ಕ್ರೀಡಾ ಸಂಸ್ಥೆಗಳು ನಿಯಮಾನುಸಾರ ನೋಂದಣಿಯಾಗಲಿ: ಅರುಣ್ ಮಾಚಯ್ಯ

KannadaprabhaNewsNetwork |  
Published : May 14, 2026, 12:30 AM IST
13ಸಿಎಚ್‌ಎನ್‌51ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾ ಕ್ರೀಡಾ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ಕ್ರೀಡೆಯ ಅಭಿವೃದ್ದಿ ಸಂಬಂಧ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್. ಅರುಣ್ ಮಾಚಯ್ಯ ಅವರು ಸಮಾಲೋಚನೆ ಸಭೆ ನಡೆಸಿದರು. | Kannada Prabha

ಸಾರಾಂಶ

ಜಿಲ್ಲಾ ಕೇಂದ್ರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಳೆದ 20 ವರ್ಷಗಳಿಂದಲೂ ಅಭಿವೃದ್ಧಿ ಕಾಮಗಾರಿ ನಡೆಯುತ್ತಲೇ ಇದೆ. ಆದರೂ ಪೂರ್ಣವಾಗಿಲ್ಲ. ಕ್ರೀಡಾ ಅಂಕಣಗಳು ನಿರ್ಮಾಣವಾದರೆ ಕ್ರೀಡಾಪಟುಗಳಿಗೆ ಅನುಕೂಲವಾಗಲಿದೆ, ಬಾಲ್ ಬ್ಯಾಡ್ಮಿಂಟನ್, ನೆಟ್ ಬಾಲ್, ಖೋ ಖೋ, ಕಬ್ಬಡಿ ಸೇರಿ ಇನ್ನಿತರೆ ಕ್ರೀಡೆಗಳಿಗೆ ಜಿಲ್ಲೆಯಲ್ಲಿ ಹೆಚ್ಚಿನ ಆಸಕ್ತರಿದ್ದಾರೆ. ಇವರಿಗೆ ಕ್ರೀಡಾ ಸೌಲಭ್ಯಗಳು ಲಭ್ಯವಾದರೆ ಹೆಚ್ಚಿನ ಸಾಧನೆಗೆ ಅನುಕೂಲವಾಗುತ್ತದೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲೆಯಲ್ಲಿರುವ ಕ್ರೀಡಾ ಸಂಸ್ಥೆಗಳು ನಿಯಮಾನುಸಾರ ನೋಂದಾಯಿಸಿಕೊಳ್ಳಬೇಕು. ಇದರಿಂದ ರಾಜ್ಯ ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ದೊರೆಯುವುದಲ್ಲದೇ ಎಲ್ಲ ಸಹಕಾರವೂ ಸಿಗಲಿದೆ ಎಂದು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್. ಅರುಣ್ ಮಾಚಯ್ಯ ಅವರು ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾ ಕ್ರೀಡಾ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ಕ್ರೀಡೆಯ ಅಭಿವೃದ್ಧಿ ಸಂಬಂಧ ಸಮಾಲೋಚನೆ ಸಭೆ ನಡೆಸಿ ಅವರು ಮಾತನಾಡಿದರು.

ಕರ್ನಾಟಕ ಕ್ರೀಡಾ ಪ್ರಾಧಿಕಾರವು ರಾಜ್ಯದ ಜಿಲ್ಲೆಗಳಿಗೆ ಭೇಟಿ ನೀಡಿ ಕ್ರೀಡಾ ಸೌಲಭ್ಯಗಳನ್ನು ವೀಕ್ಷಿಸಿ ಹಾಗೂ ಕ್ರೀಡಾ ಸಂಸ್ಥೆಯ ಮುಖ್ಯಸ್ಥರನ್ನು ಭೇಟಿ ಮಾಡಿ, ಮುಂದೆ ಕ್ರೀಡಾ ಅಭಿವೃದ್ಧಿ ಸಂಬಂಧ ಕೈಗೊಳ್ಳಬೇಕಿರುವ ಕುರಿತು ಸಮಾಲೋಚನೆ ನಡೆಸುತ್ತಿದೆ. ಈಗಾಗಲೇ 22 ಜಿಲ್ಲೆಗಳಿಗೆ ಭೇಟಿ ನೀಡಲಾಗಿದೆ, ಕ್ರೀಡಾ ಅಸೋಸಿಯೇಷನ್‌ಗಳು ಇದ್ದರೆ ಕ್ರೀಡೆ ಸಂಬಂಧ ಚಟುವಟಿಕೆಗಳು ಇನ್ನಷ್ಟು ಉತ್ತಮವಾಗಿ ನಡೆದು ಕ್ರೀಡಾ ಕ್ಷೇತ್ರದ ಪ್ರಗತಿಗೆ ಅನುಕೂಲವಾಗಲಿದೆ. ಹೀಗಾಗಿ ಕ್ರೀಡಾ ಸಂಸ್ಥೆಗಳು ನೋಂದಣಿಯಾಗಬೇಕು ಎಂದರು.

ಕ್ರೀಡೆಯಲ್ಲಿ ಗ್ರಾಮಾಂತರ ಪ್ರದೇಶಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಗ್ರಾಮಾಂತರ ಭಾಗದ ಪ್ರತಿಭೆಗಳನ್ನು ಗುರುತಿಸುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ಕೆಲಸ ಮಾಡುತ್ತಿದೆ, ಮೊದಲ ಬಾರಿಗೆ ಗುಡ್ಡಗಾಡು ಪ್ರದೇಶದ ಜನರ ಕ್ರೀಡಾಕೂಟಗಳನ್ನು ಆಯೋಜಿಸಿದೆ, ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ಹೇಳಿದರು.

