ಕನ್ನಡಪ್ರಭ ವಾರ್ತೆ ಉಡುಪಿಕೃಷ್ಣಮಠದ ಪರ್ಯಾಯ ಪೀಠಾಧೀಶ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ಪ್ರಖ್ಯಾತ ಅಧ್ಯಾತ್ಮ ಗುರು, ಅಂತಾರಾಷ್ಟ್ರೀಯ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮುಖ್ಯಸ್ಥ ಶ್ರೀ ರವಿಶಂಕರ್ ಗುರೂಜಿ ಅವರು ಮಂಗಳವಾರ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ದರ್ಶನ ಪಡೆದರು.ಅವರನ್ನು ಪುತ್ತಿಗೆ ಶ್ರೀಪಾದರು ಮತ್ತು ಕಿರಿಯ ಪಟ್ಟ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಆತ್ಮೀಯವಾಗಿ ಬರಮಾಡಿಕೊಂಡರು. ಶ್ರೀಮಠದ ವಿದ್ವಾಂಸರು ಅಧಿಕಾರಿಗಳು ಪೂರ್ಣಕುಂಭ ಸ್ವಾಗತವನ್ನು ನೀಡಿದರು.ತದನಂತರ ನಡದೆ ಸಭೆಯಲ್ಲಿ ಶ್ರೀಮಠದ ಗೌರವವನ್ನು ಸ್ವೀಕರಿಸಿದ ಗುರೂಜಿ , ದೇಶವಿದೇಶಗಳಲ್ಲಿ ನಿರಂತರವಾಗಿ ಸಂಚರಿಸುತ್ತಾ ಧರ್ಮಪ್ರಚಾರ ಕಾರ್ಯವನ್ನು ಯಶಸ್ವಿಯಾಗಿ ನಡೆಸುತ್ತಿರುವ ಪುತ್ತಿಗೆ ಶ್ರೀಪಾದರ ಕಾರ್ಯ ಅಭಿನಂದನೀಯವಾಗಿದೆ ಎಂದು ಪ್ರಶಂಸಿಸಿದರು.ಕಳೆದ ನಲವತ್ತು ವರ್ಷಗಳ ಸುದೀರ್ಘವಾದ ಆತ್ಮೀಯತೆ ನಮ್ಮಿಬ್ಬರಲ್ಲಿ ದೃಢವಾಗಿದೆ. ಅವರ ಪರ್ಯಾಯವು ಅತ್ಯಂತ ಯಶಸ್ವಿಯಾಗಿ ನೆರವೇರಲಿ ಹಾಗೂ ಕೋಟಿ ಗೀತಾ ಲೇಖನ ಯಜ್ಞದ ಕಾರ್ಯಕ್ರಮವು ನಿರ್ವಿಘ್ನವಾಗಿ ನಡೆಯಲಿ ಎಂದು ಹಾರೈಸಿದರು.
ಈ ಸಂದರ್ಭ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪರ್ಯಾಯ ಮಠದ ದಿವಾಣರಾದ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಮತ್ತು ಅನೇಕ ಭಕ್ತಗಣ್ಯರು ಉಪಸ್ಥಿತರಿದ್ದರು.