ಶೃಂಗೇರಿ: ಗಾಂಧಿಮೈದಾನದ ತ್ಯಾಜ್ಯವೆಲ್ಲ ತುಂಗಾ ನದಿ ಮಡಿಲಿಗೆ

KannadaprabhaNewsNetwork |  
Published : May 08, 2024, 01:00 AM IST
್ಿಿ | Kannada Prabha

ಸಾರಾಂಶ

ಶೃಂಗೇರಿ, ಇಲ್ಲಿ ಎಲ್ಲೆಲ್ಲೂ ತ್ಯಾಜ್ಯಗಳ ರಾಶಿ, ಪ್ಲಾಸ್ಟಿಕ್‌, ಕಸಕಡ್ಡಿಗಳು,ಇಡೀ ಪ್ರದೇಶವೇ ತ್ಯಾಜ್ಯಮಯವಾಗಿದೆ. ಸ್ವಚ್ಛತೆ ಎಂಬುದೇ ಕಂಡು ಬರುತ್ತಿಲ್ಲ. ಮಳೆ ಬಂದರೆ ತ್ಯಾಜ್ಯವೆಲ್ಲ ಮಲೆನಾಡ ಜೀವನದಿ ತುಂಗೆ ಒಡಲಿಗೆ ಸೇರುತ್ತದೆ. ದಿನೇ ದಿನೇ ತ್ಯಾಜ್ಯ ಸಂಗ್ರಹ ಹೆಚ್ಚುತ್ತಲೇ ಇದೆ. ಮೈದಾನ ಪ್ರದೇಶವಲ್ಲದೇ ತುಂಗೆ ದಡದುದ್ದಕ್ಕೂ ರಾಶಿ ರಾಶಿ ತ್ಯಾಜ್ಯ ಸಂಗ್ರಹ.

ಎಲ್ಲೆಲ್ಲೂ ತ್ಯಾಜ್ಯ । ಮಳೆ ಬಂದರೆ ಕಸವೆಲ್ಲ ತುಂಗೆ ಪಾಲಿಗೆ: ಸ್ವಚ್ಛತೆಯೇ ಇಲ್ಲ

ನೆಮ್ಮಾರ್‌ ಅಬೂಬಕರ್‌

ಕನ್ನಡಪ್ರಭ ವಾರ್ತೆ, ಶೃಂಗೇರಿ

ಇಲ್ಲಿ ಎಲ್ಲೆಲ್ಲೂ ತ್ಯಾಜ್ಯಗಳ ರಾಶಿ, ಪ್ಲಾಸ್ಟಿಕ್‌, ಕಸಕಡ್ಡಿಗಳು,ಇಡೀ ಪ್ರದೇಶವೇ ತ್ಯಾಜ್ಯಮಯವಾಗಿದೆ. ಸ್ವಚ್ಛತೆ ಎಂಬುದೇ ಕಂಡು ಬರುತ್ತಿಲ್ಲ. ಮಳೆ ಬಂದರೆ ತ್ಯಾಜ್ಯವೆಲ್ಲ ಮಲೆನಾಡ ಜೀವನದಿ ತುಂಗೆ ಒಡಲಿಗೆ ಸೇರುತ್ತದೆ. ದಿನೇ ದಿನೇ ತ್ಯಾಜ್ಯ ಸಂಗ್ರಹ ಹೆಚ್ಚುತ್ತಲೇ ಇದೆ. ಮೈದಾನ ಪ್ರದೇಶವಲ್ಲದೇ ತುಂಗೆ ದಡದುದ್ದಕ್ಕೂ ರಾಶಿ ರಾಶಿ ತ್ಯಾಜ್ಯ ಸಂಗ್ರಹ.

ಇದು ಪಟ್ಟಣದ ಗಾಂಧಿ ಮೈದಾನ ಪ್ರದೇಶದ ದುಸ್ಥಿತಿ. ಶೃಂಗೇರಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದ್ದು, ಇಲ್ಲಿ ಪ್ರತೀ ವರ್ಷ 50 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಾರೆ. ಗಾಂಧಿ ಮೈದಾನ ವಾಹನ ನಿಲುಗಡೆ ಪ್ರದೇಶವೂ ಆಗಿದ್ದು, ಇಲ್ಲಿ ಹಗಲಿಡೀ ಜನಸಂಚಾರವಿದೆ. ಒಂದೆಡೆ ಜನ ಸಂಚಾರ, ಇನ್ನೊಂದೆಡೆ ವಾಹನಗಳು, ವಿವಿಧೆಡೆಗಳಿಂದ ಬರುವ ವಾಹನಗಳು ಇಲ್ಲಿಯೇ ನಿಲುಗಡೆಯಾಗುತ್ತದೆ.

