ಶಿರಸಿ: ತಾಲೂಕಿನ ವಿವಿಧ ಗ್ರಾಪಂಗಳಿಗೆ ಜಿಪಂ ಸಿಇಒ ಈಶ್ವರಕುಮಾರ್ ಕಾಂದೂ ಬುಧವಾರ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.ಇಸಳೂರು ಪ್ರೌಢಶಾಲೆಯಲ್ಲಿ ನಿರ್ಮಾಣವಾದ ಚೆಸ್ ಪಾರ್ಕ್ ಕಾಮಗಾರಿ ಪರಿಶೀಲಿಸಿ, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೂ ಅನುಕೂಲವಾಗುವಂತೆ ರೂಪಿಸಲು ಅಗತ್ಯ ಸಲಹೆ ನೀಡಿದರು.
ತರಗತಿಯಲ್ಲಿ ಮಕ್ಕಳೊಂದಿಗೆ ಆಟದೊಂದಿಗೆ ನಿಮ್ಮ ಕಲಿಕೆ ಉತ್ತಮ ಯಶಸ್ಸು ಪಡೆಯಲಿ ಎಂದು ಹಾರೈಸಿದರು. ಈ ವೇಳೆ ಇಲ್ಲಿನ ಸರ್ಕಾರಿ ಉರ್ದು ಶಾಲೆಗೆ ಭೇಟಿ ನೀಡಿ ಅಲ್ಲಿನ ಶಾಲಾ ಕೊಠಡಿ ಹಾಗೂ ಅಡುಗೆ ಕೋಣೆಯ ಕುರಿತಾದ ಸಮಸ್ಯೆಗಳನ್ನು ಅರಿತು ಸೂಕ್ತ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಉರ್ದು ಶಾಲೆಯಲ್ಲಿ ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಶೌಚಾಲಯ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.
ನಂತರ ಪ್ರಗತಿಯಲ್ಲಿರುವ ತಾಪಂ ಕಟ್ಟಡ ಕಾಮಗಾರಿ ಪರಿಶೀಲಿಸಿ ಈಗಾಗಲೇ ಕಟ್ಟಡ ಉದ್ಘಾಟನೆಗೊಂಡು ಕಚೇರಿ ಸ್ಥಳಾಂತರಗೊಂಡಿರಬೇಕಿತ್ತು. ಆದರೆ ಇನ್ನೂ ಕಾಲಾವಕಾಶ ನೀಡುವುದಿಲ್ಲ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಿ ಕಾರ್ಯಾರಂಭವಾಗಬೇಕು ಇಲ್ಲವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.ಬನವಾಸಿ ಗ್ರಾಪಂ ವ್ಯಾಪ್ತಿಯಲ್ಲಿ ಜೆಜೆಎಂ ಕಾಮಗಾರಿ ಸ್ಥಳ ಪರಿಶೀಲಿಸಿ ಗ್ರಾಮದಲ್ಲಿ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರಗತಿಯಲ್ಲಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು. ಗ್ರಾಪಂ ಪ್ರತಿನಿಧಿಗಳಲ್ಲಿ ಗ್ರಾಮದಲ್ಲಿನ ಸಮಸ್ಯೆಗಳ ಕುರಿತು ಚರ್ಚಿಸಿದರು.
ಇಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಗತಿಯಲ್ಲಿರುವ ಕುಂಬಾರಕಟ್ಟೆ ಕೆರೆ ಕಾಮಗಾರಿ ಸ್ಥಳ ಪರಿಶೀಲಿಸಿ ನರೇಗಾದಡಿ ಅಭಿವೃದ್ಧಿಪಡಿಸಬಹುದಾದ ವಿಭಿನ್ನ ಕಾಮಗಾರಿಗಳನ್ನು ಕೈಗೊಳ್ಳುವಂತೆ ತಿಳಿಸಿದರು.ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ, ತಾಪಂ ಇಒ ಚನ್ನಬಸಪ್ಪ ಹಾವಣಗಿ, ಪಿಡಿಒಗಳು, ತಾಪಂ ಅಧಿಕಾರಿಗಳು, ಸಿಬ್ಬಂದಿ ಇದ್ದರು.