ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಬಿಎಸ್‌ವೈ

KannadaprabhaNewsNetwork |  
Published : Nov 07, 2023, 01:30 AM IST
ತುಮಕೂರಿನಲ್ಲಿ ನಡೆದ ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ | Kannada Prabha

ಸಾರಾಂಶ

ರಾಜ್ಯದಲ್ಲಿ ಪರಿಶಿಷ್ಟರ ಅಂತ್ಯಕ್ರಿಯೆಗೆ ಕೊಟ್ಟ ಚೆಕ್ ಬೌನ್ಸ್ ಆಗುವಷ್ಟರ ಮಟ್ಟಿಗೆ ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

ಕೈಗಾರಿಕೋದ್ಯಮಿಗಳೊಂದಿಗೆ ಸಂವಾದದ ನಡೆಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ

ಕನ್ನಡಪ್ರಭ ವಾರ್ತೆ ತುಮಕೂರು

ರಾಜ್ಯದಲ್ಲಿ ಪರಿಶಿಷ್ಟರ ಅಂತ್ಯಕ್ರಿಯೆಗೆ ಕೊಟ್ಟ ಚೆಕ್ ಬೌನ್ಸ್ ಆಗುವಷ್ಟರ ಮಟ್ಟಿಗೆ ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

ಜಿಲ್ಲೆಗೆ ಬರ ಅಧ್ಯಯನ ನಡೆಸಲು ಆಗಮಿಸಿದ ಸಂದರ್ಭದಲ್ಲಿ ನಗರದಲ್ಲಿ ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಅನಗತ್ಯ ಉಚಿತ ಭಾಗ್ಯಗಳನ್ನು ಕೊಟ್ಟು ಸರ್ಕಾರ ದಿವಾಳಿಯಾಗುತ್ತಿದೆ. ಇದಕ್ಕೆ ಉದಾಹರಣೆಯಾಗಿ ಗೃಹ ಸಚಿವರ ಕ್ಷೇತ್ರದಲ್ಲಿ ಪರಿಶಿಷ್ಟರ ಅಂತ್ಯ ಸಂಸ್ಕಾರದ ಚೆಕ್ ಬೌನ್ಸ್ ಆಗಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ ರಾಜ್ಯ ಸರ್ಕಾರದ ಬೊಕ್ಕಸ ಆರ್ಥಿಕವಾಗಿ ದಿವಾಳಿಯಾಗಿದೆ ಎನ್ನುವುದು ಗೊತ್ತಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಇಬ್ಬರು ಸಚಿವರು ಇದ್ದರೂ ಸಹ ಬರ ಪರಿಸ್ಥಿತಿಯನ್ನು ವೀಕ್ಷಣೆ ಮಾಡಿಲ್ಲ. ರೈತರ ಬಳಿಗೆ ಹೋಗಿ ಅವರು ನೋವು-ನಲಿವನ್ನು ಆಲಿಸಿಲ್ಲ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ನೀಡುತ್ತಿಲ್ಲ. ತೆರಿಗೆ ಜಾಸ್ತಿ ಮಾಡಿ ಜನರನ್ನು ಸಂಕಷ್ಟಕ್ಕೆ ದೂಡಿದ್ದಾರೆ. ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುವುದಾಗಿ ಅವರು ಹೇಳಿದರು.

ಗ್ರಾಮಾಂತರ ಶಾಸಕ ಬಿ. ಸುರೇಶ್‌ಗೌಡ ಮಾತನಾಡಿ, ರಾಜ್ಯದ ಜನರಿಗೆ ಮಕ್ಮಾಲ್ ಟೋಪಿ ಹಾಕಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿ ತೀವ್ರ ಬರ ಬಂದಿದೆ. 3 ಗಂಟೆ ಕೂಡ ರೈತರಿಗೆ ತ್ರಿಫೇಸ್ ವಿದ್ಯುತ್ ಕೊಡುತ್ತಿಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗಾಳಿಯೂ ಬೀಸುತ್ತಿಲ್ಲ, ಮಳೆಯೂ ಬಂದಿಲ್ಲ ಎಂದು ಕುಟುಕಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ ಜನರ ಕಷ್ಟ ನಿಭಾಯಿಸುವ ಶಕ್ತಿ ಇದೆ. ರಾಜ್ಯ ಸರ್ಕಾರಕ್ಕೆ ಜನರೇ ಚಾಟಿ ಬೀಸಬೇಕಾಗಿದೆ. ಬಡವರಿಗೆ ಉಚಿತ ವಿದ್ಯುತ್ ಕೊಡುವುದು ನ್ಯಾಯವಾಗಿದೆ. ಆದರೆ 2 ಲಕ್ಷ ರು. ಸಂಬಳ ಬರುವವರಿಗೂ ಉಚಿತ ವಿದ್ಯುತ್ ಕೊಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಟಿ.ಜೆ.ಗಿರೀಶ್ ಪ್ರಾಸ್ತಾವಿಕ ನುಡಿಗಳನ್ನಾಡಿ, ನಮ್ಮ ಸಂಸ್ಥೆಯು 2000 ಇಸ್ವಿಯಲ್ಲಿ ಪ್ರಾರಂಭಗೊಂಡು ಕಾಲಕಾಲಕ್ಕೆ ಬದಲಾವಣೆಯಾಗುವ ನಿಯಮಗಳನ್ನು ಅಳಪಡಿಸಿಕೊಂಡು ಸರ್ಕಾರ ಮತ್ತು ಕೈಗಾರಿಕೆಗಳ ಸೇತುವೆಯಾಗಿ 24 ವರ್ಷಗಳಿಂದ ಸೇವೆ ಸಲ್ಲಿಸುತ್ತಿದೆ. ಜಿಲ್ಲೆಯ ಕೈಗಾರಿಕೆ ಅಭಿವೃದ್ಧಿ ಹೊಂದಲು ಮತ್ತು ಸಮಸ್ಯೆ ಆಲಿಸಲು ಯಡಿಯೂರಪ್ಪನವರು ಬಂದಿರುವುದು ಸಂತಸ ತಂದಿದೆ ಎಂದರು.

ಜಿಲ್ಲೆಯ ಕೈಗಾರಿಕೆಗಳ ಅಭಿವೃದ್ಧಿ ಹೊಂದಲು ಮಹಾನಗರ ಪಾಲಿಕೆಯ ವ್ಯಾಪ್ತಿಯ ಆಸ್ತಿಗಳನ್ನು ಕೆಐಎಡಿಬಿಯಿಂದ ಮಹಾನಗರ ಪಾಲಿಕೆಗೆ ವರ್ಗಾವಣೆ ಮಾಡಿಕೊಂಡು ನಂತರ ಪ್ರತ್ಯೇಕ ಕೈಗಾರಿಕಾ ವರ್ಗ ಮಾಡಿ ಕೈಗಾರಿಕೆ ಆಸ್ತಿ ತೆರಿಗೆ ನಿರ್ಧಾರ ಮಾಡಬೇಕು ಎಂದು ಮನವಿ ಮಾಡಿದರು.

ಕಾರ್ಮಿಕರ ಕನಿಷ್ಠ ವೇತನ 21 ಸಾವಿರದಿಂದ 31 ಸಾವಿರಕ್ಕೆ ನಿಗದಿಪಡಿಸಲಾಗಿದೆ. ಇದರಿಂದ ಕೈಗಾರಿಕೋದ್ಯಮಿಗಳಿಗೆ ಹೊಡೆತ ಬೀಳಲಿದ್ದು, ಕೈಗಾರಿಕೆಗಳನ್ನು ಮುಚ್ಚಬೇಕಾಗುತ್ತದೆ. ಹಾಗಾಗಿ ಈ ಹಿಂದಿನಂತೆ ಕನಿಷ್ಠ ವೇತನ ಮುಂದುವರೆಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಟಿ.ಜೆ.ಗಿರೀಶ್, ಕಾರ್ಯದರ್ಶಿ ಡಿ.ಆರ್. ಮಲ್ಲೇಶಯ್ಯ, ಸಹ ಕಾರ್ಯದರ್ಶಿ ಪಿ.ಆರ್. ಕುರಂದವಾಡ್, ಖಜಾಂಚಿ ಶ್ರೀಕಂಠಸ್ವಾಮಿ, ರಾಜಗೋಪಾಲ್, ನಿರ್ದೇಶಕರುಗಳು , ಮಾಜಿ ಅಧ್ಯಕ್ಷರುಗಳು, ಸದಸ್ಯರು, ಎಫ್‌ಕೆಸಿಸಿಐ ನಿರ್ದೇಶಕರು , ಕಾಸಿಯಾ ನಿರ್ದೇಶಕರು, ಎಲ್ಲಾ ಕೈಗಾರಿಕಾ ಅಸೋಸಿಯೇಷನ್‌ಗಳ ಪದಾಧಿಕಾರಿಗಳು, ಕೈಗಾರಿಕೋದ್ಯಮಿಗಳು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಜಿಲ್ಲೆಯ ಕೈಗಾರಿಕಾ ವಲಯಗಳ ಕುಂದು ಕೊರತೆಗಳನ್ನು ಅತಿ ಶೀಘ್ರವಾಗಿ ನೆರವೇರಿಸಿ ಕೊಡಬೇಕೆಂದು ಮನವಿ ಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಸದ ಜಿ.ಎಸ್. ಬಸವರಾಜು, ಶಾಸಕ ಜ್ಯೋತಿಗಣೇಶ್, ಮಾಜಿ ಸಚಿವ ಬಿ.ಸಿ. ನಾಗೇಶ್, ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಡಾ. ಎಂ.ಆರ್. ಹುಲಿನಾಯ್ಕರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್, ಟಿ.ಆರ್. ಸದಾಶಿವಯ್ಯ ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಮಲಾಕರ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್‌! - ಖಾಸಗಿ ಕ್ಷಣಗಳ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌
ರಾಜಧಾನಿಯಲ್ಲಿ ಡ್ರಗ್ಸ್ ಬೇಟೆ : ಸಾವಿರ ವ್ಯಸನಿಗಳ ಸೆರೆ