)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಜೈಲಿನಲ್ಲಿರುವ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್ಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ನಗರದ ಸೆಷನ್ಸ್ ನ್ಯಾಯಾಲಯ ಹೊರಡಿಸಿರುವ ಆದೇಶ ರದ್ದು ಕೋರಿ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮೆಟ್ಟಿಲೇರಿದೆ.
ಜೈಲು ಅಧಿಕಾರಿಗಳ ಆಕ್ಷೇಪವೇನು?:
ಜೈಲು ಆಹಾರ ಗುಣಮಟ್ಟದ ಬಗ್ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಎಫ್ಎಸ್ಎಸ್ಎಐ) ಪ್ರಾಧಿಕಾರ ನಾಲ್ಕು ಸ್ಟಾರ್ನ ಸರ್ಟಿಫಿಕೇಟ್ ನೀಡಿದೆ. ಜೈಲಿನಲ್ಲಿ ಪೂರೈಸುತ್ತಿರುವ ಆಹಾರದ ತಯಾರಿಕೆ ಹಾಗೂ ಗುಣಮಟ್ಟವನ್ನು ಕಾರಾಗೃಹದ ಮುಖ್ಯ ಅಧೀಕ್ಷಕರು ಅಥವಾ ಅಧೀಕ್ಷಕರು, ವೈದ್ಯಾಧಿಕಾರಿಗಳು ಪರಿಶೀಲಿಸುತ್ತಾರೆ. ನಂತರವೇ ಆಹಾರವನ್ನು ಕೈದಿಗಳಿಗೆ ಪೂರೈಸಲಾಗುತ್ತದೆ. ವೈದ್ಯಾಧಿಕಾರಿಗಳ ಶಿಫಾರಸು ಇಲ್ಲದೆ ಯಾವುದೇ ಕೈದಿಗೂ ಮನೆಯಿಂದ ಊಟ ತರಿಸಿಕೊಳ್ಳಲು ರಿಯಾಯ್ತಿ ನೀಡಲು ಅವಕಾಶವಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.ಅಲ್ಲದೆ, ಗುಣಮಟ್ಟದ ಆಹಾರ ಪೂರೈಸುತ್ತಿಲ್ಲ ಎಂದು ಯಾವೊಬ್ಬ ಆರೋಪಿಯೂ ಜೈಲು ಅಧಿಕಾರಿಗಳಿಗೆ ದೂರು ನೀಡಿಲ್ಲ. ಗುಣಮಟ್ಟದ ಆಹಾರ ನೀಡುತ್ತಿಲ್ಲ ಎಂದಾದರೆ, ಆರೋಪಿಗಳು ದೂರು ನೀಡಬಹುದಾಗಿದೆ. ಹೀಗಿದ್ದರೂ ಕೇವಲ ಆರೋಪಿಗಳ ಮೌಖಿಕ ಮನವಿ ಆಧರಿಸಿ ನ್ಯಾಯಾಲಯ ವಾರಕೊಮ್ಮೆ ಆರೋಪಿಗಳಿಗೆ ಮನೆ ಊಟ ತರಿಸಿಕೊಳ್ಳಲು ಅನುಮತಿಸುವಂತೆ ಆದೇಶಿಸಿರುವುದು ಸಮರ್ಥನೀಯವಲ್ಲ. ಜೈಲಿನಲ್ಲಿರುವ ಪ್ರಕರಣದ ಆರೋಪಿಗಳಿಗೆ ವಿಶೇಷ ಸೌಲಭ್ಯ ಕಲ್ಪಿಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಈ ಆರೋಪಿಗಳಿಗೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿಸುವುದು ಸುಪ್ರೀಂ ಕೋರ್ಟ್ ಆದೇಶಕ್ಕೆ ವಿರುದ್ಧವಾಗಿದೆ. ಆದ್ದರಿಂದ ಅಧೀನ ನ್ಯಾಯಾಲಯ ಆದೇಶ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.