ಆದರೆ ಈ ಪ್ರದೇಶ ಸಂಪೂರ್ಣ ತ್ಯಾಜ್ಯಮಯವಾಗಿದ್ದು ಸ್ವಚ್ಛ ಅಭಿಯಾನ್‌ಗೆ ಅಪವಾದವಾಗಿದೆ. ಮೈದಾನಕ್ಕೆ ಹೋಗುವ ದಾರಿ ಆರಂಭದಿಂದ ಅಲ್ಲಲ್ಲಿ ಬಿದ್ದ ಕಸಕಡ್ಡಿ ತ್ಯಾಜ್ಯ ತುಂಗಾ ನದಿ ದಡದುದ್ದಕ್ಕೂ ಕಾಣಸಿಗುತ್ತವೆ. ಪ್ಲಾಸ್ಟಿಕ್‌ ಬಾಟಲ್‌ಗಳು, ಪರಿಕರಗಳು, ಸೇರಿದಂತೆ ವಿವಿಧ ರೀತಿ ತ್ಯಾಜ್ಯಗಳು, ಇಡೀ ಮೈದಾನ ತುಂಬೆಲ್ಲ ಬಿದ್ದಿವೆ. ಪ್ರವಾಸಿಗರ ವಾಹನಗಳು ನಿಲುಗಡೆ ಸೇರಿದಂತೆ ಪ್ರವಾಸಿಗರ ಓಡಾಟ ಎಲ್ಲವೂ ಇಲ್ಲಿಯೆ.

ಪ್ರವಾಸಿಗರು ಸೇರಿದಂತೆ ಸುತ್ತಮುತ್ತಲ ತ್ಯಾಜ್ಯವೆಲ್ಲ ಇಲ್ಲಿಯೇ ರಾಶಿರಾಶಿಯಾಗಿ ಬಿದ್ದಿವೆ. ನದಿ ದಡದಲ್ಲಿ ತ್ಯಾಜ್ಯದ ರಾಶಿಯೇ ಇದೆ. ಮಳೆ ಬಂದರೆ ಇಡೀ ಮೈದಾನ ತ್ಯಾಜ್ಯವೆಲ್ಲ ತುಂಗಾ ನದಿಗೆ ಸೇರುತ್ತದೆ. ಇನ್ನು ಹೊಲಸು ವಾತಾವರಣ, ಕೇಳುವವರೆ ಇಲ್ಲ. ಸ್ವಚ್ಛತೆ ಬಗ್ಗೆ ಪ್ರಶ್ನಿಸುವವರೇ ಇಲ್ಲ. ರಾತ್ರಿ ಸಂಚರಿಸುವ ಬಸ್‌ಗಳು ಹಗಲಿಂದ ಸಂಜೆಯವರೆಗೂ ಇಲ್ಲಿಯೇ ನಿಂತಿರುತ್ತದೆ. ಸಮೀಪದಲ್ಲೇ ಉದ್ಯಾನವನವಿದ್ದು ಅದೂ ಕೂಡ ತ್ಯಾಜ್ಯಮಯವಾಗಿದೆ.

ಇನ್ನು ಭಾರತೀ ಬೀದಿ ಕೆವಿಆರ್‌ ವೃತ್ತ ಸಂಪರ್ಕ ಕಲ್ಪಿಸುವ ಬೈಪಾಸ್‌ ರಸ್ತೆಯೂ ಇಲ್ಲೆ ಹಾದುಹೋಗಿರುವುದರಿಂದ ರಸ್ತೆ ಪಕ್ಕದಲ್ಲಿ ನದಿ ದಡದುದ್ದಕ್ಕೂ ತ್ಯಾಜ್ಯ, ಕೊಳಕುಗಳು, ಪ್ಲಾಸ್ಟಿಕ್‌ ಎಲ್ಲವೂ ರಾಶಿ ರಾಶಿಯಾಗಿ ಬಿದ್ದಿವೆ. ಇವು ಕೂಡ ಮಳೆ ಬಂದರೆ ನದಿ ಒಡಲಿಗೆ ಸೇರಲಿದೆ. ಶೃಂಗೇರಿ ಪಟ್ಟಣದ ಕಸವೆಲ್ಲ ಸಂಗ್ರಹವಾಗಿ ಕಸವಿಲೇವಾರಿ ಘಟಕಕ್ಕೆ ಸೇರಿದರೆ ಗಾಂಧಿ ಮೈದಾನದ ತ್ಯಾಜ್ಯವೆಲ್ಲ ಮಲೆನಾಡ ಜೀವನದಿ ತುಂಗೆ ಮಡಿಲಿಗೆ ಸೇರುತ್ತಿದೆ. ಸ್ಥಳೀಯ ಆಡಳಿತವಾಗಲೀ, ಯಾವುದೇ ಇಲಾಖೆಯಾಗಲಿ ಈ ಬಗ್ಗೆ ಇನ್ನೂ ತಲೆಕೆಡಿಸಿಕೊಳ್ಳುತ್ತಿಲ್ಲ.

