ಹರಪನಹಳ್ಳಿ: ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.
ತಮ್ಮ ದಿನ ನಿತ್ಯದ ಒತ್ತಡದ ಜೀವನದಲ್ಲೂ ಕ್ರೀಡೆಯಲ್ಲಿ ಪಾಲ್ಗೊಂಡು ಸಾಧನೆ ಮಾಡುತ್ತಿರುವುದು ಸಂತಸದ ಸಂಗತಿ. ಸರ್ಕಾರಿ ನೌಕರರು ಕೆಲಸ, ಕಾರ್ಯದ ಜೊತೆ ಆರೋಗ್ಯದ ಕಡೆ ಗಮನ ಕೊಡಿ ಎಂದು ಸಲಹೆ ನೀಡಿದರು.ಶಿಕ್ಷಕರ ಸಂಘದ ವಿಜಯನಗರ ಜಿಲ್ಲಾದ್ಯಕ್ಷ ಬಸವರಾಜ ಸಂಗಪ್ಪನವರ್ ಮಾತನಾಡಿ, ಸರ್ಕಾರಿ ನೌಕರರು ದೈಹಿಕ, ಮಾನಸಿಕ ಒತ್ತಡಲ್ಲಿ ಕೆಲಸ ಮಾಡುತ್ತಿದ್ದಾರೆ. ಆ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ ಎಂದರು.
ಸರ್ಕಾರ ಸರ್ಕಾರಿ ನೌಕರರಿಗೆ ಜಿಲ್ಲಾ ಮಟ್ಟ ಹಾಗೂ ರಾಜ್ಯಮಟ್ಟದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಿದ್ದು, ಹರಪನಹಳ್ಳಿ ತಾಲೂಕಿನ ಸರ್ಕಾರಿ ನೌಕರ ಕ್ರೀಡಾಪಟುಗಳು ಇಡೀ ಜಿಲ್ಲೆಯಲ್ಲಿಯೇ ಅತಿಹೆಚ್ಚು ಅಂದರೆ 85 ಜನರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.ಕ್ರೀಡಾಪಟುಗಳಿಗೆ ಈ ಹಿಂದೆ ಮಾಜಿ ಶಾಸಕ ಎಂ.ಪಿ. ರವೀಂದ್ರ ಪ್ರೋತ್ಸಾಹ ನೀಡುತ್ತಿದ್ದರು. ಇದೀಗ ಅವರ ಸಹೋದರಿ ಶಾಸಕಿ ಎಂ.ಪಿ.ಲತಾ ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು.ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷೆ ಜಿ.ಪದ್ಮಲತಾ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ರಾಮಪ್ಪ ಮಾತನಾಡಿದರು.
ಹರಪನಹಳ್ಳಿಯ ಸರ್ಕಾರಿ ನೌಕರರ ಭವನದಲ್ಲಿ ರಾಜ್ಯಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾದ ಸರ್ಕಾರಿ ನೌಕರರಿಗೆ ಶಾಸಕಿ ಎಂ,ಪಿ.ಲತಾ ಮಲ್ಲಿಕಾರ್ಜುನ ಟ್ರಾಕ್ ಶೂಟ್ ಗಳನ್ನು ವಿತರಿಸಿದರು. ಬಸವರಾಜ ಸಂಗಪ್ಪನವರ್ ಇತರರು ಇದ್ದರು.