ಕಂದಾಯ ಇಲಾಖೆಯ ಆಡಳಿತಾತ್ಮಕ ಕೆಲಸಗಳ ವೇಗ ಹೆಚ್ಚಿಸಿ: ಡಾ. ವಿಜಯಮಹಾಂತೇಶ್ ದಾನಮ್ಮನವರ

KannadaprabhaNewsNetwork |  
Published : Jul 20, 2025, 01:15 AM IST
19ಎಚ್‌ವಿಆರ್‌2 | Kannada Prabha

ಸಾರಾಂಶ

ಶಿಗ್ಗಾಂವಿ ಮತ್ತು ಹಿರೇಕೆರೂರು ತಹಸೀಲ್ದಾರ್ ಕಚೇರಿಗಳಿಗೆ ಹಾವೇರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ಹಾವೇರಿ: ಕಂದಾಯ ಇಲಾಖೆಯ ಕೆಲಸಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಇ-ಆಫೀಸ್‌ ವ್ಯವಸ್ಥೆ ಅಳವಡಿಸಲಾಗಿದೆ. ಇದನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ ಕಡತಗಳನ್ನು ತುರ್ತಾಗಿ ವಿಲೇ ಮಾಡಬಹುದು. ಇದರಿಂದ ಜನರ ಕೆಲಸಗಳನ್ನು ವಿಳಂಬ ಮಾಡದೇ ತುರ್ತಾಗಿ ಮಾಡಿಕೊಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಹೇಳಿದರು.

ಶಿಗ್ಗಾಂವಿ ಮತ್ತು ಹಿರೇಕೆರೂರು ತಹಸೀಲ್ದಾರ್ ಕಚೇರಿಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ತಾಲೂಕು ತಹಸೀಲ್ದಾರ್ ಕಚೇರಿಗಳ ರೆಕಾರ್ಡ್ ರೂಮನಲ್ಲಿರುವ ಜನ ಸಾಮಾನ್ಯರ ದಾಖಲೆಗಳನ್ನು ಸ್ಕ್ಯಾನ್ ಮಾಡುವ ಮೂಲಕ ಶಾಶ್ವತವಾಗಿ ಅವುಗಳನ್ನು ಉಳಿಸಲು ಡಿಜಿಟಲೀಕರಣ ವ್ಯವಸ್ಥೆ ಜಾರಿಗೊಳಿಸಿದೆ. ದಾಖಲೆಗಳ ರಕ್ಷಣೆಗೆ ಉತ್ತಮ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು, ಈ ನಿಟ್ಟಿನಲ್ಲಿ ಜನಸಾಮಾನ್ಯರ ದಾಖಲೆಗಳನ್ನು ರಕ್ಷಿಸಿ, ಅವರಿಗೆ ಸುಲಭವಾಗಿ ದೊರೆಯುವಂತೆ ಮಾಡುವುದಾಗಿದೆ. ಇತ್ತೀಚೆಗೆ ಕಂದಾಯ ಸಚಿವರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಕುರಿತು ವಿಷಯ ಪ್ರಸ್ತಾಪಿಸಿದಾಗ ಯಾವುದೇ ಕಚೇರಿಗಳು ನಿಗದಿತ ಗುರಿ ತಲುಪಲಿರುವುದಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಕೂಡಲೇ ಆಗಿರುವ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಿ ವಿಳಂಬ ಮಾಡದೇ ದಾಖಲೆಗಳ ಡಿಜಿಟಲೀಕರಣಕ್ಕೆ ಒತ್ತು ನೀಡಬೇಕು ಎಂದರು.

ಭೂ ನಿರ್ವಹಣೆಯನ್ನು ಸರಳ ಮತ್ತು ಹೆಚ್ಚು ಪಾರದರ್ಶಕವಾಗಿಸಲು ಆಧಾರ್ ಸೀಡಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಮುಂದಿನ ಒಂದು ವಾರದಲ್ಲಿ ಎಲ್ಲ ತಾಲೂಕಿನ ಕಂದಾಯ ಇಲಾಖೆಗಳು ಪ್ರಗತಿ ವರದಿ ಸಲ್ಲಿಸಬೇಕು. ತಪ್ಪಿದಲ್ಲಿ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.

