ಕನ್ನಡಪ್ರಭ ವಾರ್ತೆ ಮೈಸೂರುನಾಡಪ್ರಭು ಕೆಂಪೇಗೌಡರು ಕೇವಲ ಒಕ್ಕಲಿಗ ಸಮುದಾಯಕ್ಕೆ ಸೀಮಿತವಾಗದೆ ಇಡೀ ಮನುಕುಲದ ಉದ್ದಾರಕರಾಗಿದ್ದಾರೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.ಮೈಸೂರು ತಾಲೂಕಿನ ಲಲಿತಾದ್ರಿಪುರದಲ್ಲಿ ಮಂಗಳವಾರ ಶ್ರೀ ಒಕ್ಕಲಿಗ ಕ್ಷೇಮಾಭಿವೃದ್ಧಿ ಸಂಘವು ಸ್ಥಾಪಿಸಿರುವ ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಒಕ್ಕಲಿಗ ಸಮುದಾಯದಲ್ಲಿ ಹುಟ್ಟಿದರು. ಆದರೆ, ಆಡಳಿತ ನಡೆಸುವಾಗ ಎಲ್ಲಾ ಜನಾಂಗದವರನ್ನು ಒಟ್ಟಿಗೆ ಸೇರಿಸಿಕೊಂಡು ಬೆಂಗಳೂರು ನಗರ ಕಟ್ಟಿದರು ಎಂದರು.ಚಾಮರಾಜ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಮಾತನಾಡಿ, ಕೆಂಪೇಗೌಡರ ಪ್ರತಿಮೆಯನ್ನು ಪ್ರತಿಯೊಂದು ಗ್ರಾಮದಲ್ಲೂ ಸ್ಥಾಪಿಸಬೇಕು ಎಂಬುದು ನನ್ನ ಆಸೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ನಾನು ಮಾದರಿಯಾಗಿ ಇಟ್ಟುಕೊಂಡಿದ್ದೇನೆ. ಕೆಂಪೇಗೌಡರು, ಕುವೆಂಪು ಮತ್ತು ಎಚ್.ಡಿ. ದೇವೇಗೌಡರ ಬಗ್ಗೆ ಹೆಚ್ಚು ಪ್ರಚಾರ ಮಾಡಬೇಕು ಎಂದು ಹೇಳಿದರು.ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ. ಹರೀಶ್ ಗೌಡ ಮಾತನಾಡಿ, ಕೆಂಪೇಗೌಡರು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದರು. ಬೆಂಗಳೂರಿನಂತಹ ಬೃಹತ್ ನಗರವನ್ನು ಕಟ್ಟಿದರು. ಈ ನಾಡಿಗೆ ಎಚ್.ಡಿ. ದೇವೇಗೌಡರ ಕೊಡುಗೆಯೂ ಅಪಾರ. ಕೆಂಪೇಗೌಡರ ನಂತರ ದೇವೇಗೌಡ, ಎಸ್.ಎಂ. ಕೃಷ್ಣ, ಎಚ್.ಡಿ. ಕುಮಾರಸ್ವಾಮಿ ಅವರು ಅತಿ ಹೆಚ್ಚು ಕೊಡುಗೆ ನೀಡಿದ್ದಾರೆ. ಲಲಿತಾದ್ರಿಪುರ ಗ್ರಾಮಸ್ಥರೆಲ್ಲರೂ ಸೇರಿಕೊಂಡು ಯಾರ ಬಳಿಯೂ ಹಣ ಕೇಳದೇ ತಾವೇ ಮುಂದೆ ಬಂದು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿರುವುದು ಶ್ಲಾಘನಿಯ ಎಂದರು.ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ಮಾಜಿ ಸಚಿವ ಸಾ.ರಾ. ಮಹೇಶ್, ಮಾಜಿ ಶಾಸಕ ಎಂ. ಅಶ್ವಿನ್ ಕುಮಾರ್, ಮಾಜಿ ಮೇಯರ್ ಎಂ.ಜೆ. ರವಿಕುಮಾರ್, ನಗರ ಪಾಲಿಕೆ ಮಾಜಿ ಸದಸ್ಯರಾದ ಕೆ.ವಿ. ಶ್ರೀಧರ್, ಎಸ್.ಬಿ.ಎಂ. ಮಂಜು, ಮೈಮುಲ್ ಮಾಜಿ ಅಧ್ಯಕ್ಷ ಪ್ರಸನ್ನ ಮೊದಲಾದವರು ಇದ್ದರು.----ಬಾಕ್ಸ್...ನಮಗೆ ಕೆಂಪೇಗೌಡರೇ ಮೇಲ್ಪಂಕ್ತಿ- ನಿಖಿಲ್ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ಫಲವಾಗಿ ಬೆಂಗಳೂರು ನಗರ ನಿರ್ಮಾಣ ಆಯಿತು. ಅಂದಿನ ಕಾಲಘಟ್ಟದಲ್ಲಿ ಕೆರೆ ಕಟ್ಟೆಗಳನ್ನು ಕಟ್ಟುವ ಮೂಲಕ ನೀರಿನ ಸಂರಕ್ಷಣೆಗೆ ಮುನ್ನುಡಿ ಬರೆದರು. ನಮಗೆ ಕೆಂಪೇಗೌಡರು ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.ಕೇವಲ ಅಧಿಕಾರಕ್ಕೋಸ್ಕರ ರಾಜಕಾಣರಕ್ಕೆ ಬರಬಾರದು. ಸೇವಾ ಮನೋಭಾವ ಇರಬೇಕು. ಜನರು ನನ್ನ ಮೇಲೆ ತೋರಿಸುತ್ತಿರುವ ಪ್ರೀತಿಗೆ ನಾನು ಚಿರಋಣಿಯಾಗಿರುತ್ತೇನೆ. ಅಧಿಕಾರ ಯಾರಿಗೂ ಶಾಶ್ವತವಲ್ಲ. ಆಯಾ ಕಾಲ ಘಟ್ಟಕ್ಕೆ ತಕ್ಕಂತೆ ಅಧಿಕಾರ ಬದಲಾಗುತ್ತದೆ. ಚಾಮುಂಡೇಶ್ವರಿ ಭಕ್ತನಾಗಿ ಒಂದು ಮಾತನ್ನು ಹೇಳುತ್ತೇನೆ. ನೆನೆಗುದಿಗೆ ಬಿದ್ದಿರುವ ಸಮುದಾಯ ಭವನದ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ಪ್ರೀತಿಯನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.