ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿಲ್ಲ, ಬದಲಾಗಿ ಮತ್ತಷ್ಟು ಬಲಿಷ್ಟವಾಗಿದೆ ಎಂದು ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ.ರಘುಮೂರ್ತಿ ಹೇಳಿದರು.ಚಿತ್ರದುರ್ಗ ತಾಲೂಕು ತುರುವನೂರು ಗ್ರಾಮದ ಪ್ರೌಢಶಾಲಾ ಆವರಣದಲ್ಲಿ ಮಂಗಳವಾರ ಆಯೋಜಿಸಲಾದ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನಗಳ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಬಾರಿ ಬಜೆಟ್ನ ಸುಮಾರು ₹50 ಸಾವಿರ ಕೋಟಿಗೂ ಅಧಿಕ ಹಣವನ್ನು ಗ್ಯಾರಂಟಿ ಯೋಜನೆಗಳಿಗಾಗಿ ಮೀಸಲು ಇರಿಸಲಾಗಿದೆ. ಕಳೆದ ಜೂನ್ 21 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಇದರಿಂದ ರಾಜ್ಯದ ಎಲ್ಲಾ ವರ್ಗದ ಮಹಿಳೆಯರು ಉಚಿತವಾಗಿ ರಾಜ್ಯಾದ್ಯಂತ ಪ್ರಯಾಣ ಮಾಡುವ ಅವಕಾಶ ಲಭಿಸಿದೆ ಎಂದರು.
ಚುನಾವಣೆ ಸಂದರ್ಭದಲ್ಲಿ ಜನರಿಗೆ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿ ಮಾಡುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿತ್ತು. ವಿರೋಧ ಪಕ್ಷಗಳು ಈ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದು ಸಾಧ್ಯವಿಲ್ಲ. ಒಂದು ವೇಳೆ ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕೆ ಮಾಡುವುದರೊಂದಿಗೆ, ಕುಹಕದ ಮಾತುಗಳನ್ನು ಆಡಿದ್ದವು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ, ಕೊಟ್ಟ ಮಾತಿನಂತೆ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿ, ಟೀಕೆ ಟಿಪ್ಪಣಿ ಹಾಗೂ ಕುಹಕಗಳಿಗೆ ತಕ್ಕ ಉತ್ತರ ನೀಡಿದೆ ಎಂದರು.ಚುನಾವಣೆ ಸಂದರ್ಭದಲ್ಲಿ ನೀಡುತ್ತಿದ್ದ ಆಶ್ವಾಸನೆಗಳನ್ನು ಈಡೇರಿಸುವ ಬದ್ಧತೆಗೆ ಹೊಸ ರೂಪವಾಗಿ ಗ್ಯಾರಂಟಿ ಎಂಬ ಮಾತು ಪ್ರಚಲಿತವಾಗಿದೆ. ಮಾರುಕಟ್ಟೆಯಲ್ಲಿ ಖರೀದಿಸುವ ವಸ್ತುಗಳಿಗೆ ತಯಾರಕರು ಗ್ಯಾರಂಟಿ ಅವಧಿ ಕಾರ್ಡುಗಳನ್ನು ನೀಡುತ್ತಾರೆ. ಅದೇ ರೀತಿ ಸರ್ಕಾರವು ಪ್ರಣಾಳಿಕೆಯಲ್ಲಿ ನೀಡಿದ ಆಶ್ವಾಸನೆ ಈಡೇರಿಸುವ ಬದ್ಧತೆ ತೋರಬೇಕು. ತುರುವನೂರು ಹೋಬಳಿಯಲ್ಲಿ ಶೇ.95ರಷ್ಟು ಎಲ್ಲಾ ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ನೀಡಲಾಗಿದೆ. ದಾಖಲೆಗಳ ಕೊರತೆ ಹಾಗೂ ತಾಂತ್ರಿಕ ಕಾರಣಗಳಿಂದ ಹಲವು ಜನರ ಅರ್ಜಿಗಳಲ್ಲಿ ತೊಂದರೆ ಉಂಟಾಗಿದೆ. ಇದನ್ನು ಸಹ ಸರಿಪಡಿಸಿ 100ಕ್ಕೆ 100 ರಷ್ಟು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಶಾಸಕ ಟಿ.ರಘುಮೂರ್ತಿ ಹೇಳಿದರು.
