಸಾಹಿಸಬೇಕು. ವಿಶೇಷಚೇತನರನ್ನು ಕೀಳರಿಮೆಯಿಂದ ನೋಡಬಾರದು. ಜೊತೆಗೆ ಕಡೆಗಣಿಸಬಾರದು. ಇವರಿಗೂ ಸಹ ಶ್ರೀಸಾಮಾನ್ಯರಂತೆ ಬದುಕುವ ಹಕ್ಕಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಂಜುಂಡಯ್ಯ ಮಾತನಾಡಿ, ವಿಕಲಚೇತನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ 30ಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗಿದೆ. ಮುಂದೆಯೂ ಆರೋಗ್ಯ ಶಿಬಿರ ನಡೆಯಲಿದ್ದು, ವಿಶೇಷ ಚೇತನರು ಪ್ರಮಾಣಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಮುಂದಾಗಬೇಕು ಎಂದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ವಿಮಲ ಕೆ.ಜಿ. ಮಾತನಾಡಿ, ವಿಶೇಷಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು, ಸಮಾನ ಅವಕಾಶ ಹಾಗೂ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದರು.

ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ನಿರ್ದೇಶಕಿ ಎಸ್.ಆರ್.ದೀಪಾಶ್ರೀ ಮಾತನಾಡಿ, ವಿಶೇಷಚೇತನರನ್ನು ಮುಖ್ಯವಾಹಿನಿಗೆ ತರಲು ಹಾಗೂ ಸ್ವಾವಲಂಬಿಗಳಾಗಿ ಮಾಡಲು ಅವಕಾಶವಿದೆ. ಆ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ವಿಶೇಷಚೇತನರ ಸಂಘದ ಅಧ್ಯಕ್ಷೆ ಜೆ.ಎ.ಮಹೇಶ್ವರ ಮಾತನಾಡಿ, ವಿಕಲಚೇತನರ ನೋವಿಗೆ ಎಲ್ಲರೂ ಸ್ಪಂದಿಸುವಂತಾಗಬೇಕು. ಸಮಸ್ಯೆಗಳನ್ನು ಆಲಿಸುವಂತಾಗಬೇಕು ಎಂದರು.

ಗಿರೀಶ್, ಗೀತಾ, ಶಿವರಾಜ್, ಇತರರು ಮಾತನಾಡಿದರು. ವಿಶೇಷಚೇತನ ಕುಶ್ ಪ್ರಾರ್ಥಿಸಿದರು, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ ನಿರೂಪಿಸಿ, ವಂದಿಸಿದರು.