ಕನ್ನಡಪ್ರಭ ವಾರ್ತೆ ಬಾಗಲಕೋಟೆ
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಸಂಗಪ್ಪ ಬುಧವಾರ ಚಾಲನೆ ನೀಡಿದರು.ಬಾಗಲಕೋಟೆಯ ನವನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಡಿದ ಅವರು, ಹಿರಿಯ ನಾಗರಿಕರ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.
ಪ್ರತಿಯೊಬ್ಬ ಹಿರಿಯ ನಾಗರಿಕರು ಕ್ರೀಡೆ ಮತ್ತು ಮನರಂಜನಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಉತ್ಸಾಹದ ಜೀವನ ನಡೆಸುವಂತೆ ಸಲಹೆ ನೀಡಿದರು.ಜಿಪಂ ಸಿಇಒ ಶಶಿಧರ ಕುರೇರ ಮಾತನಾಡಿ, ವೃದ್ಧರು ಆರೋಗ್ಯದ ಮಹತ್ವ ಮತ್ತು ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುವ ಜವಾಬ್ದಾರಿ ಹೊಂದಿದ್ದಾರೆ. ಆದ್ದರಿಂದ ವೃದ್ಧರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ, ಸಮಾಜಕ್ಕೆ ತಮ್ಮ ಅನುಭವ ಹಂಚಿಕೊಳ್ಳಬೇಕು. ಆರೋಗ್ಯ ಮತ್ತು ದೀರ್ಘಾಯುಷ್ಯ ಕುರಿತು ಕಾಳಜಿವಹಿಸಿ ಇಂದಿನ ಕಲುಷಿತ ವಾತಾವರಣದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ. ಅದಕ್ಕಾಗಿಯೇ ವೃದ್ಧರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸಿದರು.
ವೃದ್ಧರು ಯುವಕರಿಗೆ ದಾರಿದೀಪವಾಗಬೇಕು. 60-80 ವರ್ಷಗಳ ಜೀವನದಲ್ಲಿ ಹತ್ತು ಹಲವು ಅನುಭವಗಳನ್ನು ಗಳಿಸಿರುವ ವೃದ್ಧರು, ತಮ್ಮ ಜ್ಞಾನ ಮತ್ತು ಒಳ್ಳೆಯ ಅನುಭವಗಳನ್ನು ಮುಂದಿನ ಪೀಳಿಗೆಗೆ, ಅಂದರೆ ತಮ್ಮ ಮಕ್ಕಳು, ಮೊಮ್ಮಕ್ಕಳು ಮತ್ತು ಸಮಾಜಕ್ಕೆ ಹಂಚಿಕೊಳ್ಳಬೇಕು. ಇದರಿಂದ ಸಮರ್ಥ ಮತ್ತು ಸನ್ಮಾರ್ಗದಲ್ಲಿ ಸಾಗುವ ಯುವ ಪೀಳಿಗೆ ರೂಪಿಸಲು ಸಹಾಯ ಮಾಡುತ್ತದೆ. ಸಾಮಾಜಿಕ ಮತ್ತು ಮನರಂಜನಾ ಕಾರ್ಯಕ್ರಮಗಳಲ್ಲಿ ಹೆಚ್ಚು ಭಾಗವಹಿಸುವುದರಿಂದ ಮನಸ್ಸಿನಲ್ಲಿ ಸಂತೋಷ ಮತ್ತು ಉತ್ಸಾಹ ಹೆಚ್ಚುತ್ತದೆ ಎಂದು ಹೇಳಿದರು.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಗಿರಿಜಾ ಪಾಟೀಲ, ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿ ಸಿದ್ದಲಿಂಗಪ್ಪ ಗುಳೇದ ಸೇರಿದಂತೆ ಹಿರಿಯ ನಾಯಕರು ಉಪಸ್ಥಿತರಿದ್ದರು.
ದೈನಂದಿನ ಕೆಲಸ ಮತ್ತು ಸವಾಲುಗಳಿಂದ ಮನಸ್ಸಿನ ಮೇಲೆ ಉಂಟಾಗುವ ಒತ್ತಡ ಕಡಿಮೆ ಮಾಡಲು ಕ್ರೀಡೆಗಳಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅವಶ್ಯಕವಾಗಿದೆ. ದೈಹಿಕ ವ್ಯಾಯಾಮ, ಯೋಗ ಮತ್ತು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಬಹುದಾಗಿದೆ.- ಸಂಗಪ್ಪ ಜಿಲ್ಲಾಧಿಕಾರಿ