ತುಂಗಾನದಿ ದಡದಲ್ಲಿ ರಾಶಿಯಾಗಿ ಬಿದ್ದಿರುವ ತ್ಯಾಜ್ಯ ಕಂಡರೆ ಕಸವಿಲೇವಾರಿ ಘಟಕವೇ ನೋಡಿದಂತಾಗುತ್ತದೆ. ಸ್ವಚ್ಛತೆಯೂ ಇಲ್ಲ, ಕ್ರಮವೂ ಇಲ್ಲ ಆದರೆ ದಿನಕಳೆದಂತೆ ತ್ಯಾಜ್ಯ ರಾಶಿ ಹೆಚ್ಚುತ್ತಲೇ ಹೋಗುತ್ತಿದೆ. ಇಲ್ಲಿಗೆ ಬರುವ ಪ್ರಸಾಸಿಗರ ಸಂಖ್ಯೆಯೂ ಹೆಚ್ಚಿರುವುದರಿಂದ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡದಿರುವದು ಅಚ್ಚರಿಯೇ ಸರಿ.

ಮಲೇರಿಯಾ, ಡೆಂಗ್ಯೂ ಸಾಂಕ್ರಮಿಕ ರೋಗಗಳು ಹರಡಲು ಕಾರಣವಾಗುವಂತಿದೆ. ಈ ಪ್ರದೇಶ ಸ್ವಚ್‌ ಭಾರತ್‌ ಅಭಿಯಾನ್‌ ಗೆ ತದ್ವಿರುದ್ಧವಾಗಿದೆ. ಇಡೀ ಶೃಂಗೇರಿ ಪಟ್ಟಣಕ್ಕೆ ಅಲ್ಲದೇ ಎಲ್ಲೆಡೆ ತುಂಗಾ ನದಿಯೇ ಕುಡಿಯುವ ನೀರಿನ ಮೂಲಾಧಾರ. ಗಂಗಾ ಸ್ನಾನಂ ತುಂಗಾಪಾನಂ ಎಂಬ ನಾಣ್ನುಡಿಯಂತೆ ಪವಿತ್ರ ತುಂಗಾ ನದಿ ಈ ತ್ಯಾಜ್ಯ ರಾಶಿಯಿಂದ ಮಲೀನಗೊಳ್ಳುತ್ತಿರುವ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಳ್ಳದಿರುವುದು ಅಚ್ಚರಿಯೇ ಸರಿ.

ಪ್ರವಾಸಿ ಕ್ಷೇತ್ರವಾಗಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು, ಸ್ಥಳೀಯ ಆಡಳಿತ ಇನ್ನಾದರೂ ಎಚ್ಚೆತ್ತುಕೊಂಡು ಈ ಪ್ರದೇಶದ ಸ್ವಚ್ಛತೆಗೆ ಆದ್ಯತೆ ನೀಡಿ ತ್ಯಾಜ್ಯ ತೆರವುಗೊಳಿಸಿ, ಇಲ್ಲಿ ತ್ಯಾಜ್ಯ ಹಾಕದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಬೇಕಿದೆ. ತುಂಗೆ ಮಲೀನಗೊಳ್ಳದಂತೆ ಜನರಲ್ಲಿ ಜನಜಾಗೃತಿ ಮೂಡಿಸಬೇಕಿದೆ.

