ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರ ಹಸ್ತಕ್ಷೇಪವಿಲ್ಲ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

KannadaprabhaNewsNetwork | Updated : Feb 07 2025, 08:22 AM IST

ನಮ್ಮ ಮೆಟ್ರೋ ದರ ಏರಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟವಾಗಿ ಹೇಳಿದ್ದಾರೆ.

 ಬೆಂಗಳೂರು : ಮೆಟ್ರೋ ಪ್ರಯಾಣ ದರ ಹೆಚ್ಚಳದ ಬಗ್ಗೆ ಬಿಎಂಆರ್‌ಸಿಎಲ್ ತೀರ್ಮಾನ ಮಾಡುತ್ತದೆ. ಇದಕ್ಕಾಗಿ ನಿವೃತ್ತ ನ್ಯಾಯಮೂರ್ತಿ ಥರಾಣಿ ನೇತೃತ್ವದಲ್ಲಿ ಕೇಂದ್ರದ ಸಮಿತಿ ರಚಿಸಲಾಗಿದ್ದು, ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಗುರುವಾರ ಅವರು ನಗರ ಪ್ರದಕ್ಷಿಣೆಯಲ್ಲಿ ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ, ನಾಯಂಡಹಳ್ಳಿ ಸಮೀಪ ಡಬಲ್‌ ಡಕ್ಕರ್‌ ವ್ಯವಸ್ಥೆ, ಗೊರಗುಂಟೆಪಾಳ್ಯ ಸಮೀಪ ಅಂಡರ್‌ಪಾಸ್‌ ಮತ್ತು ಡಬಲ್‌ ಡೆಕ್ಕರ್‌ ಸೇರಿದಂತೆ ವಿವಿಧೆಡೆ ಕಾಮಗಾರಿಗಳನ್ನು ವೀಕ್ಷಿಸಿದರು.

ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ಸಮಿತಿ ವರದಿ ಸಲ್ಲಿಕೆ ಮಾಡಿದೆ. ಈಗಾಗಲೇ ನಿಗಮವು ಒಂದು ತೀರ್ಮಾನ ತೆಗೆದುಕೊಂಡಿದೆ. ನಾನು ಆ ವರದಿಯಲ್ಲಿ ಏನಿದೆ ಎಂದು ಮೂಗು ತೂರಿಸಲು ಹೋಗುವುದಿಲ್ಲ ಎಂದರು.

ನೂತನ ಮೆಟ್ರೋ ಮಾರ್ಗಗಳು ಹೋಗುವ ಕಡೆ ಡಬಲ್ ಡೆಕ್ಕರ್ ಮಾಡಲು ಹೆಚ್ಚುವರಿ ₹9,800 ಕೋಟಿ ವೆಚ್ಚವಾಗುತ್ತದೆ. ಈಗ ಪಶ್ಚಿಮ ಭಾಗದಲ್ಲಿ ಮಾತ್ರ ಮಾಡಲಾಗುತ್ತಿದೆ. ಈಗಾಗಲೇ ರಾಗಿಗುಡ್ಡ ಭಾಗದಲ್ಲಿ ಈ ಪ್ರಯೋಗ ನಡೆಸಿ ಯಶಸ್ವಿಯಾಗಿದ್ದೇವೆ. ಇನ್ನೂ ಒಂದಷ್ಟು ಸುಧಾರಣೆಗಳನ್ನು ಮಾಡಿಕೊಳ್ಳಬೇಕಿದೆ. ಈ ದಿಸೆಯಲ್ಲಿ ಪ್ರಕ್ರಿಯೆ ನಡೆದಿದೆ ಎಂದರು.

ಹೊಸದಾಗಿ ನಿರ್ಮಾಣ ಮಾಡುವ ಎಲ್ಲಾ ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ನಿರ್ಮಾಣ ಮಾಡಲಾಗುವುದು. ಸುಮಾರು 40 ಕಿ.ಮೀ. ಮಾರ್ಗದಲ್ಲಿ ನಿರ್ಮಾಣ ಮಾಡುವ ಆಲೋಚನೆಯಿದೆ. ನಾವು ಇಂದಿಗೆ ಮಾತ್ರ ಯೋಚನೆ ಮಾಡುತ್ತಿಲ್ಲ. ಮುಂದಿನ 30–40 ವರ್ಷದ ಭವಿಷ್ಯವನ್ನು ಇಟ್ಟುಕೊಂಡು ಆಲೋಚನೆ ಮಾಡುತ್ತೇವೆ. ಇದರ ಖರ್ಚು ವೆಚ್ಚವನ್ನು ಶೇ.50:50 ಅನುಪಾತದಲ್ಲಿ ಬಿಬಿಎಂಪಿ, ಬಿಎಂಆರ್‌ಸಿಎಲ್ ವಹಿಸಿಕೊಳ್ಳುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಬಿಡಿಎ ಆಯುಕ್ತ ಜಯರಾಮ್‌, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌, ವಿಶೇಷ ಆಯುಕ್ತ ಮುನಿಶ್‌ ಮೌದ್ಗೀಲ್‌, ಬಿಎಂಆರ್‌ಡಿಎ ರಾಜೇಂದ್ರ ಚೋಳನ್‌, ನಗರ ಪೊಲೀಸ್‌ ಆಯುಕ್ತ ಅನುಚೇತ್‌ ಇದ್ದರು.

