ರಾಜ್ಯ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಲಿ: ವಿಜಯೇಂದ್ರ

KannadaprabhaNewsNetwork |  
Published : Aug 05, 2026, 01:15 AM IST
ಪೋಟೋ 1 : ತ್ಯಾಮಗೊಂಡ್ಲು ಹೋಬಳಿಯ ಹಸಿರುವಳ್ಳಿ ಗ್ರಾಮದಲ್ಲಿ ಅಕಾಲಿಕ ಮರಣ ಹೊಂದಿದ ಬಿಜೆಪಿ ಕಾರ್ಯಕರ್ತ ಲೋಕೇಶ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿದರು | Kannada Prabha

ಸಾರಾಂಶ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇವಲ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕೈಕಟ್ಟಿ ಕುಳಿತುಕೊಳ್ಳದೆ, ಸಂಕಷ್ಟದಲ್ಲಿರುವ ರೈತರಿಗೆ ಕೂಡಲೇ 10,000 ಕೋಟಿ ರು. ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಬರ ಅಧ್ಯಯನ ನಡೆಸಲು ಬಂದ ಬಿಜೆಪಿ ರಾಜ್ಯಾಧ್ಯಕ್ಷರಿಗೆ ವರುಣನ ಸ್ವಾಗತ

ಅಕಾಲಿಕ ಮರಣ ಹೊಂದಿದ ಕಾರ್ಯಕರ್ತನ ಮನೆಗೆ ಭೇಟಿ ನೀಡಿ ಸಾಂತ್ವನ

ಕನ್ನಡಪ್ರಭ ವಾರ್ತೆ ದಾಬಸ್‍ಪೇಟೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇವಲ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕೈಕಟ್ಟಿ ಕುಳಿತುಕೊಳ್ಳದೆ, ಸಂಕಷ್ಟದಲ್ಲಿರುವ ರೈತರಿಗೆ ಕೂಡಲೇ 10,000 ಕೋಟಿ ರು. ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.ತ್ಯಾಮಗೊಂಡ್ಲು ಹೋಬಳಿ ಹಸಿರುವಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಬೆಂಗಳೂರು ಗ್ರಾಮಾಂತರದಲ್ಲಿ ಸ್ವಲ್ಪ ಮಳೆಯಾಗುತ್ತಿದೆಯಾದರೂ ಸಸಿಗಳು ಇನ್ನೂ ಮೊಳಕೆಯಾಗಿಲ್ಲ. ರಾಜ್ಯದಲ್ಲಿ ಭೀಕರ ಬರಗಾಲದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ರಾಜ್ಯ ಸರ್ಕಾರ ರಾಜಕೀಯ ಕೆಸರೆರಚಾಟದಲ್ಲಿ ತೊಡಗಿರುವುದು ನಾಚಿಕೆಗೇಡಿನ ಸಂಗತಿ. ಇನ್ನಾದರೂ ಬರ ಪರಿಹಾರ ನೀಡಲು ಮುಂದಾಗಲಿ ಎಂದರು.

ರೈತರು ವಿಮಾ ಹಣ ಪಾವತಿಗೂ ಪರದಾಡುತ್ತಿದ್ದಾರೆ. ಒಂದೊಂದು ತಾಲೂಕಿಗೆ ಸುಮಾರು 50-60 ಲಕ್ಷ ಬೆಳೆ ವಿಮೆ ಖರ್ಚು ಬರಬಹುದಾಗಿದ್ದು, ಸರ್ಕಾರವೇ ಬೆಳೆ ವಿಮೆ ಹಣ ಪಾವತಿಸಿಸಬೇಕೆಂದು ಅವರು ಆಗ್ರಹಿಸಿದರು.ಸಮರ್ಪಕ ವಿದ್ಯುತ್ ನೀಡಬೇಕು:

ಸಮರ್ಪಕ ವಿದ್ಯುತ್ ಇಲ್ಲದೆ ರಾಗಿ, ತೆಂಗು, ಅಡಿಕೆ ಬೆಳೆ ನಾಶವಾಗುತ್ತಿವೆ. ಪ್ರತಿದಿನ 7 ಗಂಟೆ ನಿರಂತರ 3-ಫೇಸ್ ಸಮರ್ಪಕ ವಿದ್ಯುತ್ ನೀಡಬೇಕು ಎಂದು ಅವರು ಆಗ್ರಹಿಸಿದರು.

ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಮಾಡಿ ರೈತರು, ಮಹಿಳೆಯರ ಸಮಸ್ಯೆ ಆಲಿಸುತ್ತೇನೆ. ರೈತರ ಸಂಕಷ್ಟಗಳಿಗೆ ಸ್ಪಂದಿಸದಿದ್ದರೆ ನಮ್ಮ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಅವರು ಎಚ್ಚರಿಸಿದರು.ಬಿಡದಿ ಟೌನ್ ಶಿಪ್:

ಮುಖ್ಯಮಂತ್ರಿ ರೈತರ ಹಿತಾಸಕ್ತಿ ಕಾಪಾಡುವ ಬದಲು ರಿಯಲ್ ಎಸ್ಟೇಟ್ ಮಾಡಲು ಹೊರಟಿರುವುದು ಅಕ್ಷ್ಯಮ್ಯ ಅಪರಾಧ. ಬಿಡದಿ ರೈತರ ವಿಚಾರದಲ್ಲಿ ಜೆಡಿಎಸ್ ಪ್ರತ್ಯೇಕ ಹೋರಾಟ ಮಾಡುತ್ತಿದೆ. ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ನಿಧನರಾಗಿದ್ದಕ್ಕೆ ಆ ಬಗ್ಗೆ ಚರ್ಚೆ ಮಾಡಲು ಸಾಧ್ಯವಾಗಲಿಲ್ಲ. ಕಳೆದ ವಾರ ಕೇಂದ್ರ ಸಚಿವ ಕುಮಾರಸ್ವಾಮಿ ಜೊತೆ ಚರ್ಚಿಸಿದ್ದೇನೆ. ದಿನಾಂಕ ಕೂಡ ನಿಗದಿ ಮಾಡಿದ್ದಾರೆ. ಈ ಬಗ್ಗೆ ಸದನದಲ್ಲಿ ಧ್ವನಿ ಎತ್ತುತ್ತೇವೆ ಎಂದು ತಿಳಿಸಿದರು.ಕಾರ್ಯಕರ್ತನ ಮನೆಗೆ ಭೇಟಿ:

ಅಕಾಲಿಕ ಮರಣ ಹೊಂದಿದ ಬಿಜೆಪಿ ಕಾರ್ಯಕರ್ತ ಹಸಿರುವಳ್ಳಿ ಲೋಕೇಶ್ ಮನೆಗೆ ಭೇಟಿ ನೀಡಿದ ವಿಜಯೇಂದ್ರ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತರ ಪತ್ನಿ ಕೆಲಸ ಕೊಡಿಸುವಂತೆ ಮನವಿ ಮಾಡಿದಾಗ ತಹಸೀಲ್ದಾರ್ ಗೆ ಕರೆ ಮಾಡಿ ಅಗತ್ಯ ನೆರವಿನ ಬಗ್ಗೆ ತಿಳಿಸಿ ಭರವಸೆ ನೀಡಿ ಆರ್ಥಿಕ ಸಹಾಯ ಮಾಡಿದರು.

ವಿಜಯೇಂದ್ರ ಅವರು ದಾಬಸ್‍ಪೇಟೆಗೆ ಬಂದಾಗ ಮಳೆಯೂ ಆರಂಭವಾಗಿ ಸ್ವಾಗತ ಕೋರಿತು. ತುಮಕೂರು ಗ್ರಾಮಾಂತರ ಶಾಸಕ ಸುರೇಶಗೌಡ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ತುಮಕೂರು ನಗರ ಶಾಸಕ ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ಮಾಜಿ ಶಾಸಕ ಎಂ.ವಿ.ನಾಗರಾಜು, ಜಿ.ಪಂ.ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ, ಎನ್ ಡಿಎ ಮಾಜಿ ಅಧ್ಯಕ್ಷ ಮಲ್ಲಯ್ಯ, ಬಿಜೆಪಿ ರೈತಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ.ಭೃಂಗೇಶ್, ಮುಖಂಡ ಸಪ್ತಗಿರಿ ಶಂಕರ್ ನಾಯಕ್ ಸೇರಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

----------------

ಪೋಟೋ 1 :

ತ್ಯಾಮಗೊಂಡ್ಲು ಹೋಬಳಿ ಹಸಿರುವಳ್ಳಿ ಗ್ರಾಮದಲ್ಲಿ ಅಕಾಲಿಕ ಮರಣ ಹೊಂದಿದ ಬಿಜೆಪಿ ಕಾರ್ಯಕರ್ತ ಲೋಕೇಶ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಡಿತರ ಅಂಗಡಿ ಮಾಲೀಕರಿಗೆ ಕೆ2 ಮೂಲಕ ಕಮೀಷನ್‌
ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈ ತಪ್ಪಿದ್ದನ್ನು ವಿರೋಧಿಸಿ ನಾಳೆ ಬಂದ್