ಕನ್ನಡಪ್ರಭ ವಾರ್ತೆ ಬಳ್ಳಾರಿ
ರಾಜ್ಯದಲ್ಲಿ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಸಂಬಂಧ ಸಂವಿಧಾನ ಬದಲಿಸಲು ಸಿದ್ಧ ಎಂದು ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಇದು ಸಂವಿಧಾನ ವಿರೋಧಿ ಹೇಳಿಕೆ ಹಾಗೂ ಒಂದು ಸಮುದಾಯವನ್ನು ಓಲೈಕೆ ಮಾಡುವ ಹೇಳಿಕೆಯಾಗಿದೆ. ಡಿ.ಕೆ. ಶಿವಕುಮಾರ್ ಹೇಳಿಕೆಯಿಂದ ಕಾಂಗ್ರೆಸ್ ಅಧಿಕಾರಕ್ಕಾಗಿ ಎಂತಹ ನೀಚ ಕೆಲಸಕ್ಕಾದರೂ ಮುಂದಾಗುತ್ತದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಇದೇ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯಿಂದ ರಾಜ್ಯದ ಜನರು ರೋಸಿ ಹೋಗಿದ್ದಾರೆ. ರಾಜ್ಯದಲ್ಲಿ ಎಲ್ಲೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಅಧಿಕಾರಕ್ಕಾಗಿ ನಿರ್ದಿಷ್ಟ ಕೋಮಿನ ಓಲೈಕೆಗೆ ಕಾಂಗ್ರೆಸ್ ತನ್ನ ಇಡೀ ಅಧಿಕಾರವನ್ನು ಬಳಕೆ ಮಾಡಿಕೊಂಡಿದೆ. ಧರ್ಮಾಧಾರಿತ ಮೀಸಲಿಗೆ ಅವಕಾಶವಿಲ್ಲ ಎಂದು ಗೊತ್ತಿದ್ದರೂ ರಾಜ್ಯ ಸರ್ಕಾರ ಮುಸ್ಲಿಂ ಸಮಾಜದ ಓಟ್ ಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು ಶೇ.4ರಷ್ಟು ಮೀಸಲಾತಿಯನ್ನು ಜಾರಿಗೊಳಿಸಿದೆ ಎಂದು ತಿಳಿಸಿದರಲ್ಲದೆ, ಸರ್ಕಾರದ ಧೋರಣೆಯನ್ನು ಖಂಡಿಸಿ ಬಿಜೆಪಿ ಹೋರಾಟವನ್ನು ಮುಂದುವರಿಸಲಿದೆ. ರಾಜ್ಯ ಸರ್ಕಾರದ ಜನವಿರೋಧಿ ನಿಲುವುಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸವನ್ನು ಬಿಜೆಪಿ ರಾಜ್ಯಾದ್ಯಂತ ಮಾಡುತ್ತಿದೆ ಎಂದು ಹೇಳಿದರು.ಪಕ್ಷದ ಮುಖಂಡರಾದ ಎಚ್.ಹನುಮಂತಪ್ಪ, ಗೋವಿಂದರಾಜುಲು, ಗುಡಿಗಂಟಿ ಹನುಮಂತು, ಮಹೇಶ್ವರಸ್ವಾಮಿ, ರಾಜೇಶ್, ಪುಷ್ಪಲತಾ ಚಂದ್ರಶೇಖರ್, ಮಂಜುನಾಥ, ರಾಮಚಂದ್ರ, ಸುಮಾರೆಡ್ಡಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.