ಬರ, ಮಳೆ ಕೊರತೆ, ಬಿಸಿಲ ಝಳದ ತೀವ್ರತೆಯಲ್ಲಿ ನೀರಿಗೆ ಉಂಟಾಗಿರುವ ಸಂಕಷ್ಟವೇ ಹೇಳತೀರದಾಗಿರುವಾಗ ನಾಡಿನ ಜನರ ಜೀವನದಿ ತುಂಗೆಯನ್ನು ಶುದ್ಧವಾಗಿಟ್ಟು ಕೊಳ್ಳಬೇಕಾಗಿರುವುದು ಎಲ್ಲರ ಕರ್ತವ್ಯ ಆದರೆ, ತುಂಗೆಯ ಒಡಲಿಗೆ ಸೇರುತ್ತಿರುವ ತ್ಯಾಜ್ಯದಿಂದ ಶುದ್ಧ ನದಿ ನೀರಿಗೆ ಸಂಚಕಾರ ಎದುರಾದರೂ ಅಚ್ಚರಿಯಿಲ್ಲ.

--ಬಾಕ್ಸ್--

ಸ್ವಚ್ಛತೆಗೆ ಆದ್ಯತೆ ಅಗತ್ಯ:

ತಾಲೂಕಿಗೆ ಕುಡಿವ ನೀರಿಗೆ ಆಧಾರ ತುಂಗಾನದಿ. ಗಾಂಧಿ ಮೈದಾನ ಪ್ರದೇಶದಲ್ಲಿ ಈ ರೀತಿ ತ್ಯಾಜ್ಯಗಳು ಸಂಗ್ರವಾಗುತ್ತಿರುವುದರಿಂದ ತುಂಗಾ ನದಿ ಮಲೀನಗೊಳ್ಳುತ್ತಿರುವ ಜೊತೆಗೆ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ಸಾಂಕ್ರಮಿಕ ರೋಗಗಳಿಗೆ ಆಹ್ವಾನ ನೀಡುತ್ತಿದೆ. ಸ್ಥಳೀಯ ಆಡಳಿತ, ಸಂಬಂಧಪಟ್ಟ ಇಲಾಖೆ ಇನ್ನಾದರೂ ಎಚ್ಚೆತ್ತುಕೊಂಡು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಬೇಕಿದೆ ಎಂದು ಕೆ.ಎಂ.ರಾಮಣ್ಣ ಕರುವಾನೆ ಅಭಿಪ್ರಾಯಪಟ್ಟಿದ್ದಾರೆ.

----

ಪ್ರವಾಸಿಗರಲ್ಲಿ ಅರಿವು ಮೂಡಿಸಲಿ:

ಈಗಾಗಲೇ ಸಂಗ್ರಹವಾಗುತ್ತಿರುವ ತ್ಯಾಜ್ಯವನ್ನು ವಿಲೆವಾರಿಗೆ ಕ್ರಮಕೈಗೊಂಡು ಪ್ರವಾಸಿಗರಲ್ಲಿ ಅರಿವು ಮೂಡಿಸಬೇಕು. ಕಸ ತ್ಯಾಜ್ಯಗಳು ಹಾಕದಂತೆ ನಾಮಪಲಕ ಅಳವಡಿಸಬೇಕು. ಕಸದ ತೊಟ್ಟಿಗಳನ್ನು ಅಳವಡಿಸಬೇಕು. ಈ ಪ್ರದೇಶದ ಪರಿಸರ ನೈರ್ಮಲ್ಯ ಕಾಪಾಡಬೇಕು ಎಂದು ಪರಿಸರ ವಿಜ್ಞಾನ ಉಪನ್ಯಾಸಕ ಮನು ಜಿ ಹೇಳಿದರು.

6 ಶ್ರೀ ಚಿತ್ರ 1-

ಶೃಂಗೇರಿ ಗಾಂಧಿಮೈದಾನ ತುಂಗಾನದಿ ದಡದಲ್ಲಿರುವ ತ್ಯಾಜ್ಯ ಸಂಗ್ರಹ

6 ಶ್ರೀ ಚಿತ್ರ 2.ಕೆ.ಎಂ.ರಾಮಣ್ಣ ಕರುವಾನೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಯಕತ್ವ ಗೊಂದಲ ಮಧ್ಯೆ 13 ಕೈ ಶಾಸಕರು ವಿದೇಶಕ್ಕೆ :
ವಿದ್ಯಾರ್ಥಿಗಳ ಗೋಳು, ಕೇಳೋರು ಯಾರು?