ಕನ್ನಡಪ್ರಭ ವಾರ್ತೆ ಬೆಂಗಳೂರು:
ಸಂತೋಷ ಲಾಡ್ ಅವರು ಧಾರವಾಡ ಜಿಲ್ಲೆ, ಜಮೀರ್ ಅಹ್ಮದ್ ಖಾನ್ ವಿಜಯನಗರ ಜಿಲ್ಲೆ, ಬಸವರಾಜ ರಾಯರಡ್ಡಿ ಗದಗ ಹಾಗೂ ಮುಂಡರಗಿ ತಾಲೂಕಿನಲ್ಲಿ, ರುದ್ರಪ್ಪ ಲಮಾಣಿ ಹಾವೇರಿ, ಡಾ। ಅಜಯ್ ಧರ್ಮಸಿಂಗ್ ರಾಯಚೂರು, ನಾಗೇಂದ್ರ ಬಳ್ಳಾರಿಯ ಸಂಡೂರು ತಾಲೂಕಿನಲ್ಲಿ, ಯತೀಂದ್ರ ಸಿದ್ದರಾಮಯ್ಯ ಮೈಸೂರು ಜಿಲ್ಲೆಯ ಹುಣಸೂರು ಭಾಗದಲ್ಲಿ, ಸಿ.ಪುಟ್ಟರಂಗಶೆಟ್ಟಿ ಚಾಮರಾಜನಗರದ ಹನೂರು ಭಾಗದಲ್ಲಿ, ಕೆ.ಜೆ.ಜಾರ್ಜ್ ಚಿಕ್ಕಮಗಳೂರು, ಲಕ್ಷ್ಮಣ ಸವದಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಬರ ಪರಿಶೀಲನೆ ನಡೆಸಿದರು.
ಸಚಿವ ಸಂತೋಷ ಲಾಡ್ ಅವರು ಧಾರವಾಡ ಜಿಲ್ಲೆ ಅಳ್ನಾವರ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ಬರ ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದರು. ಬಳಿಕ, ಅಳ್ನಾವರ ತಾಲೂಕಿನ ಬೆಣಚಿ ಗ್ರಾಮ ವ್ಯಾಪ್ತಿಯ ಗೋವಿನ ಜೋಳದ ಹೊಲಕ್ಕೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದರು.ಸಚಿವ ಜಮೀರ್ ಅಹ್ಮದ್ ಖಾನ್ ಅವರು ವಿಜಯನಗರ ಜಿಲ್ಲೆಯ ಹರಪನಹಳ್ಳಿ, ಕೂಡ್ಲಗಿ, ಕೊಟ್ಟೂರು, ಹೊಸಪೇಟೆ ತಾಲೂಕಿನ ಬರಪೀಡಿತ ಭಾಗಗಳಿಗೆ ಭೇಟಿ ನೀಡಿ ಬೆಳೆ ಹಾನಿ ಮತ್ತು ರೈತರ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲನೆ ನಡೆಸಿದರು. ಹೊಸಪೇಟೆ ತಾಲೂಕಿನ ನಂದಿಬಂಡಿ, ಹರಪನಹಳ್ಳಿ ತಾಲೂಕಿನ ಬೆಣ್ಣೆಹಳ್ಳಿ ಗ್ರಾಮದ ರೈತರ ಜೊತೆ ಸಂವಾದ ನಡೆಸಿದರು.
ಸಚಿವ ರುದ್ರಪ್ಪ ಲಮಾಣಿಯವರು ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಅಳಲಗೇರಿ ಹಾಗೂ ಕಲ್ಲೇದೇವರು ಗ್ರಾಮಗಳ ಜಮೀನುಗಳಿಗೆ ಭೇಟಿ ನೀಡಿ, ರೈತರೊಂದಿಗೆ ಬೆಳೆ ಪರಿಸ್ಥಿತಿ ಕುರಿತು ಚರ್ಚಿಸಿದರು. ರೈತರ ಅಹವಾಲುಗಳನ್ನು ಆಲಿಸಿದ ಸಚಿವರು, ಬೆಳೆ ಪರಿಸ್ಥಿತಿ ಹಾಗೂ ರೈತರ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ, ಹಿರೇಕೆರೂರು ತಾಲೂಕಿನ ವಿವಿಧ ಗ್ರಾಮಗಳ ಕೆರೆ ವೀಕ್ಷಣೆ ಮಾಡಿದರು.