ಲಭ್ಯವಿರುವ ಕ್ರೀಡಾ ಸೌಲಭ್ಯಗಳನ್ನು ನಿರ್ವಹಣೆ ಮಾಡಬೇಕಿದೆ, ಮೂಲ ಸೌಕರ್ಯಗಳು ಸಹ ಸಮರ್ಪಕವಾಗಿ ಲಭ್ಯವಾದರೆ ಆದಾಯವು ಸಹ ಬರಲಿದೆ, ಜಿಲ್ಲೆಯ ಕ್ರೀಡಾಂಗಣಗಳ ಅಭಿವೃದ್ಧಿ, ಕ್ರೀಡಾಪಟುಗಳಿಗೆ ಉತ್ತೇಜನ ಸೇರಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿ ಸಂಬಂಧ ಶಾಸಕರೊಂದಿಗೂ ಸಮಾಲೋಚಿಸಲಾಗುವುದು. ಕ್ರೀಡಾ ಸಂಸ್ಥೆಗಳ ಮಾನ್ಯತೆ, ಪ್ರೋತ್ಸಾಹ ಸೇರಿ ಎಲ್ಲ ಕ್ರೀಡಾ ಚಟುವಟಿಕೆಗಳಿಗೆ ಅವಶ್ಯವಿರುವ ಸಹಕಾರ ಕ್ರೀಡಾ ಪ್ರಾಧಿಕಾರದಿಂದ ನೀಡಲಾಗುವುದೆಂದು ಅವರು ತಿಳಿಸಿದರು.

ಸಭೆಯಲ್ಲಿ ಹಾಜರಿದ್ದ ಕ್ರೀಡಾ ಸಂಸ್ಥೆಯ ಅಧ್ಯಕ್ಷರು, ಕ್ರೀಡಾಪಟುಗಳು, ಸಂಘಟನೆಗಳ ಮುಖಂಡರು ಮಾತನಾಡಿ, ಜಿಲ್ಲಾ ಕೇಂದ್ರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಳೆದ 20 ವರ್ಷಗಳಿಂದಲೂ ಅಭಿವೃದ್ಧಿ ಕಾಮಗಾರಿ ನಡೆಯುತ್ತಲೇ ಇದೆ. ಆದರೂ ಪೂರ್ಣವಾಗಿಲ್ಲ. ಕ್ರೀಡಾ ಅಂಕಣಗಳು ನಿರ್ಮಾಣವಾದರೆ ಕ್ರೀಡಾಪಟುಗಳಿಗೆ ಅನುಕೂಲವಾಗಲಿದೆ, ಬಾಲ್ ಬ್ಯಾಡ್ಮಿಂಟನ್, ನೆಟ್ ಬಾಲ್, ಖೋ ಖೋ, ಕಬ್ಬಡಿ ಸೇರಿ ಇನ್ನಿತರೆ ಕ್ರೀಡೆಗಳಿಗೆ ಜಿಲ್ಲೆಯಲ್ಲಿ ಹೆಚ್ಚಿನ ಆಸಕ್ತರಿದ್ದಾರೆ. ಇವರಿಗೆ ಕ್ರೀಡಾ ಸೌಲಭ್ಯಗಳು ಲಭ್ಯವಾದರೆ ಹೆಚ್ಚಿನ ಸಾಧನೆಗೆ ಅನುಕೂಲವಾಗುತ್ತದೆ, ಕ್ರೀಡಾ ತರಬೇತುದಾರರನ್ನು ನೇಮಕ ಮಾಡಬೇಕಿದೆ. ಇಲಾಖೆಯ ಪ್ರಶಸ್ತಿಗಳಿಗೂ ಜಿಲ್ಲೆಯ ಸಾಧಕರನ್ನು ಗುರುತಿಸಬೇಕು ಎಂಬುದೂ ಸೇರಿದಂತೆ ಹಲವು ಅಭಿಪ್ರಾಯ, ಸಮಸ್ಯೆಗಳನ್ನು ಗಮನಕ್ಕೆ ತಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಎಚ್.ಎಸ್. ಬಿಂದ್ಯಾ, ರಾಜ್ಯ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ಸಿದ್ದರಾಜು, ಕ್ರೀಡಾ ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕ್ರೀಡಾಪಟು ಶ್ರೀನಿವಾಸ ಪ್ರಸಾದ್, ಮುಖಂಡರಾದ ಚಾ.ರಂ. ಶ್ರೀನಿವಾಸಗೌಡ, ಜಿ. ಬಂಗಾರು, ರಾಜೇಂದ್ರ, ಸಿ.ಎಂ. ನರಸಿಂಹಮೂರ್ತಿ, ನಂಜುಂಡಸ್ವಾಮಿ, ಸುಮನ್, ಚೇತನ್ ದೊರೈರಾಜು, ಮಹದೇವ ಪ್ರಸಾದ್, ಮಂಜುನಾಥ್, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಗೂ ಮೊದಲು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಎಚ್.ಎಸ್. ಬಿಂದ್ಯಾ ಅವರೊಂದಿಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸಿಂಥೆಟಿಕ್ ಟ್ರ್ಯಾಕ್, ಪೆವಿಲಿಯನ್ ಸೇರಿದಂತೆ ಇತರೆ ಕ್ರೀಡಾ ಸೌಕರ್ಯಗಳನ್ನು ಪರಿಶೀಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಾಲ ಕಾರ್ಮಿಕರ ಪತ್ತೆಗೆ ಕ್ರಮವಹಿಸಲು ನ್ಯಾಯಾಧೀಶರ ಸೂಚನೆ
ಭಾರತ್ ಸ್ಕೌಟ್ಸ್ ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ವಿಶ್ವ ಅಮ್ಮಂದಿರ ದಿನ