ಜೆಡಿಎಸ್ ನಿಂದ ಹೆದ್ದಾರಿಯಲ್ಲಿ ಬಿದ್ದಿದ್ದ ಗುಂಡಿಗಳಿಗೆ ಕಾಂಕ್ರೀಟ್ ಹಾಕಿ ಮುಚ್ಚಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಕೊಪ್ಪಹೆದ್ದಾರಿಯಲ್ಲಿ ಬಿದ್ದಿದ್ದ ಭಾರಿ ಗುಂಡಿಗಳಿಗೆ ಸಿಮೆಂಟ್ ಕಾಂಕ್ರೀಟ್ ಹಾಕಿ ಮುಚ್ಚುವ ಮೂಲಕ ಜೆಡಿಎಸ್ ಕಾರ್ಯಕರ್ತರು ಬುಧವಾರ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ತೀರ್ಥಹಳ್ಳಿ ರಸ್ತೆಯ ಟೋಲ್ಗೇಟ್ ಬಳಿಯಿಂದ ಬಸ್ ನಿಲ್ದಾಣದವರೆಗೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ ನೇತೃತ್ವದಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ರಸ್ತೆಯಲ್ಲಿರುವ ಗುಂಡಿಗಳಿಗೆ ಕಾರ್ಯಕರ್ತರು ಸಿಮೆಂಟ್ ಕಾಂಕ್ರೀಟ್ ಹಾಕಿ ಗುಂಡಿ ಮುಚ್ಚಿ ಸರ್ಕಾರಕ್ಕೆ ಛೀಮಾರಿ ಹಾಕಿದರು.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ. ರಸ್ತೆಗಳ ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಎಲ್ಲ ಭಾಗದ ರಸ್ತೆಗಳಲ್ಲಿಯೂ ಗುಂಡಿಗಳು ಮಾಮೂಲಿ ಎನ್ನುವಂತಾಗಿದೆ. ಭಾರೀ ಗುಂಡಿಗಳಿಂದಾಗಿ ಪ್ರತಿದಿನ ಅಪಘಾತಗಳು ಸಾಮಾನ್ಯ ವಾಗಿದ್ದು, ಜನ ಜೀವ ಕಳೆದುಕೊಳ್ಳುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ ಮಾತನಾಡಿ, ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಶೃಂಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣವಾಗಿ ಗುಂಡಿಮಯವಾಗಿವೆ. ದೇಶದ ವಿವಿಧ ಭಾಗಗಳಿಂದ ಇಲ್ಲಿಗೆ ಆಗಮಿಸುವ ಭಕ್ತರು ರಸ್ತೆ ಗುಂಡಿಗಳಿಂದ ಸಮಸ್ಯೆ ಎದುರಿಸುವಂತಾಗಿದೆ. ಚಿಕ್ಕಮಗಳೂರು ಮಾರ್ಗವಾಗಿ ಶೃಂಗೇರಿಗೆ ಬರುವ ಭಕ್ತರು ವಸ್ತಾರೆ ದಾಟುತ್ತಿದ್ದಂತೆ ರಸ್ತೆ ಸ್ಥಿತಿ ಕಂಡು ವಾಪಸ್ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ರಸ್ತೆಗಳು ಗುಂಡಿಮಯವಾಗಿದ್ದರೂ ಕನಿಷ್ಠಪಕ್ಷ ಗುಂಡಿಗಳನ್ನು ಮುಚ್ಚುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ. ಕಳೆದ 7 ತಿಂಗಳಿನಿಂದ ರಸ್ತೆ ಅಭಿವೃದ್ಧಿ ಮಾಡುತ್ತಿಲ್ಲ. ಹೊಸದಾಗಿ ರಸ್ತೆ ನಿರ್ಮಿಸುವುದು ಬೇಡ. ತಾತ್ಕಾಲಿಕವಾಗಿ ರಸ್ತೆ ಗುಂಡಿಗಳನ್ನಾದರೂ ಮುಚ್ಚಿ ಜನರಿಗೆ ಅನುಕೂಲ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.