ತಹಸೀಲ್ದಾರ್ ಡಾ.ನಾಗವೇಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಹೋಬಳಿಯಲ್ಲಿ ಅನ್ನಭಾಗ್ಯ ಯೋಜನೆಯಡಿ 11,812 ಫಲಾನುಭವಿಗಳ ಪೈಕಿ 11,679 ಜನರಿಗೆ, ಗೃಹಲಕ್ಷ್ಮೀ ಯೋಜನೆಯಡಿ 9,832 ಫಲಾನುಭವಿಗಳ ಪೈಕಿ 9,784, ಗೃಹಜ್ಯೋತಿ ಯೋಜನೆಯಡಿ 9,247 ಫಲಾನುಭವಿಗಳ ಪೈಕಿ 8,641 ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ. ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಗಾಗಿ ಹೋಬಳಿಯ 3939 ಯುವಕರು ನೋಂದಣಿ ಮಾಡಿಕೊಂಡಿದ್ದಾರೆ. ಶಕ್ತಿ ಯೋಜನೆಯು ಹೋಬಳಿಯಲ್ಲಿ ಯಶಸ್ವಿಯಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭ್ಯುದಯಕ್ಕೆ ಪೂರಕವಾಗಿವೆ ಎಂದರು.ಇದೇ ವೇಳೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಇದರ ಅಂಗವಾಗಿ ಗ್ರಾಮದ ಪ್ರೌಢಶಾಲಾ ವಿಧ್ಯಾರ್ಥಿನಿಯರಿಗೆ ಏರ್ಪಡಿಸಲಾದ ಪ್ರಬಂಧ, ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ವೇದಿಕೆಯಲ್ಲಿ ಸನ್ಮಾನಿಸಿ ಪ್ರಮಾಣ ಪತ್ರ ವಿತರಿಸಲಾಯಿತು.
ವಕೀಲರಾದ ದಿಲ್ಶಾದ್ ಮಹಿಳಾ ಕಾನೂನು ಹಾಗೂ ಮಹಿಳೆಯರ ಸುರಕ್ಷತೆ ಕುರಿತು ಉಪನ್ಯಾಸ ನೀಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಜಿಪಂ ಮಾಜಿ ಸದಸ್ಯ ಬಾಬುರೆಡ್ಡಿ, ತಾಪಂ ಇಓ ಅನಂತರಾಜು, ತುರುವನೂರು ಗ್ರಾಪಂ ಅಧ್ಯಕ್ಷೆ ದೀಪಾ.ಪಿ ಮಹೇಶ್, ಬೆಳಗಟ್ಟ ಗ್ರಾಪಂ ಅಧ್ಯಕ್ಷೆ ಮಂಜುಶ್ರೀ ಪಾಲಯ್ಯ, ಕೂನಬೇವು ಗ್ರಾಪಂ ಅಧ್ಯಕ್ಷ ಜಿ.ಪಿ ಅನಿಲ್ ಕುಮಾರ್, ಮಾಡನಾಯಕನಹಳ್ಳಿ ಗ್ರಾಪಂ ಅಧ್ಯಕ್ಷೆ ಕವಿತಾ ನಾಗರಾಜ್, ಮುದ್ದಾಪುರ ಗ್ರಾಪಂ ಅಧ್ಯಕ್ಷೆ ಮಂಗಳಾ, ಚಿಕ್ಕಗೊಂಡನಹಳ್ಳಿ ಗ್ರಾಪಂ ಅಧ್ಯಕ್ಷೆ ಮಹಾಂತಮ್ಮ, ಸಿಡಿಪಿಓ ಸುಧಾ, ವೈದ್ಯಾಧಿಕಾರಿ ಸುಶ್ಮಿತಾ ಉಪಸ್ಥಿತರಿದ್ದರು. ಕೂನಬೇವು ಪಿಡಿಓ ಧನಂಜಯ ಸ್ವಾಗತಿಸಿದರು. ತುರುವನೂರು ಪಿಡಿಓ ಖಲೀಂ ಕಾರ್ಯಕ್ರಮ ನಿರೂಪಿಸಿದರು.