ಕನ್ನಡಪ್ರಭ ವಾರ್ತೆ ಅರಸೀಕೆರೆ
ನಗರದ ಕ್ರೀಡಾಂಗಣದಲ್ಲಿ ಕಸಬಾ–2 ವ್ಯಾಪ್ತಿಯ 14 ವರ್ಷ ವಯೋಮಾನದ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಆದ್ಯತೆ ನೀಡಬೇಕು. ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪಾಲನೆ ಹಾಗೂ ಸ್ಪರ್ಧಾ ಮನೋಭಾವ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ತಾಲೂಕಿನಲ್ಲಿ ಆಯೋಜಿಸಲಾಗುತ್ತಿರುವ ವಿವಿಧ ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸುತ್ತಿರುವುದು ಸಂತಸದ ವಿಚಾರ. ಗ್ರಾಮೀಣ ಹಾಗೂ ಸರ್ಕಾರಿ ಶಾಲೆಗಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ಅವಕಾಶ ಕಲ್ಪಿಸುವ ಮೂಲಕ ಭವಿಷ್ಯದ ಉತ್ತಮ ಕ್ರೀಡಾಪಟುಗಳನ್ನು ರೂಪಿಸಬೇಕಿದೆ ಎಂದು ತಿಳಿಸಿದರು.ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಉಮೇಶ್ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿ, ಕಸಬಾ–2 ವ್ಯಾಪ್ತಿಯ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲು ಆರು ಬ್ಲಾಕ್ಗಳ ಸಿಆರ್ಪಿಗಳು, ಇಸಿಒಗಳು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಸಹಕಾರ ನೀಡಿದ್ದಾರೆ. ವಿದ್ಯಾರ್ಥಿಗಳು ಕ್ರೀಡೆಯನ್ನು ಜೀವನದ ಭಾಗವನ್ನಾಗಿಸಿಕೊಂಡು ದೇಹ ಮತ್ತು ಮನಸ್ಸನ್ನು ಸದೃಢವಾಗಿಟ್ಟುಕೊಳ್ಳಬೇಕು. ಇದರಿಂದ ಭವಿಷ್ಯದ ಗುರಿ ಸಾಧಿಸಲು ಏಕಾಗ್ರತೆ ಸಾಧ್ಯವಾಗುತ್ತದೆ ಎಂದರು.
ಕ್ರೀಡಾಕೂಟದ ಆಯೋಜಕ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್ ಮಾತನಾಡಿ, ಕ್ರೀಡಾಕೂಟದ ಯಶಸ್ಸಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಸಿಆರ್ಪಿಗಳು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ನೀಡಿದ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.