ಎಸ್ಎಸ್ಎಲ್ಸಿ ಪರೀಕ್ಷೆಯು ಮಾರ್ಚ್ ೨೫ ರಿಂದ ಏಪ್ರಿಲ್ ೬ರವರೆಗೆ ಜಿಲ್ಲೆಯ ಒಟ್ಟು ೪೫ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಎಸ್ಎಸ್ಎಲ್ಸಿ ಪರೀಕ್ಷೆಯು ಮಾರ್ಚ್ ೨೫ ರಿಂದ ಏಪ್ರಿಲ್ ೬ರವರೆಗೆ ಜಿಲ್ಲೆಯ ಒಟ್ಟು ೪೫ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಚಾಮರಾಜನಗರ ತಾಲೂಕಿನ ೧೫, ಕೊಳ್ಳೇಗಾಲ ತಾಲೂಕಿನ ೮, ಗುಂಡ್ಲುಪೇಟೆ ತಾಲೂಕಿನಲ್ಲಿ ೯, ಯಳಂದೂರು ತಾಲೂಕಿನ ೪ ಹಾಗೂ ಹನೂರು ತಾಲೂಕಿನ ೯ ಸೇರಿದಂತೆ ಒಟ್ಟು ೪೫ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯವು ನ್ಯಾಯೋಚಿತವಾಗಿ ನಡೆಯಲೆಂಬ ಸದುದ್ದೇಶದಿಂದ, ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಲ ೨೦೦ ಮೀ. ವ್ಯಾಪ್ತಿಯ ಪ್ರದೇಶವನ್ನು ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ಕೇಂದ್ರದ ಸುತ್ತ ೨೦೦ ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ ೧೪೪ ರನ್ವಯ ಪರೀಕ್ಷಾ ದಿನಗಳಂದು ಬೆಳಗ್ಗೆ ೬ ರಿಂದ ಸಂಜೆ ೬ ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಅಲ್ಲದೇ ಸದರಿ ದಿನಗಳಂದು ಪರೀಕ್ಷಾ ಕೇಂದ್ರದ ೫೦೦ ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ ೭ ರಿಂದ ಸಂಜೆ ೫ ಗಂಟೆಯವರೆಗೆ ಮುಚ್ಚಲು ಸಹ ಆದೇಶಿಸಲಾಗಿದೆ.ನಿಷೇಧಾಜ್ಞೆ ಆದೇಶವು ಪರೀಕ್ಷೆ ಕೆಲಸಕ್ಕೆ ನಿಯೋಜಿತರಾದ ಅಧಿಕಾರಿ ಸಿಬ್ಬಂದಿ ವರ್ಗದವರಿಗೆ ಮತ್ತು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.