ಕನ್ನಡಪ್ರಭ ವಾರ್ತೆ ಮಂಗಳೂರು
ಎಸ್ಸಿಡಿಸಿಸಿ ಬ್ಯಾಂಕ್ 2022-23ನೇ ಸಾಲಿನಲ್ಲಿ ತೋರಿದ ಸರ್ವಾಂಗೀಣ ಪ್ರಗತಿಯೊಂದಿಗೆ ಲೆಕ್ಕ ಪರಿಶೋಧನೆಯಲ್ಲಿ ‘ಎ’ ವರ್ಗವನ್ನು ಪಡೆದು ಪ್ರಥಮ ಪ್ರಶಸ್ತಿಗೆ ಆಯ್ಕೆಗೊಂಡಿದೆ. ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲ ಕೃಷಿ ಸಾಲಗಳು ಶೇಕಡಾ 100 ಮರುಪಾವತಿಯನ್ನು ಕಂಡಿದ್ದು, ಇಂತಹ ಸಾಧನೆಯನ್ನು ಬ್ಯಾಂಕ್ ಕಳೆದ 29 ವರ್ಷಗಳಿಂದ ನಿರಂತರವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ.
22 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ:ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 113 ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿರುವ ಎಸ್ ಸಿಡಿಸಿಸಿ ಬ್ಯಾಂಕ್ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ನಾಯಕತ್ವದಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದೆ. ಎಸ್ಸಿಡಿಸಿಸಿ ಬ್ಯಾಂಕ್ ‘ಜನಸ್ನೇಹಿ’ ಬ್ಯಾಂಕ್'''''''''''''''' ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿ, ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಅಪೆಕ್ಸ್ ಬ್ಯಾಂಕ್ನ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಎಸ್ಸಿಡಿಸಿಸಿ ಬ್ಯಾಂಕ್ 22ನೇ ಬಾರಿ ತನ್ನದಾಗಿಸಿಕೊಂಡಿದೆ.
ಸೇವೆಯೇ ಮುಖ್ಯ ಧ್ಯೇಯ :ಸೇವೆಯನ್ನೇ ಮುಖ್ಯ ಧ್ಯೇಯವನ್ನಾಗಿಟ್ಟುಕೊಂಡು ಯಶಸ್ಸಿನ ಪಥದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಮುನ್ನಡೆಯನ್ನು ಕಾಣುತ್ತಿದ್ದು ವರದಿ ವರ್ಷದಲ್ಲಿ ಎಸ್ಸಿಡಿಸಿಸಿ ಬ್ಯಾಂಕಿಗೆ ‘ಬ್ಯಾಂಕೋ ಬ್ಲೂ ರಿಬ್ಬನ್’ ಪ್ರಶಸ್ತಿ ಹಾಗೂ ಕೇಂದ್ರ ಸರ್ಕಾರದ ಅಟಲ್ ಪಿಂಚಣಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಎರಡು ಬಾರಿ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’ ಲಭಿಸಿದೆ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.