ಹೊಸಪೇಟೆ: ಮಹಾಭಾರತದ ಶ್ರೀಕೃಷ್ಣ ಸ್ವಾತಂತ್ರ್ಯಕ್ಕೆ ಸ್ಫೂರ್ತಿಯಾಗಿದ್ದಾರೆ. ಭಗವದ್ಗೀತೆಯ ಸಾರದಿಂದಲೇ ನಾವು ಸ್ವಾತಂತ್ರ್ಯಕ್ಕೆ ಹೋರಾಟಕ್ಕೆ ಅಣಿಯಾಗಿ; ಬ್ರಿಟಿಷರನ್ನು ಭಾರತದಿಂದ ತೊಲಗಿಸಿದ್ದೇವೆ ಎಂದು ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಹೇಳಿದರು.
ಶ್ರೀಕೃಷ್ಣ ಎಲ್ಲರೂ ಒಪ್ಪಿಕೊಳ್ಳುವ ಪರಿಪೂರ್ಣ ಅವತಾರ ಆಗಿದೆ. ಕೃಷ್ಣನ ಕುರಿತು ರುದ್ರಭಟ್ಟ, ಕುಮಾರವ್ಯಾಸ ಬರೆದ ಕರ್ಣಾಟ ಭಾರತ ಕಥಾಮಂಜರಿ, ತೆಲುಗಿನ ಪೋತನ ಕವಿ ಮಹಾಭಾರತ ಕೃತಿಗಳು ಕೂಡ ಶ್ರೀಕೃಷ್ಣನ ಕುರಿತೇ ಗುಣಗಾನ ಮಾಡಿವೆ. ಮಧ್ವರು ಕೂಡ ಮಹಾಭಾರತ ತಾತ್ಪರ್ಯ ನಿರ್ಣಯದ ಕುರಿತು ಹೇಳಿದ್ದಾರೆ ಎಂದರು.
ಶಿವ ಮತ್ತು ವಿಷ್ಣುವಿನ ಆರಾಧಕರು ಒಬ್ಬರನ್ನೊಬ್ಬರು ದೂಷಿಸದೆ, ಸೌಹಾರ್ದದಿಂದ ವರ್ತಿಸಬೇಕು ಎಂಬ ಸಂದೇವನ್ನು ನಾಗರಾಜರಾಯರು ಶ್ರೀಕೃಷ್ಣನ ಮೂಲಕ ಹೇಳಿಸಿದ ರೀತಿ ಅದ್ಭುತವಾದುದು. ಮಹಾಭಾರತದ ಕಥಾನಕವನ್ನು ಕೇವಲ 20 ಸಂಧಿಗಳಲ್ಲಿ ಅಡಕಗೊಳಿಸಿ, ಉಳಿದ 88 ಸಂಧಿಗಳಲ್ಲಿ ಭಾಗವತದ ಅಂಶಗಳನ್ನು ಭಾಮಿನಿ ಷಟ್ಟದಿಯಲ್ಲಿ ಕಟ್ಟಿಕೊಟ್ಟ ನಾಗರಾಜರಾಯರ ಪ್ರತಿಭೆ ಅದ್ಭುತ ಎಂದರು.ಕನ್ನಡ ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ. ಕೆ. ರವೀಂದ್ರನಾಥ ಮಾತನಾಡಿ, ಕುಮಾರವ್ಯಾಸರು ಬರೆದ ಕೃತಿ ಗದುಗಿನ ಭಾರತ ಎಂದು ಜನಮಾನಸದಲ್ಲಿ ಪ್ರಸಿದ್ಧಿಯಾಗಿದೆ. ಕೃಷ್ಣಕವಿ ರಂಗೋಪಂತ ನಾಗರಾಜರಾಯರು ಬರೆದಿರುವ ಕೃತಿ ವಿಜಯನಗರದ ಭಾರತ ಎಂದು ಪ್ರಸಿದ್ಧಿ ಪಡೆಯಲಿ ಎಂದರು.
ಬೆಂಗಳೂರಿನ ವಕೀಲ ಮಾಣಿಕ್ಯ ಪ್ರಭು, ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಮೃತ್ಯುಂಜಯ ರುಮಾಲೆ, ಬಳ್ಳಾರಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದರಾಮ ಕಲ್ಮಠ, ಡಿಡಿಪಿಯು ನಾಗರಾಜ ಹವಾಲ್ದಾರ್, ಕೊಪ್ಪಳ ಡಿಡಿಪಿಐ ಎಲ್.ಡಿ.ಜೋಶಿ, ಹೊಸಪೇಟೆ ಬಿಇಒ ಶೇಖರಪ್ಪ ಹೊರಪೇಟೆ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಗೊಗ್ಗ ಚನ್ನಬಸವರಾಜ, ಬ್ರಾಹ್ಮಣ ಸಮಾಜದ ಅಧ್ಯಕ್ಷ ಕೆ.ದಿವಾಕರ, ವಿಜಯನಗರ ಸಾಹಿತ್ಯ ಪರಿಷತ್ ಅಧ್ಯಕ್ಷ ಮಧುರಚನ್ನ ಶಾಸ್ತ್ರಿ, ಕನ್ನಡಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಪಿ.ವೆಂಕಟೇಶ್, ಉದ್ಯಮಿ ಪತ್ತಿಕೊಂಡ ಸಂತೋಷ್ನಾಗ್, ಎತ್ನಳ್ಳಿ ಮಲ್ಲಯ್ಯ ಮತ್ತಿತರರಿದ್ದರು. ಕಾರ್ಯಕ್ರಮಕ್ಕೂ ಮುನ್ನ ನಗರದ ವಡಕರಾಯ ದೇವಸ್ಥಾನದಿಂದ ವೆಂಕಟೇಶ್ವರ ಕಲ್ಯಾಣ ಮಂಟಪದ ವರೆಗೆ ಮಹಾಕಾವ್ಯದ ಮಹಾಯಾನ ರೂಪದಲ್ಲಿ ಗ್ರಂಥಕರ್ತರ ಮೆರವಣಿಗೆ ನಡೆಯಿತು. ಅಂಜಲಿ ಭರತನಾಟ್ಯ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ನೃತ್ಯ ವೈಭವ ನಡೆಯಿತು.