21ರಂದು ಮ.ಬೆಟ್ಟದಲ್ಲಿ ರಾಜ್ಯಮಟ್ಟದ ಜಾನಪದ ಜಾತ್ರೆ

KannadaprabhaNewsNetwork |  
Published : Feb 15, 2025, 12:32 AM IST
14ಸಿಎಚ್‌ಎನ್‌64ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಾನಪದ ಜಾತ್ರೆ ರೂಪುರೇಷಗಳ ಸಂಬಂಧ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು  ಪೂರ್ವಭಾವಿ ಸಭೆಯನ್ನು ನಡೆಸಿದರು.  | Kannada Prabha

ಸಾರಾಂಶ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಾನಪದ ಜಾತ್ರೆ ರೂಪುರೇಷೆಗಳ ಸಂಬಂಧ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಪೂರ್ವಭಾವಿ ಸಭೆ ನಡೆಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶೇಷ ಘಟಕ ಉಪಯೋಜನೆಯಡಿ ವಿವಿಧ ಪ್ರಕಾರದ ಜಾನಪದ ಕಲೆಗಳ ಪ್ರದರ್ಶನವಾದ ‘ಜಾನಪದ ಜಾತ್ರೆ’ ರಾಜ್ಯಮಟ್ಟದ ಕಾರ್ಯಕ್ರಮವನ್ನು ಫೆ.21ರಂದು ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆಮಹದೇಶ್ವರಬೆಟ್ಟದಲ್ಲಿ ಆಯೋಜಿಸಿದ್ದು, ಇದಕ್ಕೆ ಸಕಲ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಾನಪದ ಜಾತ್ರೆ ರೂಪುರೇಷೆಗಳ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರಿಶಿಷ್ಟ ಜಾತಿ ಸಮುದಾಯದಲ್ಲಿ ಇರುವ ಕಲೆಗಳನ್ನು ಪುನಶ್ಚೇತನಗೊಳಿಸಿ ಮತ್ತು ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಜಾನಪದ ಜಾತ್ರೆ ಶೀರ್ಷಿಕೆಯಡಿಯಲ್ಲಿ ರಾಜ್ಯ ಸರ್ಕಾರ ವಿವಿಧ ಪ್ರಕಾರದ ಜಾನಪದ ಕಲೆಗಳನ್ನು ಒಂದೇ ಸೂರಿನಡಿ ತಂದು ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.

ರಾಜ್ಯಮಟ್ಟದ ಜಾನಪದ ಜಾತ್ರೆ ಕಾರ್ಯಕ್ರಮ ಆಯೋಜನೆಗೆ ಮಲೆ ಮಹದೇಶ್ವರಬೆಟ್ಟವನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಜಿಲ್ಲೆಗೆ ಈ ಅವಕಾಶ ದೊರೆತಿರುವುದನ್ನು ಸದುಪಯೋಗಪಡಿಸಿಕೊಳ್ಳಬೇಕು. ರಾಜ್ಯದ ವಿವಿಧ ಜಾನಪದ ಕಲಾತಂಡಗಳನ್ನು ಗುರುತಿಸಿ 40 ರಿಂದ 45 ವಿವಿಧ ಕಲಾ ಪ್ರಕಾರಗಳ ತಂಡಗಳಿಗೆ ತರಬೇತಿ ಮತ್ತು ಪ್ರದರ್ಶನಕ್ಕೆ ಅವಕಾಶವಾಗುತ್ತಿದೆ ಎಂದು ತಿಳಿಸಿದರು.