ಶೃಂಗೇರಿ ಕ್ಷೇತ್ರದ ಶಾಸಕರು ಕ್ಷೇತ್ರಕ್ಕೆ ನೂರಾರು ಕೋಟಿ ಅನುದಾನ ತಂದಿದ್ದೇನೆ ಎನ್ನುತ್ತಾರೆ. ಆದರೆ, ಕ್ಷೇತ್ರದ ಯಾವುದೇ ಭಾಗದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳು ಕಾಣುವುದಿಲ್ಲ. ಸುಳ್ಳು ಹೇಳುವುದನ್ನು ನಿಲ್ಲಿಸಿ ಮೊದಲು ಕ್ಷೇತ್ರದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ಶೃಂಗೇರಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ದಿವಾಕರ್ ಭಟ್, ಕೊಪ್ಪ ತಾಲೂಕು ಅಧ್ಯಕ್ಷ ಎ.ಎನ್. ರಾಮಸ್ವಾಮಿ, ನಗರ ಘಟಕದ ಅಧ್ಯಕ್ಷ ಚಂದ್ರಶೇಖರ್, ವಾಸಪ್ಪ ಕುಂಚೂರು, ಜೆಡಿಎಸ್ ಮುಖಂಡ ಎಚ್.ಜಿ. ವೆಂಕಟೇಶ್ ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.-- ಬಾಕ್ಸ್ --ಎಸ್ಐಟಿ ರಚನೆಗೆ ಆಕ್ರೋಶರಾಜ್ಯದಲ್ಲಿ ಅರಣ್ಯ ಭೂಮಿ ಗುರುತಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡುವ ಮೂಲಕ ರೈತರಿಗೆ ಮರಣ ಶಾಸನ ಬರೆಯಲು ಮುಂದಾಗಿದೆ ಎಂದು ಸುಧಾಕರ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.ಕಂದಾಯ ಭೂಮಿಗಳನ್ನು ಅರಣ್ಯ ಇಲಾಖೆ ವ್ಯಾಪ್ತಿಗೆ ಸೇರಿಸಲಾಗಿದೆ. ಹೀಗಾಗಿ ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕ ಉಪಯೋಗಕ್ಕೂ ಸರ್ಕಾರಿ ಭೂಮಿ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇದರ ನಡುವೆ ರೈತರು ಉಳುಮೆ ಮಾಡುತ್ತಿರುವ ಜಮೀನುಗಳನ್ನು ಇದೀಗ ಎಸ್ಐಟಿ ರಚನೆ ಮಾಡುವ ಮೂಲಕ ಅರಣ್ಯ ಎಂದು ಘೋಷಣೆ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ದೂರಿದರು.
--ಭೂಮಿ ಮಂಜೂರಾತಿ ಇಲ್ಲ:ರೈತರು ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ ನಮೂನೆ 50, 53, 57 ರಲ್ಲಿ ಭೂ ಮಂಜೂರಾತಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಇಲ್ಲ ಸಲ್ಲದ ಸಬೂಬು ಹೇಳುವ ಮೂಲಕ ರೈತರಿಗೆ ಜಮೀನು ಮಂಜೂರು ಮಾಡುತ್ತಿಲ್ಲ ಎಂದು ಸುಧಾಕರ ಶೆಟ್ಟಿ ದೂರಿದರು.
ರೈತರು ಭೂ ಮಂಜೂರಾತಿಗೆ ಅರ್ಜಿ ಸಲ್ಲಿಕೆ ಮಾಡಿ ತಮ್ಮ ಹೆಸರಿಗೆ ಭೂಮಿ ಮಂಜೂರಾಗುತ್ತದೆ ಎಂದು ಕಾಯುತ್ತಲೇ ಇದ್ದಾರೆ. ಆದರೆ ಸರ್ಕಾರ ಮಾತ್ರ ಬಡ ರೈತರಿಗೆ ಭೂಮಿ ಹಕ್ಕು ನೀಡಲು ಮೀನಾ ಮೇಷ ಎಣಿಸುತ್ತಿದೆ. ಜೊತೆಗೆ ಭೂ ಮಂಜೂರಾತಿಗೆ ಸರ್ಕಾರ ಅರಣ್ಯ ಇಲಾಖೆ ಅನುಮತಿ ಕೇಳುತ್ತಿರುವುದು ಖಂಡನೀಯ ಎಂದರು.-
29 ಕೆಸಿಕೆಎಂ 1ಕೊಪ್ಪದ ಹೆದ್ದಾರಿಯಲ್ಲಿ ಬಿದ್ದಿದ್ದ ಗುಂಡಿಗಳಿಗೆ ಸಿಮೆಂಟ್ ಕಾಂಕ್ರೀಟ್ ಹಾಕಿ ಮುಚ್ಚಿ ಜೆಡಿಎಸ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ, ದಿವಾಕರ್ ಭಟ್, ಎ.ಎನ್. ರಾಮಸ್ವಾಮಿ, ಚಂದ್ರಶೇಖರ್, ವಾಸಪ್ಪ ಕುಂಚೂರು, ಎಚ್.ಜಿ. ವೆಂಕಟೇಶ್ ಇದ್ದರು.