ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ । ಎಂ. ಸಮಿವುಲ್ಲಾ ಜನ್ಮದಿನಕನ್ನಡಪ್ರಭ ವಾರ್ತೆ ಅರಸೀಕೆರೆ
ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ಹಾಗೂ ವೀಕ್ಷಿಸುವ ಹವ್ಯಾಸ ಬೆಳೆಸಿಕೊಳ್ಳುವುದರಿಂದ ಮನರಂಜನೆ ಮಾತ್ರ ದೊರೆಯುವುದಿಲ್ಲ. ಪರಸ್ಪರ ಪ್ರೀತಿ, ವಿಶ್ವಾಸ ವೃದ್ಧಿಸಲು ಸಹಕಾರಿಯಾಗಲಿದೆ ಎಂದು ಕರ್ನಾಟಕ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರೂ ಆದ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.ನಗರಸಭೆ ಮಾಜಿ ಅಧ್ಯಕ್ಷ ಎಂ ಸಮಿವುಲ್ಲಾ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳ ಬಳಗದ ವತಿಯಿಂದ ನಗರದ ಸರ್ಕಾರಿ ಹಳೆಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಆಯೋಜಿಸಿದ್ದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ಕ್ರೀಡೆ ಎಂಬುದು ಊರು-ಕೇರಿ, ರಾಜ್ಯ,ರಾಷ್ಟ್ರ ಅಷ್ಟೇ ಅಲ್ಲದೆ ದೇಶ, ವಿದೇಶಗಳ ನಡುವೆ ಬಾಂಧವ್ಯ ಬೆಸೆಯುವ ಕೊಂಡಿಯಂತಾಗಿದೆ. ಅಲ್ಲದೆ ವೈಯಕ್ತಿಕವಾಗಿಯೂ ಒತ್ತಡ ನಿವಾರಣೆ ಮಾಡಿಕೊಳ್ಳಲು ಕ್ರೀಡೆ ಎಂಬುದು ಒಂದು ಸಾಧನವಾಗಿದೆ ಎಂದು ಕಿವಿ ಮಾತು ಹೇಳಿದರು.ಈ ರೀತಿಯ ಕ್ರೀಡಾಕೂಟಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಗೆ ನನಗೂ ಹೆಚ್ಚಿನ ಒಲವಿದ್ದು ಈ ರೀತಿಯ ಕಾರ್ಯಕ್ರಮಗಳಿಗೆ ನನ್ನ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಹರ್ಬನ್ ಕೋ ಆಪರೇಟಿವ್ ಬ್ಯಾಂಕ್ನ ಅಧ್ಯಕ್ಷ ಅಬ್ದುಲ್ ಜಮೀಲ್ ಮಾತನಾಡಿ, ರಾಜಕೀಯ ಕ್ಷೇತ್ರದ ಮೂಲಕ ಜನರ ಸೇವೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟಿರುವ ಶಾಸಕ ಶಿವಲಿಂಗೇಗೌಡರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಜತೆಗೆ ಈ ರೀತಿಯ ಆಟೋಟ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಜಾನಪದ ಉತ್ಸವಗಳು, ಜನಪರ ಹೋರಾಟಗಳಿಗೆ ಹೆಚ್ಚಿನ ನೆರವು, ಸಹಕಾರ ನೀಡುತ್ತ ಬಂದಿರುವುದರಿಂದ ಸತತ ನಾಲ್ಕು ಬಾರಿಗೆ ಕ್ಷೇತ್ರದ ಶಾಸಕರಾಗಿ ಆಯ್ಕೆ ಆಗುವ ಮೂಲಕ ಯುವ ರಾಜಕಾರಣಿಗಳಿಗೆ ಆದರ್ಶರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮುಸ್ಲಿಂ ಸಮಾಜದ ಮುಖಂಡರಾದ ಸೈಯದ್ ಟಿಪ್ಪು, ಕೆಜಿಎನ್ ತೌಸೀಫ್, ಮನನ್, ಸೈಯದ್ ಪೀರ್, ಸುಯಲ್ ಪಾಷಾ, ಅಮ್ಜದ್ ಪಾಷಾ, ಸೂಫಿಯಾನ್ ಇದ್ದರು.ನಗರದ ಸರ್ಕಾರಿ ಹಳೆಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಆಯೋಜಿಸಿದ್ದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಶಾಸಕ ಕೆ,ಎಂ ಶಿವಲಿಂಗೇಗೌಡ ಮಾತನಾಡಿದರು.