ಜಾನಪದ ಜಾತ್ರೆ ಕಾರ್ಯಕ್ರಮ ಮಲೆಮಹದೇಶ್ವರ ಬೆಟ್ಟದ ರಂಗಮಂದಿರದಲ್ಲಿ ಫೆ.21ರಂದು ಸಂಜೆ ನಿಗದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಜಾನಪದ ಕಲಾವಿದರಿಗೂ ಹೆಚ್ಚಿನ ಅವಕಾಶ ಹಾಗೂ ಆದ್ಯತೆ ನೀಡಬೇಕು. ರಾಜ್ಯದ ವಿವಿಧ ಭಾಗಗಳಿಂದ ಅಂದಾಜು 500 ಕಲಾವಿದರು ಭಾಗವಹಿಸುವ ನಿರೀಕ್ಷೆಯಿದೆ. ಈ ಎಲ್ಲ ಕಲಾವಿದರಿಗೆ ವಾಸ್ತವ್ಯ, ಊಟ ಉಪಹಾರ ಸೇರಿದಂತೆ ಎಲ್ಲ ಅಗತ್ಯ ಸೌಕರ್ಯಗಳನ್ನು ಅಚ್ಚುಕಟ್ಟಾಗಿ ಒದಗಿಸಬೇಕೆಂದು ಸೂಚಿಸಿದರು.

ಕಲಾ ಪ್ರದರ್ಶನಕ್ಕೆ ಬೃಹತ್ ವೇದಿಕೆ, ಉತ್ತಮ ಧ್ವನಿ, ಬೆಳಕು, ವಿನ್ಯಾಸ ಇರಬೇಕು. ಎಲ್ಲವು ಗುಣಮಟ್ಟದ್ದಾಗಿರಬೇಕು. ಕಲಾವಿದರು ಪ್ರದರ್ಶನ ನೀಡಿದ 24 ಗಂಟೆಯೊಳಗೆ ಸಂಭಾವನೆ ಕಲಾವಿದರ ಬ್ಯಾಂಕ್ ಖಾತೆಗೆ ಜಮೆಯಾಗಬೇಕು. ಕಲಾ ಪ್ರದರ್ಶನ ಹಾಗೂ ತಾಲೀಮಿಗಾಗಿ ಕಲಾವಿದರು ಮುಂಚಿತವಾಗಿಯೇ ಆಗಮಿಸಲಿದ್ದಾರೆ. ಇದಕ್ಕೂ ಸೂಕ್ತ ಏರ್ಪಾಡು ಮಾಡಬೇಕು ಎಂದರು.

ಜಾನಪದ ಜಾತ್ರೆ ಸುಸೂತ್ರವಾಗಿ ನಡೆಯಲು ವಿವಿಧ ಸಮಿತಿಗಳನ್ನು ನೇಮಕ ಮಾಡಿ ಜವಾಬ್ದಾರಿ ನೀಡಲಾಗುತ್ತದೆ. ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆ ಮುದ್ರಣ ಇನ್ನಿತರ ಪ್ರಕ್ರಿಯೆಗಳು ಕೈಗೊಳ್ಳಬೇಕಿದೆ. ಯಾವುದೇ ಗೊಂದಲಕ್ಕೆ ಅವಕಾಶವಾಗದಂತೆ ಸಾಕಷ್ಟು ಮುಂಚಿತವಾಗಿಯೇ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ರಾಜ್ಯಮಟ್ಟದ ಜಾನಪದ ಜಾತ್ರೆ ಯಶಸ್ವಿಗೊಳಿಸಲು ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಿ ಎಂದು ತಿಳಿಸಿದರು.

ಜಿಪಂ ಸಿಇಒ ಮೋನಾರೋತ್, ಎಡಿಸಿ ಗೀತಾ ಹುಡೇದ, ಮಲೆಮಹದೇಶ್ವರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಚಾಮರಾಜನಗರ ಜಿಲ್ಲೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್, ಜಾನಪದ ಜಾತ್ರೆ ಕಾರ್ಯಕ್ರಮದ ಪ್ರಧಾನ ನಿರ್ದೇಶಕ ಕುಂತೂರು ಕುಮಾರ್, ನಿರ್ದೇಶಕ ಹನುಮಂತನಾಯಕ, ಸಂಚಾಲಕರಾದ ಡಾ. ಸಬ್ಬನಹಳ್ಳಿ ರಾಜು, ಕೆ. ನಾಗರಾಜು, ಹೆಚ್.ಸಿ. ನಿಂಗರಾಜು, ಬಿ. ಅನಿಲ್ ಕುಮಾರ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಯೋಗಾನಂದ್, ಹನೂರು ತಹಸೀಲ್ದಾರ್ ಗುರುಪ್ರಸಾದ್, ತಾಪಂ ಇಒ ಉಮೇಶ್ ಇನ್ನಿತರ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