ಶಿವಮೊಗ್ಗ: ನಾಡು ಕಂಡ ಧೀಮಂತ ರಾಜಕಾರಣಿ, ಬಡವರ ಬಂಧು, ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು ಸೇರಿದಂತೆ ಎಲ್ಲಾ ವರ್ಗದವರ ಕ್ಷೇಯೋಭಿವೃದ್ಧಿಗೆ ಶ್ರಮಿಸಿದ ಜನಪರ ನಾಯಕ, ದಿಟ್ಟ ಹೋರಾಟಗಾರ, ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪನವರ ಪ್ರತಿಮೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಸ್ಥಾಪಿಸಬೇಕು ಎಂದು ಕೆಪಿಸಿಸಿ ಸಂಯೋಜಕ ಹಾಗೂ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಆಗ್ರಹಿಸಿದರು.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಸೌಲಭ್ಯವನ್ನು ಹೊಂದಿರುವ ಅತ್ಯುತ್ತಮ ಆಸ್ಪತ್ರೆಗಳಲ್ಲಿ ಮೆಗ್ಗಾನ್ ಆಸ್ಪತ್ರೆ ಸಹ ಒಂದಾಗಿದೆ. ಇದರಿಂದಾಗಿ ಜಿಲ್ಲೆಯಷ್ಟೇ ಅಲ್ಲ, ಬೇರೆ ಜಿಲ್ಲೆಗಳಿಂದಲೂ ರೋಗಿಗಳು ಚಿಕಿತ್ಸೆ ಪಡೆಯಲು ಇಲ್ಲಿಗೆ ಬರುತ್ತಿದ್ದಾರೆ. ಇಂತಹ ಆಸ್ಪತ್ರೆ ಸ್ಥಾಪನೆಗೆ ಅಡಿಗಲ್ಲು ಹಾಕಿದ ಕೀರ್ತಿ ಬಂಗಾರಪ್ಪನವರಿಗೆ ಸಲ್ಲುತ್ತದೆ. ಆದ್ದರಿಂದ ಈ ಆಸ್ಪತ್ರೆಯ ಆವರಣದಲ್ಲಿ ಅವರ ಪ್ರತಿಮೆ ಸ್ಥಾಪಿಸುವುದು ಸೂಕ್ತವಾಗಿದೆ ಎಂದರು.ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಹಿಂದೆ ಇಂಧನ ಸಚಿವರಾಗಿದ್ದಾಗ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ನಡೆದ ವಿದ್ಯುತ್ ವಿತರಣಾ ಘಟಕ ಉದ್ಘಾಟನಾ ಸಮಾರಂಭದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಇದುವರೆಗೂ ಈ ಆಶಯ ಈಡೇರಿಲ್ಲ. ಬಂಗಾರಪ್ಪನವರ ಮಗ ಮಧು ಬಂಗಾರಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಈ ಸಂದರ್ಭದಲ್ಲಿ ಬಂಗಾರಪ್ಪನವರ ಪ್ರತಿಮೆ ಸ್ಥಾಪಿಸಿದಲ್ಲಿ ಇದಕ್ಕೆ ಮತ್ತಷ್ಟು ಮಹತ್ವ ಬಂದಂತಾಗುತ್ತದೆ ಎಂದು ತಿಳಿಸಿದರು.ಜಿಲ್ಲೆಯ ಅಭಿವೃದ್ಧಿಯಲ್ಲಿ ಬಂಗಾರಪ್ಪನವರ ಪಾತ್ರ ಮಹತ್ವದ್ದಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಅವರು ಜಾರಿಗೊಳಿಸಿದ ಅಕ್ಷಯ, ಆಶ್ರಯ, ಆರಾಧನಾ ಮತ್ತಿತರೆ ಜನಪರ ಯೋಜನೆಗಳು ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿವೆ. ರೈತರ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ಪೂರೈಕೆ, ಗಾಜನೂರಿನಿಂದ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆ ಯೋಜನೆ ಅಸ್ತು ಸೇರಿದಂತೆ ಅನೇಕಾನೇಕ ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳು ನಡೆದಿವೆ ಎಂದರು.ಸಾರ್ವಜನಿಕ ಬದುಕಿನಲ್ಲಿ ಆದರ್ಶರೆನಿಸಿಕೊಂಡವರ ಪ್ರತಿಮೆ ಸ್ಥಾಪಿಸಿ ಗೌರವ ಸಲ್ಲಿಸುವ ರೂಢಿ ಇದೆ. ಅಂತೆಯೇ ಬಂಗಾರಪ್ಪನವರ ಪ್ರತಿಮೆ ಸ್ಥಾಪಿಸಿದಲ್ಲಿ ಮಹತ್ವ ಬರುತ್ತದೆ ಎಂದು ಪ್ರತಿಪಾದಿಸಿದರು.ನಂತರ ಈ ಸಂಬಂಧ ಜಿಲ್ಲಾಧಿಕಾರಿಯವರ ಮುಖಾಂತರ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಆರೋಗ್ಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.ಸುದ್ದಿಗೋಷ್ಠಿಯಲ್ಲಿ ಕಾರಾಗೃಹ ಸಮಿತಿಯ ಮಾಜಿ ನಿರ್ದೇಶಕ ಚಿಕ್ಕಮರಡಿ ಗಣೇಶ್, ಯಲವಟ್ಟಿ ವಿಜಯ ಕುಮಾರ್, ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಸಿದ್ದಪ್ಪ, ಗಂಗಾಮತ ಸಮಾಜದ ಮುಖಂಡ ಹನುಮೇಶ್, ಅಸಂಘಟಿತ ಕಾರ್ಮಿಕರ ಸಂಘದ ನಗರಾಧ್ಯಕ್ಷ ರಮೇಶ್, ದೇವೇಂದ್ರಪ್ಪ, ಲೋಕೇಶ್, ಮಣಿಕಂಠ, ತಮಿಳು ಸಮಾಜದ ಮುಖಂಡ ರಾಜು ಮೊದಲಿಯಾರ್, ಲಕ್ಷಾಧಿ, ಗುಡದಕೊಪ್ಪ ಮಂಜುನಾಥ್, ಶೆಟ್ಟಿಹಳ್ಳಿ ಮಹೇಶ್, ಭದ್ರಾವತಿ ಶರತ್, ತೀರ್ಥಹಳ್ಳಿ ಸಂಜಯ್ ಮತ್ತಿತರರು ಉಪಸ್ಥಿತರಿದ್ದರು.