ಸೋಮರಡ್ಡಿ ಅಳವಂಡಿ
ಹೌದು, ತುಂಗಭದ್ರಾ ಜಲಾಶಯದಲ್ಲಿ ಮೇ 10ರಂದು ಕೇವಲ 3.44 ಟಿಎಂಸಿ ನೀರು ಮಾತ್ರ ಇದೆ. ಕಳೆದ ಹತ್ತು ವರ್ಷಗಳ ಸರಾಸರಿ ಈ ದಿನ 3.66 ಟಿಎಂಸಿ ಇದೆ. ಹತ್ತು ವರ್ಷಗಳ ಸರಾಸರಿಗಿಂತಲೂ ಕಡಿಮೆಯಾಗಿದೆ.
ತುಂಗಭದ್ರಾ ಜಲಾಶಯದಲ್ಲಿ ಡೆಡ್ ಸ್ಟೋರೇಜ್ ಸಾಮರ್ಥ್ಯವೇ 2 ಟಿಎಂಸಿ. ಆದರೆ, ತುಂಗಭದ್ರಾ ಜಲಾಶಯದ ಹಿರಿಯ ಅಧಿಕಾರಿಗಳು ಹೇಳುವ ಪ್ರಕಾರ, ಜಲಾಶಯದಲ್ಲಿ ಅಪಾರ ಪ್ರಮಾಣದ ಹೂಳು ತುಂಬಿರುವುದರಿಂದ ಈಗಿನ ಲೆಕ್ಕಾಚಾರ ಅಷ್ಟು ಸರಿಯಾಗಿ ಇರಲು ಸಾಧ್ಯವೇ ಇಲ್ಲ. ಮಟ್ಟದ ಲೆಕ್ಕಾಚಾರದಲ್ಲಿ ನೀರಿನ ಪ್ರಮಾಣವನ್ನು ಗುರುತಿಸಲಾಗುತ್ತದೆ. ಆದರೆ, ಕೆಳಗಡೆ ಹೂಳು ತುಂಬಿರುವುದರಿಂದ ಅದು ಇನ್ನೂ ಕಡಿಮೆ ಇರುತ್ತವೆ ಎನ್ನುತ್ತಾರೆ.ಸಾಯುತ್ತಿರುವ ಜಲಚರಗಳು: ತುಂಗಭದ್ರಾ ಹಿನ್ನೀರು ಪ್ರದೇಶ ವ್ಯಾಪ್ತಿಯಲ್ಲಿ ಈಗಾಗಲೇ ಲಕ್ಷಾಂತರ ಮೀನುಗಳು ನೀರಿನ ಕೊರತೆಯಿಂದ ಸತ್ತಿವೆ. ಹಿನ್ನೀರು ಪ್ರದೇಶ ವ್ಯಾಪ್ತಿಯಲ್ಲಿ ಸುತ್ತಾಡಿದರೆ ಸತ್ತ ಮೀನುಗಳು ಕಾಣುತ್ತವೆ. ಸತ್ತ ಜಲಚರಗಳನ್ನು ತಿನ್ನುವುದಕ್ಕಾಗಿ ಇಲ್ಲಿಗೆ ಪಕ್ಷಿಗಳು, ನಾಯಿಗಳು ಲಗ್ಗೆ ಇಡುತ್ತಿವೆ.
ಆವಿಯಾಗುವ ಪ್ರಮಾಣ ಅಧಿಕ: ಜಲಾಶಯದಲ್ಲಿ ನೀರಿನ ಪ್ರಮಾಣ ಅಧಿಕ ಇದ್ದಷ್ಟು ಆವಿಯಾಗುವ ಪ್ರಮಾಣ ಕಡಿಮೆ ಇರುತ್ತದೆ. ಆದರೆ, ಈಗ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆ ಇರುವುದರಿಂದ ಆವಿಯಾಗುವ ಪ್ರಮಾಣ ಅಧಿಕವಾಗಿರುತ್ತದೆ. ಇದು ಸಹ ಜಲಾಶಯದಲ್ಲಿ ನೀರು ದಿನೇ ದಿನೇ ಕಡಿಮೆಯಾಗುವುದಕ್ಕೆ ಕಾರಣವಾಗಿದೆ.
ಇನ್ನು ತುಂಗಭದ್ರಾ ಜಲಾಶಯದಿಂದ ಕೆಳಭಾಗದಲ್ಲಿ ಇರುವ ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳು ಇದೇ ನೀರನ್ನು ನೆಚ್ಚಿಕೊಂಡಿವೆ. ನೀರಿನ ಅಭಾವ ಆದಾಗಲೆಲ್ಲ ಕಾಲುವೆಯ ಮೂಲಕ ನೀರು ಹರಿಸಿ, ಕೆರೆಗಳನ್ನು ನೀರು ಭರ್ತಿ ಮಾಡಿ, ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ. ಈಗ ಜಲಾಶಯದಲ್ಲಿ ನೀರು ಇಲ್ಲದೆ ಇರುವುದರಿಂದ ಇಲ್ಲಿಯೂ ಸಮಸ್ಯೆಯಾಗುತ್ತದೆ. ಸದ್ಯಕ್ಕೆ ಹೇಗೋ ನಿಭಾಯಿಸಲಾಗುತ್ತಿದೆ. ವಾರದೊಳಗೆ ಮಳೆಯಾಗದಿದ್ದರೆ ಪರಿಣಾಮ ಗಂಭೀರವಾಗಲಿದೆ.