ಕಂದಾಯ ಗ್ರಾಮ, ಉಪ ಗ್ರಾಮ ಪ್ರಸ್ತಾವನೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಇ- ಪಾವತಿ ಖಾತೆಯನ್ನು ಆಂದೋಲನ ಮಾದರಿಯಲ್ಲಿ ಎಲ್ಲ ಗ್ರಾಮಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಪ್ರಚಾರ ಮಾಡಿ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಹಾಗೂ ಪ್ರಗತಿ ಸಾಧಿಸಿ ವರದಿ ಸಲ್ಲಿಸಬೇಕು ಎಂದರು.

ಬಗರಹುಕುಂ ಅಡಿಯಲ್ಲಿ ದುರ್ಬಳಕೆ ತಡೆಗಟ್ಟಲು ಡಿಜಿಟಲ್ ಸಹಿಗೆ ಅವಕಾಶ ಮಾಡಿಕೊಟ್ಟು ಡಿಜಿಟಲ್ ಸಾಗುವಳಿ ಚೀಟಿಯನ್ನು ನೀಡಲಾಗುತ್ತದೆ. ಹೀಗಾಗಿ ಸಂಬಂಧಿಸಿದ ಸಿಬ್ಬಂದಿ ತಮ್ಮ ತಮ್ಮ ಲಾಗಿನ್‌ನಲ್ಲಿರುವ ಕಡತಗಳನ್ನು ಕೂಡಲೇ ವಿಲೇ ಮಾಡಬೇಕು. ಯಾವುದನ್ನೂ ಲಾಗಿನ್‌ನಲ್ಲಿ ಉಳಿಸಿಕೊಳ್ಳದೆ ನಿಗದಿಪಡಿಸಿದ ದಿನದೊಳಗೆ ಎಲ್ಲ ವಿಲೇವಾರಿ ಆಗುವಂತೆ ನೋಡಿಕೊಳ್ಳಬೇಕು ಎಂದರು.

ಸಿಬ್ಬಂದಿ ನಿಸ್ವಾರ್ಥವಾಗಿ ಸಮನ್ವಯದೊಂದಿಗೆ ಕೆಲಸ ಮಾಡಬೇಕು. ಆಗ ಮಾತ್ರ ಉತ್ತಮ ಕೆಲಸಗಾರ ಎಂದೆನಿಸಿಕೊಳ್ಳುತ್ತಾರೆ. ಜನರ ಸೇವೆ ಮಾಡಲು ಇಲಾಖೆ ಕೆಲಸಕ್ಕೆ ಬಂದಿದ್ದೀರಿ. ಆ ನಿಟ್ಟಿನಲ್ಲಿ ಮಾತ್ರ ವಿಚಾರ ಮಾಡಿ ಎಂದು ಜಿಲ್ಲಾಧಿಕಾರಿ ಸಿಬ್ಬಂದಿಗೆ ಸಲಹೆ ನೀಡಿದರು.

ಸಭೆಯಲ್ಲಿ ತಹಸೀಲ್ದಾರ್ ರೇಣುಕಾ, ಗ್ರೇಡ್-2 ತಹಸೀಲ್ದಾರ್‌ ಸಿದ್ದನಗೌಡ್ರ, ಉಪ ತಹಸೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮಾಡಳಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

PREV

Latest Stories

ಸಹನೆ, ತಾಳ್ಮೆ, ನೈತಿಕತೆಯಿಂದ ಯಶಸ್ಸು ಸಾಧ್ಯ
ಚಿಕ್ಕಬಳ್ಳಾಪುರಕ್ಕೂ ಬರಲಿದೆ ಕುಸುಮ್‌ ಯೋಜನೆ
ಆರೋಗ್ಯ ಇಲಾಖೆ ಸಿಬ್ಬಂದಿಗೆ ಹೆಪಟೈಟಿಸ್ ಬಿ ಲಸಿಕೆ