ಹೆಬ್ಬಾಳ ಮೇಲ್ಸೇತುವೆ ಮೇನಲ್ಲಿ ಸೇವೆಗೆ ಲಭ್ಯ

ಹೆಬ್ಬಾಳ ಮೇಲ್ಸೆತುವೆ ಬಳಿ ಇರುವ ಬಿಡಿಎ ಜಾಗದಲ್ಲಿ ಪರ್ಯಾಯ ರಸ್ತೆ ಮಾಡಲಾಗುತ್ತಿದೆ. ಇದು ಏಪ್ರಿಲ್ 30ಕ್ಕೆ ಕಾಮಗಾರಿ ಮುಗಿಸಬೇಕು, ಮೇ ಹೊತ್ತಿಗೆ ಉದ್ಘಾಟನೆಯಾಗಬೇಕು ಎಂದು ಸೂಚಿಸಲಾಗಿದೆ. ತುಮಕೂರಿನಿಂದ ಕೆ.ಆರ್ ಪುರಕ್ಕೆ ಹೋಗುವ ರಸ್ತೆ ಬಳಿ ಸಂಚಾರ ದಟ್ಟಣೆಯನ್ನು ತಪ್ಪಿಸಲು ಅಂಡರ್ ಪಾಸ್ ನಿರ್ಮಾಣಕ್ಕೆ ಬಿಡಿಎ, ಮೆಟ್ರೋ, ಬಿಬಿಎಂಪಿ ಸೇರಿ ಅಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಈ ಕಾಮಗಾರಿಯನ್ನು ಬಿಡಿಎ ನಿರ್ವಹಿಸಲಿದೆ. ರಾಜ್ಯ ಬಜೆಟ್ ಇರುವ ಕಾರಣಕ್ಕೆ ಬೆಂಗಳೂರು ಅಭಿವೃದ್ದಿ ಹಾಗೂ ನೀರಾವರಿ ಇಲಾಖೆಗೆ ಬೇಕಾದ ಅನುದಾನಗಳ ಬಗ್ಗೆ ಅಧಿಕಾರಿಗಳ ಬಳಿ ಚರ್ಚೆ ಮಾಡಿ ಶುಕ್ರವಾರ ಮುಖ್ಯಮಂತ್ರಿಯವರಿಗೆ ನೀಡಲಾಗುವುದು ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ಮೆಟ್ರೋ ಪಿಲ್ಲರ್‌ಗಳಲ್ಲಿ ಜಾಹೀರಾತು!

ಬ್ರ್ಯಾಂಡ್‌ ಬೆಂಗಳೂರು ಯೋಜನೆಯಡಿ ನಗರವನ್ನು ಸೌಂದರ್ಯೀಕರಣ ಮಾಡುವ ಸಲುವಾಗಿ ಬಿಬಿಎಂಪಿ, ಬಿಎಂಆರ್‌ಸಿಎಲ್ ಒಟ್ಟಿಗೆ ಸೇರಿ ತೀರ್ಮಾನ ಮಾಡಬೇಕು. ಜೊತೆಗೆ ಮೆಟ್ರೋ ಪಿಲ್ಲರ್‌ಗಳಲ್ಲಿ ಜಾಹೀರಾತಿಗೆ ಅವಕಾಶ ಮಾಡಿಕೊಡಬೇಕು. ಎರಡೂ ಸಂಸ್ಥೆಗಳು ಶೇ 50:50 ಅನುಪಾತದಲ್ಲಿ ಕೆಲಸ ಮಾಡಬೇಕು. ಆದಾಯವನ್ನು ಇದೇ ಮಾದರಿಯಲ್ಲಿ ಹಂಚಿಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ನೀರಿನ ದರ ಏರಿಕೆ ಬಗ್ಗೆ ಸಂಪುಟದಲ್ಲಿ ನಿರ್ಧಾರ

ಕುಡಿಯುವ ನೀರಿನ ದರ ಏರಿಕೆ ವಿಚಾರವನ್ನು ಸಚಿವ ಸಂಪುಟ ಸಭೆಯ ಮುಂದೆ ಇಡಲಾಗುವುದು. ನೀರಿನ ದರ ಏರಿಕೆಯಾಗಿ 14 ವರ್ಷಗಳಾಗುತ್ತಾ ಬಂದಿದೆ. ಮಂಡಳಿಗೆ ವರ್ಷಕ್ಕೆ ₹1 ಸಾವಿರ ಕೋಟಿ ನಷ್ಟವಾಗುತ್ತಿರುವ ಕಾರಣಕ್ಕೆ ದರ ಏರಿಕೆ ಅನಿವಾರ್ಯವಾಗಿದೆ. ಬಿಡ್ಲ್ಯೂಎಸ್‌ಎಸ್‌ಬಿ ಅವರು ಈಗಾಗಲೇ ವರದಿ ನೀಡಿದ್ದು, ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದರು.