ನೀರಿನ ಬಗ್ಗೆ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡದ ರಾಜ್ಯ ಸರ್ಕಾರ: ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥನಾರಾಯಣ

KannadaprabhaNewsNetwork |  
Published : Jul 30, 2026, 01:45 AM IST
29ಕೆಎಂಎನ್ ಡಿ17 | Kannada Prabha

ಸಾರಾಂಶ

ಈ ಹಿಂದೆ ನಮ್ಮ ನೀರು ನಮ್ಮ ಹಕ್ಕು ಎಂದು ಪಾದಯಾತ್ರೆ ಮಾಡಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಜಲಸಂಪನ್ಮೂಲ ಸಚಿವರಾಗಿ ಕಾವೇರಿ ಪರಿಸ್ಥಿತಿ ಬಗ್ಗೆ ತಿಳಿವಳಿಕೆ ಇದೆ. ಆದರೆ, ಇಷ್ಟವಿಲ್ಲದವರಿಗೆ ಜಲಸಂಪನ್ಮೂಲ ಖಾತೆ ನೀಡಿ ರಾಜ್ಯದ ರೈತರನ್ನು ಬಲಿಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಪ್ರಾಧಿಕಾರಕ್ಕೆ ರಾಜ್ಯದ ವಾಸ್ತವ ಸ್ಥಿತಿಯನ್ನು ವೈಜ್ಞಾನಿಕ ಅಂಕಿ- ಅಂಶಗಳೊಂದಿಗೆ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನ ಖಂಡಿಸಿ ಜು.31ರಂದು ಕೆ.ಆರ್.ಎಸ್. ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥನಾರಾಯಣ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜಲಾಶಯಗಳಲ್ಲಿನ ನೀರಿನ ಸಂಗ್ರಹ, ಮಳೆ ಕೊರತೆ, ಬೆಳೆಗಳ ಸ್ಥಿತಿ ಹಾಗೂ ಕುಡಿಯುವ ನೀರಿನ ಅಗತ್ಯತೆಗಳನ್ನು ಸಮರ್ಪಕವಾಗಿ ಪ್ರತಿಪಾದಿಸದೇ ಇರುವುದು ಈ ಪರಿಸ್ಥಿತಿಗೆ ಕಾರಣವಾಗಿದೆ. ರೈತರ ಹಿತಾಸಕ್ತಿಗಿಂತ ರಾಜಕೀಯ ಪ್ರದರ್ಶನಕ್ಕೆ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಹೆಚ್ಚು ಆಧ್ಯತೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.

ಎರಡು ತಿಂಗಳ ಹಿಂದೆಯೇ ಹವಾಮಾನ ಇಲಾಖೆ ಮಳೆ ಕೊರತೆ ಬಗ್ಗೆ ಎಚ್ಚರಿಕೆ ನೀಡಿದೆ. ಆದರೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅದನ್ನು ಗಂಭೀರವಾಗಿ ತೆಗೆದುಕೊಳ್ಳದೆ ಬೇಜವಾಬ್ದಾರಿತನದಿಂದ ವರ್ತಿಸಿದ್ದರ ಪರಿಣಾಮ ಇಂದು ಸಿಡಬ್ಲ್ಯೂಆರ್‌ಸಿ ತಮಿಳುನಾಡಿಗೆ ನಿರಂತರ 3500 ಕ್ಯುಸೆಕ್‌ನಂತೆ 15 ದಿನಗಳ ಕಾಲ 4.6 ಟಿಎಂಸಿ ನೀರು ಹರಿಸುವಂತೆ ಆದೇಶ ನೀಡಿದೆ. ಈಗ ಕಣ್ಣು ಬಿಟ್ಟ ಸರ್ಕಾರ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸುವುದಾಗಿ ಸಬೂಬು ಹೇಳುತ್ತಿದೆ ಎಂದು ದೂರಿದರು.

ಈ ಹಿಂದೆ ನಮ್ಮ ನೀರು ನಮ್ಮ ಹಕ್ಕು ಎಂದು ಪಾದಯಾತ್ರೆ ಮಾಡಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಜಲಸಂಪನ್ಮೂಲ ಸಚಿವರಾಗಿ ಕಾವೇರಿ ಪರಿಸ್ಥಿತಿ ಬಗ್ಗೆ ತಿಳಿವಳಿಕೆ ಇದೆ. ಆದರೆ, ಇಷ್ಟವಿಲ್ಲದವರಿಗೆ ಜಲಸಂಪನ್ಮೂಲ ಖಾತೆ ನೀಡಿ ರಾಜ್ಯದ ರೈತರನ್ನು ಬಲಿಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಕೂಡಲೇ ಕಾವೇರಿ ಜಲಾನಯನ ಪ್ರದೇಶದ ಎಲ್ಲ ಜಿಲ್ಲೆಗಳ ಜನಪ್ರತಿನಿಧಿಗಳು, ರೈತ ಸಂಘಟನೆಗಳು ಹಾಗೂ ಜಲತಜ್ಞರೊಂದಿಗೆ ಸಮಾಲೋಚನೆ ನಡೆಸಬೇಕು. ಕಾವೇರಿ ವಿಚಾರದಲ್ಲಿ ರಾಜ್ಯದ ಪರವಾಗಿ ಶಾಶ್ವತ ಕಾನೂನು ತಂತ್ರ ರೂಪಿಸಿ, ಪ್ರತಿ ವಿಚಾರಣೆಗೂ ಮುನ್ನ ತಜ್ಞರ ಸಮಿತಿಯಿಂದ ಸಿದ್ಧತೆ ನಡೆಸಬೇಕು ಎಂದು ಒತ್ತಾಯಿಸಿದರು.

ಕಾವೇರಿ ವಿಚಾರದಲ್ಲಿ ಸರ್ಕಾರ ದಿನನಿತ್ಯದ ಜಲಾಶಯಗಳ ಮಾಹಿತಿ, ನೀರಿನ ಬಳಕೆ ಹಾಗೂ ನ್ಯಾಯಮಂಡಳಿಯ ಮುಂದೆ ಮಂಡಿಸಿರುವ ವಾದಗಳನ್ನು ಸಾರ್ವಜನಿಕರಿಗೆ ಪಾರದರ್ಶಕವಾಗಿ ತಿಳಿಸಬೇಕು ಎಂದು ಆಗ್ರಹಿಸಿದರು.

ರೈತರ ಹಿತಾಸಕ್ತಿ ಹಾಗೂ ರಾಜ್ಯದ ನೀರಿನ ಹಕ್ಕುಗಳ ರಕ್ಷಣೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂಬುದು ರಾಜ್ಯದ ಜನರ ಏಕೈಕ ನಿರೀಕ್ಷೆಯಾಗಬೇಕು. ಆದರೆ, ಸರ್ಕಾರ ರೈತರ ಹಿತವನ್ನು ಮರೆತು ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವುದನ್ನು ಖಂಡಿಸಿ ಮುತ್ತಿಗೆ ಕಾರ್‍ಯಕ್ರಮ ಹಮ್ಮ್ಳಿಕೊಳ್ಳಲಾಗಿದೆ ಎಂದರು.

ಸುದ್ಧಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಎನ್.ಎಸ್. ಇಂದ್ರೇಶ್, ಮುಖಂಡರಾದ ಸಿ.ಟಿ.ಮಂಜುನಾಥ್, ವಿವೇಕ್, ಚಂದ್ರು, ಪ್ರಸನ್ನ, ನಾಗಾನಂದ್, ಬಸವರಾಜು ಇದ್ದರು.

----

29ಕೆಎಂಎನ್ ಡಿ17

ಸುದ್ಧಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥ ನಾರಾಯಣ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡತನ ಮೀರಿ ನೀಟ್‌ ಪರೀಕ್ಷೆಯಲ್ಲಿ ಸಾಧನೆಗೈದ ಕುಮಾರಸ್ವಾಮಿ
ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಚನ್ನಪಟ್ಟಣದಲ್ಲಿ ಪ್ರತಿಭಟನೆ