ಕನ್ನಡಪ್ರಭ ವಾರ್ತೆ ನಾಗಮಂಗಲ
ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗಲು ರಾಜ್ಯ ಬೀಜ ನಿಗಮದಿಂದ ಸ್ಮಾರ್ಟ್ ಕ್ಲಾಸ್ (ಡಿಜಿಟಲ್ ಬೋರ್ಡ್)ಗಳನ್ನು ಪೂರೈಸಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.ತಾಲೂಕಿನ ದೇವಲಾಪುರದ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯ ಬೀಜ ನಿಗಮದ ಸಿಎಸ್ಆರ್ ನಿಧಿಯಿಂದ ತಾಲೂಕಿನ 8 ಸರ್ಕಾರಿ ಪ್ರೌಢಶಾಲೆ ಹಾಗೂ ಎರಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ತಲಾ 1.25 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ (ಡಿಜಿಟಲ್ ಬೋರ್ಡ್)ಗಳನ್ನು ವಿತರಿಸಿ ಮಾತನಾಡಿದರು.
ಗ್ರಾಮೀಣ ವಿದ್ಯಾರ್ಥಿಗಳು ಸರ್ಕಾರದ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಗುಣಮಟ್ಟದ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಹೊರಹೊಮ್ಮಬೇಕು. ಇದಕ್ಕೆ ಪೂರಕವಾಗಿ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲಾಗುತ್ತಿದೆ ಎಂದರು.ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಬಹಳಷ್ಟು ಆವಿಷ್ಕಾರಗಳು ನಡೆಯುತ್ತಿವೆ. ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕ್ಲಾಸ್ ಮೂಲಕ ಪಾಠ ಪ್ರವಚನ ಕಲಿಸಿದರೆ ಶೈಕ್ಷಣಿಕವಾಗಿ ಮತ್ತಷ್ಟು ಪ್ರಗತಿ ಸಾಧಿಸಲು ಅನುಕೂಲವಾಗುತ್ತದೆಂಬ ಉದ್ದೇಶದಿಂದ ರಾಜ್ಯ ಬೀಜ ನಿಗಮದ ಸಿಎಸ್ಆರ್ ನಿಧಿಯಿಂದ ಆಯ್ದ 10 ಸರ್ಕಾರಿ ಶಾಲೆಗಳಿಗೆ ಡಿಜಿಟಲ್ ಬೋರ್ಡ್ಗಳನ್ನು ನೀಡಲಾಗುತ್ತಿದೆ ಎಂದರು.
ಮುಂದಿನ ವರ್ಷ ಮತ್ತಷ್ಟು ಶಾಲೆಗಳಿಗೆ ಈ ಸೌಲಭ್ಯ ಕಲ್ಪಿಸಲಾಗುವುದು. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಿಕ್ಷಕರು ತರಗತಿಗಳಲ್ಲಿ ಪಾಠ ಪ್ರವಚನಗಳ ಜೊತೆಗೆ ಒಳ್ಳೆಯ ಸಂಸ್ಕಾರವನ್ನೂ ಕಲಿಸಬೇಕು ಎಂದರು.ಇದೇ ವೇಳೆ ತಾಲೂಕಿನ ದೇವಲಾಪುರದ ಕರ್ನಾಟಕ ಪಬ್ಲಿಕ್ ಶಾಲೆ ಸೇರಿದಂತೆ ಬೋಗಾದಿ, ಹರದನಹಳ್ಳಿ, ಚಿಣ್ಯ, ಕೂಚಹಳ್ಳಿ, ಕರಡಹಳ್ಳಿ, ಕೆಂಬಾರೆ ಗ್ರಾಮಗಳ ಸರ್ಕಾರಿ ಪ್ರೌಢಶಾಲೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಉರ್ದು) ಮತ್ತು ಅಳೀಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಕ್ಲಾಸ್ (ಡಿಜಿಟಲ್ ಬೋರ್ಡ್)ಗಳನ್ನು ವಿತರಿಸಲಾಯಿತು.
ಈ ವೇಳೆ ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಜಿ.ಅನುಪ್, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ದೇವಲಾಪುರ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಎನ್.ಜೆ.ರಾಜೇಶ್, ಮನ್ಮುಲ್ ನಿರ್ದೇಶಕ ಅಪ್ಪಾಜಿಗೌಡ, ಜಂಟಿ ಕೃಷಿ ನಿರ್ದೇಶಕ ಅಶೋಕ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಯೋಗೇಶ್, ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಡಿ.ಕೆ.ಸುರೇಶ್, ಜಿಪಂ ಮಾಜಿ ಸದಸ್ಯ ಎಂ.ಹುಚ್ಚೇಗೌಡ, ಮುಖಂಡರಾದ ಮಾವಿನಕೆರೆ ಸುರೇಶ್, ಉದಯಕಿರಣ್, ಅಪ್ಪಾಜಿ, ಶಶಿಗೌಡ ಸೇರಿದಂತೆ ಹಲವರು ಇದ್ದರು.