ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಎಪಿಎಂಸಿ ಪ್ರಾಂಗಣಕ್ಕೆ ಆವರಗೆರೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮೆಕ್ಕೆಜೋಳ ಖರೀದಿಗೆ ನೋಂದಣಿ ಮಾಡಿಸಿದ್ದ ರೈತರು ಟ್ರ್ಯಾಕ್ಟರ್ನಲ್ಲಿ ಮೆಕ್ಕೆಜೋಳ ಲೋಡ್ ಮಾಡಿಕೊಂಡು ಇಲ್ಲಿನ ಎಪಿಎಂಸಿಗೆ ಬಂದಾಗ ಖರೀದಿ ಪ್ರಕ್ರಿಯೆ ಕೈಗೊಳ್ಳಲು ಅಧಿಕಾರಿಗಳು ಹಿಂದೇಟು ಹಾಕಿದ್ದರಿಂದ ಮೆಕ್ಕೆಜೋಳ ತುಂಬಿದ್ದ ಟ್ರ್ಯಾಕ್ಟರ್ ಗಳ ಸಮೇತ ರೈತರು ಪ್ರತಿಭಟಿಸಿದರು.
ಇದೇ ವೇಳೆ ಮಾತನಾಡಿದ ಬಿಜೆಪಿ ರೈತ ಮೋರ್ಚಾ ಮುಖಂಡ ಬಿ.ಎಂ.ಸತೀಶ, ಜಿಲ್ಲೆಯಲ್ಲಿ ಪಶು/ಕುಕ್ಕುಟ ಆಹಾರ ಉತ್ಪಾದನೆ ಘಟಕಗಳು ಶೇ.20ರಷ್ಟು ಮುಂಗಡ ಹಣ ಪಾವತಿಸಿ, 455 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಬೇಕು. ಎಸ್.ಎಸ್.ಗಣೇಶ ಮಾಲಿಕತ್ವದ ಕುಕ್ಕುವಾಡ ಶುಗರ್ ಡಿಸ್ಟಿಲರಿಗೆ ಶೇ.50ರಷ್ಟು ಮುಂಗಡ ಹಣ ಪಾವತಿಸಿ, 729.5 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ರಾಜ್ಯ ಸರ್ಕಾರ ಆದೇಶಿಸಿದೆ ಎಂದರು.ಪಶು/ಕುಕ್ಕುಟ ಆಹಾರ ಉತ್ಪಾದನೆ ಘಟಕಗಳು ಶೇ.20ರಷ್ಟು ಮುಂಗಡ ಹಣ ಪಾವತಿಸಿರುವುದರಿಂದ ರೈತರು ಅವರಗೆರೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಿಯಮಾನುಸಾರ ನೋಂದಣಿ ಮಾಡಿಸಿ, ಮೆಕ್ಕೆಜೋಳ ಟ್ರ್ಯಾಕ್ಟರ್ಗಳಲ್ಲಿ ಲೋಡ್ ಮಾಡಿಕೊಂಡು ಎಪಿಎಂಸಿ ಪ್ರಾಂಗಣಕ್ಕೆ ತಂದಿದ್ದಾರೆ. ಆದರೆ ಖರೀದಿ ಪ್ರಕ್ರಿಯೆ ನಡೆಸಬೇಕಾದ ಅಧಿಕಾರಿಗಳು, ಖರೀದಿಸಬೇಕಾದ ಪಶು/ಕುಕ್ಕುಟ ಆಹಾರ ಉತ್ಪಾದನೆ ಘಟಕಗಳ ಮಾಲೀಕರಿಲ್ಲದೇ ರೈತರು ರೊಚ್ಚಿಗೆದ್ದಿದ್ದಾರೆ ಎಂದರು.
ಮೆಕ್ಕೆಜೋಳ ಖರೀದಿಸುವಂತೆ ರೈತರು ಕೆಲ ದಿನಗಳ ಹಿಂದೆ ನಿರಂತರ ಹೋರಾಟ ಮಾಡಿದ್ದ ಹಿನ್ನೆಲೆಯಲ್ಲಿ ಸರ್ಕಾರ ರೈತ ಸಂಘಟನೆಗಳು, ರೈತ ಮುಖಂಡರ ಸಭೆ ನಡೆಸಿ, ಮೆಕ್ಕೆಜೋಳ ಖರೀದಿಗೆ ಆದೇಶ ಹೊರಡಿಸಿದೆ. ಹೀಗಿದ್ದರೂ ನೋಂದಣಿ ಮಾಡಿಸಿದ ರೈತರಿಂದ ಮೆಕ್ಕೆಜೋಳ ಖರೀದಿಗೆ ತಾತ್ಸಾರ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.
ರೈತ ಮುಖಂಡರಾದ ತುಂಬಿಗೆರೆ ದಿನೇಶ ಗೌಡ, ರೈತ ಸಂಘದ ಮುಖಂಡ ಬುಳ್ಳಾಪುರ ಹನುಮಂತಪ್ಪ, ಪವಾಡ ರಂಗವ್ವನಹಳ್ಳಿ ಮಲ್ಲೇಶಪ್ಪ ಇತರರು ಇದ್ದರು.